ಪಕ್ಷದಲ್ಲಿ ಯಾರ ಮೇಲೂ ತಮಗೆ ಬೇಸರವಿಲ್ಲ ಎಂದು ಹೇಳಿದ ಮಧುಬಂಗಾರಪ್ಪ

ಬೆಂಗಳೂರು, ಜ.12-ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಶಾಸಕ ಮಧುಬಂಗಾರಪ್ಪ ಅವರು, ಇತ್ತೀಚೆಗೆ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ. ಆದರೆ ಪಕ್ಷದಲ್ಲಿ ತಮಗೆ ಯಾರ ಮೇಲೂ ಬೇಸರವಿಲ್ಲ. ಸಣ್ಣಪುಟ್ಟ ಸಮಸ್ಯೆ ಇದ್ದರೆ ಅದನ್ನು ಬಗೆಹರಿಸಿಕೊಳ್ಳುತ್ತೇವೆ. ನನಗೆ ಯಾವ ಜವಾಬ್ದಾರಿ ಕೊಡಬೇಕು ಎಂಬುದನ್ನು ವರಿಷ್ಠರೇ ತೀರ್ಮಾನಿಸುತ್ತಾರೆ ಎಂದರು.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಾವು ಸ್ಪರ್ಧೆ ಮಾಡಬೇಕೇ, ಬೇಡವೇ ಎಂಬ ಬಗ್ಗೆ ವರಿಷ್ಠರು ತೀರ್ಮಾನಿಸುತ್ತಾರೆ.ದೇವೇಗೌಡರ ನಿರ್ಧಾರಕ್ಕೆ ನಾನು ಬದ್ಧನಾಗಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಸಂಸದೀಯ ಕಾರ್ಯದರ್ಶಿ ಅಥವಾ ರಾಜಕೀಯ ಕಾರ್ಯದರ್ಶಿ ಹುದ್ದೆಯ ಆಕಾಂಕ್ಷಿ ನಾನಲ್ಲ. ಮುಖ್ಯಮಂತ್ರಿ ಕುಮಾರಸ್ವಾಮಿ ಸರ್ಕಾರ ಹಾಗೂ ಪಕ್ಷವನ್ನು ಮುನ್ನಡೆಸುತ್ತಿದ್ದಾರೆ.ಅವರು ಎಲ್ಲವನ್ನು ನಿಭಾಯಿಸುತ್ತಾರೆ ಎಂದು ತಿಳಿಸಿದರು.

ಪಕ್ಷ ಯಾವುದೇ ಜವಾಬ್ದಾರಿ ಕೊಟ್ಟರೂ ಅದನ್ನು ನಿರ್ವಹಿಸುವೆ. ಪಕ್ಷದಲ್ಲಿ ಸದಾ ಮುಂಚೂಣಿಯಲ್ಲಿರಲು ಪ್ರಯತ್ನಿಸುತ್ತೇನೆ. ನಾನು ಸೋತಾಗಲೂ ಪಕ್ಷ ನನ್ನನ್ನು ಮುಂಚೂಣಿಯಲ್ಲಿರಿಸಿದೆ ಎಂದ ಅವರು, ನನಗೆ ದೇವೇಗೌಡರು ಪತ್ರ ಬರೆಯುವಷ್ಟು ನಾನು ದೊಡ್ಡವನಲ್ಲ. ಅವರು ನನಗೆ ಮಾರ್ಗದರ್ಶನ ನೀಡುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದೆ. ಆದರೂ ಆ ಚುನಾವಣೆಯಲ್ಲಿ ಪ್ರತಿಸ್ಪರ್ಧಿಗೆ ಪ್ರಬಲ ಪೈಪೋಟಿ ನೀಡಿದ್ದೆ. ಮೈತ್ರಿ ಸರ್ಕಾರದ ತೀರ್ಮಾನದಂತೆ ಸ್ಪರ್ಧೆ ಮಾಡಿದ್ದೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ