ರೈತರ ಸಾಲಮನ್ನಾ ಘೋಷಿಸಿದ ಮಧ್ಯಪ್ರದೇಶ ನೂತನ ಸಿಎಂ

ಭೂಪಾಲ್: ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ ಕಮಲ್ ನಾಥ್ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಸಮಯದಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ತಮ್ಮ ಕಛೇರಿಗೆ ಆಗಮಿಸಿದ ಕಮಲ್ ನಾಥ್, ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾದುವುದಾಗಿ ಭರವಸೆ ನೀಡಿತ್ತು. ಅದರಂತೆ ಈಗ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಜನರಿಗೆ ನೀಡಿದ ಭರವಸೆಯಂತೆ ರೈತರ ಸಾಲ ಮನ್ನಾ ಮಾಡುವ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದರು.

ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕುಗಳಲ್ಲಿನ 2 ಲಕ್ಷ ರೂ. ವರೆಗಿನ ಮಾರ್ಚ್ 31ರವರೆಗಿನ ರೈತರ ಸಾಲ ಮನ್ನಾ ಮಾಡಲು ನೂತನ ಸಿಎಂ ಕಮಲ್ ನಾಥ್ ಸಹಿ ಹಾಕಿದ್ದಾರೆ.

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 2 ಲಕ್ಷ ರೂ. ವರೆಗಿನ ರೈತರ ಸಾಲಮನ್ನಾ ಮಾಡಲಾಗುವುದು ಹಾಗೂ ಯುವಜನಾಂಗಕ್ಕೆ ಉದ್ಯೋಗ ನೀಡುವುದಾಗಿ ಘೋಷಣೆ ಮಾಡಲಾಗಿತ್ತು.

ಈ ನಡುವೆ ಟ್ವೀಟ್ ಮಾಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಮಧ್ಯಪ್ರದೇಶದಲ್ಲಿ ರೈತರ ಸಾಲ ಮನ್ನಾ ಮಾಡಲಾಗಿದೆ. ಉಳಿದಂತೆ ರಾಜಸ್ತಾನ ಹಾಗೂ ಛತ್ತೀಸ್ ಗಡದಲ್ಲಿಯೂ ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Madhya Pradesh CM Kamal Nath announces farm loan waiver

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ