ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ರಥಯಾತ್ರೆಗೆ ಸುಪ್ರೀಂ ಅನುಮತಿ

ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸರ್ಕಾರ ಬಿಜೆಪಿಯ ಪ್ರಸ್ತಾವಿತ ರ್ಯಾಲಿ ಹಾಗೂ ಸಾರ್ವಜನಿಕ ಸಭೆ – ಗಣತಂತ್ರ ಬಚಾವೋ ಯಾತ್ರಾಗೆ ಅನುಮತಿ ನೀಡಬೇಕೆಂದು ಸುಪ್ರೀಂ ಕೋರ್ಟ್ ಸೂಚಿಸಿದೆ.

ಈ ಮೂಲಕ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಭಾರೀ ಹಿನ್ನಡೆಯಾದಂತಾಗಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಪೀಠವು ಬಿಜೆಪಿಯ ಪಶ್ಚಿಮ ಬಂಗಾಳ ಘಟಕ ತನ್ನ ಪ್ರಸ್ತಾವಿತ “ರಥಯಾತ್ರೆ”ಯ ಪರಿಷ್ಕೃತ ವೇಳಾಪಟ್ಟಿಯನ್ನು ಅಧಿಕಾರಿಗಳಿಗೆ ಸಲ್ಲಿಸಲು ಮತ್ತು ಅಗತ್ಯ ಅನುಮೋದನೆಗಳನ್ನು ಪಡೆದುಕೊಳ್ಳಲು ಸೂಚಿಸಿದೆ.

ನ್ಯಾಯಮೂರ್ತಿಗಳಾದ ಎಲ್. ಎನ್.ರಾವ್ ಮತ್ತು ಎಸ್.ಕೆ. ಕೌಲ್ ಅವರನ್ನೂ ಒಳಗೊಂಡ ನ್ಯಾಯಪೀಠ ಸಂವಿಧಾನದ ಅಡಿಯಲ್ಲಿ ಬರುವ ಅಭಿವ್ಯಕ್ತಿ ಸ್ವಾತಂತ್ರದ ತಳಹದಿಯೊಂದಿಗೆ ಭಾಷಣ ಹಾಗೂ ರಥಯಾತ್ರೆಗೆ ಪಶ್ಚಿಮ ಬಂಗಾಳ ಸರ್ಕಾರ ಅನುಮತಿ ನೀಡಬೇಕೆಂದು ಹೇಳಿದೆ.

ಇದೇ ವೇಳೆ ರಾಜ್ಯ ಸರ್ಕಾರ ವಾದಿಸಿರುವಂತೆ ರಥಯಾತ್ರೆ ನಡೆದರೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಲಿದೆ ಎನ್ನುವುದು ಸಹ ಆಧಾರರಹಿತವಾದದ್ದಲ್ಲ ಎಂದಿರುವ ಕೋರ್ಟ್ ಯಾವುದೇ ಕಾರಣಕ್ಕೆ ಸಮಾಜದಲ್ಲಿ ಶಾಂತಿ ಕದಡದಂತೆ, ಎಲ್ಲಿಯೂ ಕಾನೂನು ಸುವ್ಯವಸ್ಥೆ ಹಾಳಾಗದಂತೆ ಬಿಜೆಪಿ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ತಿಳಿಸಿದೆ.

BJP Rath Yatra, West Bengal, SC allows

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ