ಬೆಂಗಳೂರು, ಡಿ.12- ನಾಡಿನ ಸುಪ್ರಸಿದ್ದ ದೇವಾಲಯವಾದ ಮೈಸೂರು ಜಿಲ್ಲೆಯ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಮತ್ತು ಸಮೂಹ ದೇವಾಲಯಗಳ ನೌಕರರು ಇದೇ 14ರಿಂದ ನಡೆಸಲು ಉದ್ದೇಶಿಸಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ದೇವಾಲಯಗಳ ಅರ್ಚಕರ ಮತ್ತು ಆಗಮಿಕರ ಸಂಘ ಬೆಂಬಲ ಸೂಚಿಸಿದೆ.
ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರ ಕುಂದು-ಕೊರತೆ ಮತ್ತು ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ಮುಖ್ಯಮಂತ್ರಿಗಳಿಗೆ, ಮುಜರಾಯಿ ಸಚಿವರಿಗೆ ಹಾಗೂ ಜಿಲ್ಲಾ ಪ್ರತಿನಿಧಿಗಳಿಗೆ ಮತ್ತು ಇಲಾಖಾ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಸಲ್ಲಿಸಲಾಗಿತ್ತು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿಲ್ಲವಾದ ಕಾರಣ, ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಮತ್ತು ಸಮೂಹ ದೇವಾಲಯಗಳ ನೌಕರರು ಡಿ.14 ರಿಂದ ನಡೆಸಲು ಉದ್ದೇಶಿಸಿರುವ ಅನಿರ್ದಿಷ್ಟ ಅವಧಿ ಮುಷ್ಕರ ನಡೆಸಲು ತೀರ್ಮಾನಿಸಿದ್ದು, ಈ ಮುಷ್ಕರಕ್ಕೆ ಸಂಘದ ವತಿಯಿಂದ ಪೂರ್ಣ ಬೆಂಬಲವನ್ನು ನೀಡುತ್ತಿದ್ದೇವೆ. ನೌಕರರ ಬೇಡಿಕೆಗಳು ಮುಂದಿನ ದಿನಗಳಲ್ಲಿ ಈಡೇರದಿದ್ದಲ್ಲಿ, ನಮ್ಮ ಸಂಘವೂ ಸಹ ಮುಂದಿನ ದಿನಗಳಲ್ಲಿ ಮುಷ್ಕರ ನಡೆಸುವುದಾಗಿ ಸಂಘದ ರಾಜ್ಯಾಧ್ಯಕ್ಷ ಡಾ.ಜಾನಕಿರಾಮ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.