ಜ.11 ಮತ್ತು 12ರಂದು ದೆಹಲಿಯಲ್ಲಿ ನಡೆಯಲಿರುವ ಬಿಜೆಪಿಯ ರಾಷ್ಟ್ರೀಯ ಪರಿಷತ್ ಸಭೆ

ಬೆಂಗಳೂರು,ಜ.7-ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷವನ್ನು ಮತ್ತೆ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ತರಲು ಕೈಗೊಳ್ಳಬೇಕಾದ ಪೂರ್ವ ಸಿದ್ಧತೆಗಳ ಬಗ್ಗೆ ಚರ್ಚಿಸಲು ಇದೇ 11 ಮತ್ತು 12ರಂದು ನವದೆಹಲಿಯಲ್ಲಿ ಬಿಜೆಪಿಯ ಮಹತ್ವದ ರಾಷ್ಟ್ರೀಯ ಪರಿಷತ್ ಸಭೆ ನಡೆಯಲಿದೆ.

ನವದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ಶುಕ್ರವಾರದಿಂದ ಎರಡು ದಿನಗಳ ಕಾಲ ನಡೆಯಲಿರುವ ಈ ಸಭೆಗೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ಬಿಜೆಪಿ ಆಡಳಿತವಿರುವ ಮುಖ್ಯಮಂತ್ರಿಗಳು, ಎಲ್ಲ ರಾಜ್ಯದ ಬಿಜೆಪಿ ಘಟಕಗಳ ರಾಜ್ಯಾಧ್ಯಕ್ಷರು ಭಾಗವಹಿಸಲಿದ್ದಾರೆ.

ಇದರ ಜೊತೆಗೆ ಕೇಂದ್ರ ಸಚಿವರು, ಎಲ್ಲ ರಾಜ್ಯದ ಉಸ್ತುವಾರಿಗಳು, ಸಹ ಉಸ್ತುವಾರಿಗಳು, ಸಂಸದೀಯ ಮಂಡಳಿಯ ಸದಸ್ಯರು, ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾಧ್ಯಕ್ಷರು, ಸಂಸದರು, ರಾಜ್ಯಸಭಾ ಸದಸ್ಯರು, ಶಾಸಕರು, ವಿಧಾನಪರಿಷತ್ ಸದಸ್ಯರು, ಸಾಮಾಜಿಕ ಜಾಲತಾಣ ಮುಖ್ಯಸ್ಥರು, ಸಮನ್ವಯ ಅಧಿಕಾರಿಗಳು, ಪಕ್ಷದ ವಕ್ತಾರರು, ಸಹ ವಕ್ತಾರರು ಸೇರಿದಂತೆ ಸುಮಾರು 8ರಿಂದ 10 ಸಾವಿರ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಇದೇ ಮೊದಲ ಬಾರಿಗೆ ರಾಮಲೀಲಾ ಮೈದಾನದಲ್ಲಿ ಪರಿಷತ್ ಸಭೆ ನಡೆಯಲಿದ್ದು, ಕರ್ನಾಟಕದಿಂದ ಸುಮಾರು 480ರಿಂದ 500 ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಪರಿಷತ್ ಸಭೆಯನ್ನು ಉದ್ಘಾಟಿಸಲಿದ್ದಾರೆ. ಅಂದು ಮಹಾರಾಷ್ಟ್ರ, ಹರಿಯಾಣ, ಉತ್ತರಪ್ರದೇಶ ಸೇರಿದಂತೆ ಕೆಲವು ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ.

ಒಂದೆಡೆ ಕಾಂಗ್ರೆಸ್ ನೇತೃತ್ವದಲ್ಲಿ ಮಹಾಘಟ್ ಬಂಧನ್ ರಚನೆಯಾಗುತ್ತಿರುವುದು, ಮತ್ತೊಂದೆಡೆ ಪ್ರಾದೇಶಿಕ ಪಕ್ಷಗಳ ನೇತೃತ್ವದಲ್ಲಿ ಸಂಯುಕ್ತರಂಗ ರಚನೆಯಾಗುತ್ತಿರುವುದು, ಬಿಜೆಪಿಗೆ ಮೈತ್ರಿ ಪಕ್ಷಗಳೇ ಕೈ ಕೊಡುತ್ತಿರುವುದರಿಂದ ಲೋಕಸಭಾ ಮಹಾಸಮರಕ್ಕೆ ಪಕ್ಷವನ್ನು ಆತ್ಮಸ್ಥೈರ್ಯದಿಂದ ಎದುರಿಸಲು ಮೋದಿ ಮತ್ತು ಅಮಿತ್ ಷಾ ಕಾರ್ಯಕರ್ತರನ್ನು ಹುರಿದುಂಬಿಸಲಿದ್ದಾರೆ.

ಇತ್ತೀಚೆಗೆ ನಡೆದ ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಆಡಳಿತದಲ್ಲಿದ್ದ ಮಧ್ಯಪ್ರದೇಶ, ಛತ್ತೀಸ್‍ಘಡ ಮತ್ತು ರಾಜಸ್ಥಾನದಲ್ಲಿ ಪಕ್ಷಕ್ಕೆ ಸೋಲು ಉಂಟಾಗಿದ್ದರಿಂದ ಇದೀಗ ಬಿಜೆಪಿ ನಾಯಕರು ಲೋಕಸಮರಕ್ಕೆ ಹೊಸ ಕಾರ್ಯತಂತ್ರವನ್ನು ಹೆಣೆಯಲು ಮುಂದಾಗಿದ್ದಾರೆ.
ಮಹಾರಾಷ್ಟ್ರದಲ್ಲಿ ಶಿವಸೇನೆ ಮೈತ್ರಿ ಮಾಡಿಕೊಳ್ಳಲು ಮೀನಮೇಷ ಎಣಿಸುತ್ತಿದೆ.ಬಿಹಾರದಲ್ಲಿ ಆರ್‍ಎಸ್‍ಎಲ್‍ಪಿ ಕೈಕೊಟ್ಟರೂ ಎಲ್‍ಜೆಪಿ ಮತ್ತು ಜೆಡಿಯು ಕೈ ಹಿಡಿದಿರುವುದರಿಂದ ಸದ್ಯಕ್ಕೆ ಯಾವುದೇ ರೀತಿಯ ಸಮಸ್ಯೆ ಎದುರಾಗಿಲ್ಲ.

ಮಿತ್ರ ಪಕ್ಷಗಳನ್ನು ಉಳಿಸಿಕೊಳ್ಳುವುದರ ಜೊತೆಗೆ ಉತ್ತರಪ್ರದೇಶದಲ್ಲಿ ಬಿಎಸ್‍ಪಿ, ಎಸ್ಪಿ ಒಂದಾದರೆ ಪಕ್ಷಕ್ಕೆ ಆಗಬಹುದಾದ ಹಾನಿಯನ್ನು ಈಶಾನ್ಯ ಭಾರತ ಮತ್ತು ಮಧ್ಯಭಾರತ ರಾಜ್ಯಗಳಲ್ಲಿ ತುಂಬುವ ಲೆಕ್ಕಾಚಾರ ಕಮಲ ನಾಯಕರದ್ದು. ಹೀಗಾಗಿ ಪಶ್ಚಿಮ ಬಂಗಾಳ ಮತ್ತು ಒರಿಸ್ಸಾವನ್ನು ಹೆಚ್ಚು ಕೇಂದ್ರೀಕರಿಸಲು ಆರ್‍ಎಸ್‍ಎಸ್ ನಾಯಕರು ಸೂಚನೆ ಕೊಟ್ಟಿದ್ದಾರೆ.

ಏಪ್ರಿಲ್ ಅಥವಾ ಮೇ ತಿಂಗಳ ಮಧ್ಯಭಾಗದಲ್ಲಿ ಲೋಕಸಭಾ ಚುನಾವಣೆಗೆ ಮುಹೂರ್ತ ನಿಗದಿಯಾಗುವುದರಿಂದ ಚುನಾವಣೆಯನ್ನು ಎದುರಿಸಲು ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆಯೂ ಎಲ್ಲ ಪದಾಧಿಕಾರಿಗಳಿಗೆ ಸಲಹೆ ನೀಡಲಿದ್ದಾರೆ.

ಕಳೆದ ನಾಲ್ಕೂವರೆ ವರ್ಷಗಳ ಅವಧಿಯಲ್ಲಿ ಕೇಂದ್ರ ಸರ್ಕಾರ ಮಾಡಿರುವ ಸಾಧನೆಗಳನ್ನು ಜನರಿಗೆ ತಿಳಿ ಹೇಳುವುದು, ಭ್ರಷ್ಟಾಚಾರ ಮುಕ್ತ ಆಡಳಿತ, ವಿಶ್ವದಲ್ಲಿ ಭಾರತಕ್ಕೆ ಸಿಕ್ಕ ಜಾಗತಿಕ ಮನ್ನಣೆ, ನರೇಂದ್ರಮೋದಿ ಅವರಂತಹ ನಾಯಕರನ್ನು ಮತ್ತೆ ಅಧಿಕಾರಕ್ಕೆ ತರಲು ಪದಾಧಿಕಾರಿಗಳು ಮತದಾರರ ಬಳಿ ತೆರಳುವಂತೆ ಸೂಚನೆ ನೀಡಿದ್ದಾರೆ.
ಶನಿವಾರ ಸಂಜೆ ಪ್ರಧಾನಿಯವರು ಸಮಾರೋಪ ಸಮಾರಂಭದಲ್ಲಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ