ಮುಖ್ಯಮಂತ್ರಿಗಳ ಕ್ಷಮೆ ಯಾಚನೆಗೆ ಒತ್ತಾಯಿಸಿ ಪ್ರತಿಭಟನೆ ಮುಂದುವರೆಸಿದ ಬಿಜೆಪಿ

ಬೆಳಗಾವಿ (ಸುವರ್ಣಸೌಧ), ಡಿ.21- ಪ್ರತಿಪಕ್ಷ ಬಿಜೆಪಿಯ ಮುಂದುವರಿದ ಪ್ರತಿಭಟನೆ, ಮುಖ್ಯಮಂತ್ರಿಗಳ ಕ್ಷಮೆ ಯಾಚನೆಗೆ ಒತ್ತಾಯ, ಮೇಲ್ಮನೆಯಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗೆ ಆಗ್ರಹ, ಗದ್ದಲ-ಕೋಲಾಹಲ, ಮಸೂದೆಗಳ ಅಂಗೀಕಾರದ ನಡುವೆ ಉಭಯ ಸದನಗಳ ಕಲಾಪವನ್ನು ಮುಂದೂಡಲಾಯಿತು.

ಬೆಳಗಾವಿಯಲ್ಲಿ 10 ದಿನಗಳ ಕಾಲ ನಡೆದ ಕಲಾಪಕ್ಕೆ ಪ್ರತಿಪಕ್ಷಗಳ ಗದ್ದಲ-ಗಲಾಟೆಯ ಮೂಲಕ ತೆರೆ ಬಿತ್ತು.ಈ ನಡುವೆ ಹಲವು ಮಹತ್ವದ ವಿಧೇಯಕಗಳಿಗೆ ಅಂಗೀಕಾರ ಪಡೆಯಲಾಯಿತು. ರೈತರ ಸಾಲಮನ್ನಾದ ಬಗ್ಗೆ ಸ್ಪಷ್ಟನೆಗೆ ಆಗ್ರಹಿಸಿ ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಯಡಿಯೂರಪ್ಪನವರನ್ನು ಕ್ಷಮೆ ಕೇಳಬೇಕೆಂದು ಒತ್ತಾಯಿಸಿ ವಿಧಾನಸಭೆಯಲ್ಲಿ ಪ್ರತಿಪಕ್ಷ ಬಿಜೆಪಿ ನಡೆಸುತ್ತಿದ್ದ ಪ್ರತಿಭಟನೆ ಇಂದು ಕೂಡ ಮುಂದುವರಿದಿತ್ತು.ಸದನದ ಬಾವಿಗಿಳಿದ ಬಿಜೆಪಿ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಲಾರಂಭಿಸಿದರು.

ರೈತರ ಸಾಲಮನ್ನಾದ ಬಗ್ಗೆ ಸ್ಪಷ್ಟ ವಿವರಣೆಗಳನ್ನು ನೀಡದೆ ಮೂಗಿಗೆ ತುಪ್ಪ ಸವರುವ ಕೆಲಸಗಳನ್ನು ಮಾಡುವುದು ಬೇಡ. ಪ್ರತಿಪಕ್ಷಗಳ ನಾಯಕರ ಬಗ್ಗೆ ಮುಖ್ಯಮಂತ್ರಿಗಳು ನೀಡಿದ ಹೇಳಿಕೆ ಬಗ್ಗೆ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದರಲ್ಲದೆ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಲಾರಂಭಿಸಿದರು.

ಬಿಜೆಪಿಯವರ ಈ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ ಆಡಳಿತಾರೂಢ ಜೆಡಿಎಸ್-ಕಾಂಗ್ರೆಸ್ ಸದಸ್ಯರು ಪ್ರತಿರೋಧ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಸದನದಲ್ಲಿ ಗದ್ದಲ-ಕೋಲಾಹಲ ಉಂಟಾಯಿತು.ಸದನದಲ್ಲಿ ಏನು ನಡೆಯುತ್ತಿದೆ ಎಂಬುದು ಕೇಳಿಸದಾಯಿತು.

ಸಭಾಧ್ಯಕ್ಷ ರಮೇಶ್‍ಕುಮಾರ್ ಅವರು ಧರಣಿ ಹಿಂತೆಗೆದುಕೊಳ್ಳುವಂತೆ ಮಾಡಿದ ಮನವಿಯನ್ನು ಪ್ರತಿಪಕ್ಷ ಬಿಜೆಪಿ ಮಾನ್ಯ ಮಾಡಲಿಲ್ಲ. ಪ್ರತಿಭಟನೆ ನಡುವೆಯೇ ಸಭಾಧ್ಯಕ್ಷ ರಮೇಶ್‍ಕುಮಾರ್ ಅವರು ಶಾಸನ ರಚನೆ ಕಲಾಪವನ್ನು ಕೈಗೆತ್ತಿಕೊಂಡರು.

ಧರಣಿ ಹಿಂತೆಗೆದುಕೊಳ್ಳುವಂತೆ ಸಭಾಧ್ಯಕ್ಷರು ಮಾಡಿದ ಮನವಿಯನ್ನು ಪ್ರತಿಪಕ್ಷ ಬಿಜೆಪಿ ಮಾನ್ಯ ಮಾಡಲಿಲ್ಲ. ಪ್ರತಿಭಟನೆ ನಡುವೆಯೇ ಸಭಾಧ್ಯಕ್ಷರು ಶಾಸನ ರಚನೆ ಕಲಾಪವನ್ನು ಕೈಗೆತ್ತಿಕೊಂಡರು. ಕೆಲವು ವಿಧೇಯಕಗಳನ್ನು ಕೂಡ ಅಂಗೀಕರಿಸಿದರು. ವಿಧಾನ ಪರಿಷತ್‍ನಿಂದ ಅಂಗೀಕಾರವಾದ ವಿಧೇಯಕಗಳನ್ನು ಮಂಡಿಸಿದರು.

10 ದಿನಗಳ ಕಾಲ ಕಲಾಪ ನಡೆದ ವಿವರಗಳನ್ನು ಸದನಕ್ಕೆ ನೀಡಿದರು.ಒಟ್ಟು 40 ಗಂಟೆ 45 ನಿಮಿಷ ಕಲಾಪ ನಡೆದಿದೆ.ಸದನ ನಡೆಯಲು ಸಹಕರಿಸಿದ ಮುಖ್ಯಮಂತ್ರಿಗಳು, ಪ್ರತಿಪಕ್ಷಗಳ ನಾಯಕರು, ಸಚೇತಕರು, ಎಲ್ಲ ಶಾಸಕರು, ಪೆÇಲೀಸ್ ಸಿಬ್ಬಂದಿ, ಅಧಿಕಾರಿ ವರ್ಗ ಸೇರಿದಂತೆ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿ ರಾಷ್ಟ್ರಗೀತೆಯೊಂದಿಗೆ ಅನಿರ್ದಿಷ್ಟಾವಧಿಗೆ ಕಲಾಪವನ್ನು ಮುಂದೂಡಿದರು.

ಇದಕ್ಕೂ ಮುನ್ನ ಪ್ರಶ್ನೋತ್ತರ ಹಾಗೂ ಗಮನ ಸೆಳೆಯುವ ಸೂಚನೆಗಳನ್ನು ಸದನದಲ್ಲಿ ಮಂಡಿಸಲಾಯಿತು.
ಮೇಲ್ಮನೆಯಲ್ಲೂ ಗದ್ದಲ: ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗೆ ಅವಕಾಶ ನೀಡುವಂತೆ ನಿನ್ನೆಯಿಂದ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಇಂದು ಕೂಡ ಮುಂದುವರಿಸಿದ್ದು, ಮೇಲ್ಮನೆಯಲ್ಲಿ ಗದ್ದಲ-ಕೋಲಾಹಲಕ್ಕೆ ಕಾರಣವಾಯಿತು.

ಪ್ರಶ್ನೋತ್ತರಗಳನ್ನು ಬದಿಗೊತ್ತಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕೆಂದು ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ನೇತೃತ್ವದಲ್ಲಿ ಪ್ರತಿಪಕ್ಷದ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ಮುಂದುವರಿಸಿದ್ದರು.

ಪ್ರಶ್ನೋತ್ತರ ಕಲಾಪದ ನಂತರ ಚರ್ಚೆ ಕೈಗೆತ್ತಿಕೊಳ್ಳೋಣ ಎಂದು ಸಭಾಪತಿ ಮಾಡಿದ ಮನವಿಯನ್ನು ಪರಿಗಣಿಸದ ಸದಸ್ಯರು ಧರಣಿ ಮುಂದುವರಿಸಿದ್ದರಿಂದ ಕೆಲಕಾಲ ಸದನವನ್ನು ಮುಂದೂಡಿದ್ದರು.ನಂತರ ಕಲಾಪ ಆರಂಭವಾದಾಗ ಪ್ರತಿಭಟನೆ ಮುಂದುವರಿದಿತ್ತು.ಪ್ರತಿಭಟನೆ, ಗದ್ದಲದ ನಡುವೆಯೇ ವಿಧಾನಸಭೆಯಿಂದ ಅಂಗೀಕಾರವಾದ ಹಲವು ಮಸೂದೆಗಳನ್ನು ವಿಧಾನ ಪರಿಷತ್‍ನಲ್ಲಿ ಅಂಗೀಕಾರ ಪಡೆಯಲಾಯಿತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ