ರಾಮಲಿಂಗಾರೆಡ್ಡಿ ಅವರಿಗೆ ಸಚಿವಸ್ಥಾನ ಕೈತಪ್ಪಿದ ಹಿನ್ನಲೆ, ಕಾಂಗ್ರೇಸ್ ಕಚೇರಿ ಮುಂದೆ ಅವರ ಬೆಂಬಲಿಗರಿಂದ ಪ್ರತಿಭಟನೆ

ಬೆಂಗಳೂರು, ಡಿ.22- ಕಾಂಗ್ರೆಸ್ ಹಿರಿಯ ಮುಖಂಡ ರಾಮಲಿಂಗಾರೆಡ್ಡಿ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆಯಲ್ಲಿ ಮಾಜಿ ಮೇಯರ್ ಮಂಜುನಾಥರೆಡ್ಡಿ ನೇತೃತ್ವದಲ್ಲಿ ಕಾಂಗ್ರೆಸ್ ಕಚೇರಿ ಎದುರು ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಏಳು ಬಾರಿ ಶಾಸಕರಾದ ಪಕ್ಷನಿಷ್ಠ, ಹಿರಿಯ ಮುಖಂಡರಾದ ರಾಮಲಿಂಗಾರೆಡ್ಡಿ ಅವರನ್ನು ಕಡೆಗಣಿಸಿರುವ ಹೈಕಮಾಂಡ್ ಕ್ರಮ ಖಂಡನೀಯ. ಅವರನ್ನು ಸಂಪುಟಕ್ಕಾದರೂ ತೆಗೆದುಕೊಳ್ಳಬೇಕು ಅಥವಾ ಪಕ್ಷದಲ್ಲಿ ಉನ್ನತ ಸ್ಥಾನವನ್ನಾದರೂ ನೀಡಬೇಕೆಂದು ಮಂಜುನಾಥರೆಡ್ಡಿ ಆಗ್ರಹಿಸಿದರು.

ಇಂದು ಸಂಜೆ ಚಾಲುಕ್ಯ ವೃತ್ತದಿಂದ ಬೈಕ್ ರ್ಯಾಲಿ ಮೂಲಕ ರಾಜಭವನಕ್ಕೆ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಅವರು ಹೇಳಿದರು.

ರಾಮಲಿಂಗಾರೆಡ್ಡಿ ಅವರ ಹಿರಿತನಕ್ಕೆ ಗೌರವ ನೀಡುತ್ತಿಲ್ಲ. ಬೆಂಗಳೂರು ಮಹಾನಗರದಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆಗೆ ತನ್ನದೇ ಆದ ಕೊಡುಗೆ ನೀಡಿರುವ ರೆಡ್ಡಿ ಅವರನ್ನು ಕಡೆಗಣಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಮುಂಬರುವ ಚುನಾವಣೆಗಳಲ್ಲಿ ಧಕ್ಕೆಯಾಗಲಿದೆ. ಇದನ್ನು ಪಕ್ಷ ಮನಗಂಡು ಸೂಕ್ತ ಸ್ಥಾನಮಾನ ನೀಡಬೇಕೆಂದು ಒತ್ತಾಯಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ