ಮೈತ್ರಿ ಸರ್ಕಾರ ಸುಭದ್ರವಾಗಿದೆ ಮಾಜಿ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು, ಜ.14- ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಸುಭದ್ರವಾಗಿರುತ್ತದೆ.ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ರಾಮಲಿಂಗಾರೆಡ್ಡಿ ಇಂದಿಲ್ಲಿ ಹೇಳಿದರು.

ಇದೇ 18ರಂದು ನಗರದ ಅರಮನೆ ಮೈದಾನದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ನೇಮಕವಾಗಿರುವ ಎಚ್.ಕೆ.ಪಾಟೀಲ್ ಅವರ ಪದಗ್ರಹಣ ಸಮಾರಂಭದ ಅಂಗವಾಗಿ ಬೆಂಗಳೂರು ನಗರ ಜಿಲ್ಲಾ ಪ್ರಚಾರ ಸಮಿತಿ ವತಿಯಿಂದ ಏರ್ಪಡಿಸಿದ್ದ ಪೂರ್ವಭಾವಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಒಗ್ಗಟ್ಟಾಗಿ ಹೋರಾಟ ಮಾಡಿದರೆ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಸಾಧ್ಯವಿದೆ. ಲೋಕಸಭೆ ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ.ಬೆಂಗಳೂರು ಮಹಾನಗರದಲ್ಲಿ ಮೂರು ಸ್ಥಾನಗಳನ್ನು ಗೆಲ್ಲಲು ಪಕ್ಷವನ್ನು ಬಲವಾಗಿ ಸಂಘಟಿಸಬೇಕು ಎಂದು ಅವರು ಹೇಳಿದರು.

ಎಚ್.ಕೆ.ಪಾಟೀಲ್ ಅವರು ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದಾರೆ. ಪಕ್ಷದ ಕಾರ್ಯಕ್ರಮಗಳ ಜತೆ ಸರ್ಕಾರದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಪ್ರಚಾರ ಮಾಡುವುದರ ಜತೆಗೆ ಜನಪರ ಪ್ರಣಾಳಿಕೆ ರೂಪಿಸಿ ಜನಮನ್ನಣೆ ಗಳಿಸಿ ಹೆಚ್ಚು ಸ್ಥಾನಗಳನ್ನು ಗಳಿಸಬೇಕೆಂದು ಅವರು ಹೇಳಿದರು.
ಹಿರಿಯ ಮುಖಂಡರಾದ ನಂಜಯ್ಯನಮಠ್, ಸಮಿತಿ ಅಧ್ಯಕ್ಷ ಜಿ.ಜನಾರ್ದನ್, ಎಸ್.ಮನೋಹರ್, ಸಲೀಂ, ರಾಮಕೃಷ್ಣ, ಆನಂದ್, ಹೇಮರಾಜ್ ಮುಂತಾದವರು ಪಾಲ್ಗೊಂಡಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ