ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ದತ್ತ

ಬೆಂಗಳೂರು,ಜ.19-ಇತ್ತೀಚೆಗೆ ಜೆಡಿಎಸ್ ಕಚೇರಿಯಲ್ಲಿ ನಡೆದ ಸಮಾವೇಶವೊಂದರಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ದತ್ತ ಅವರನ್ನು ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದಾಗಿ ಪ್ರಕಟಿಸಿದ್ದರು.

ಜೆಪಿಭವನದಲ್ಲಿ ಜ.23ರಂದು ನಡೆಯುವ ಕಾರ್ಯಕ್ರಮದಲ್ಲಿ ದತ್ತ ಅವರು ವಿದ್ಯುಕ್ತವಾಗಿ ಪಕ್ಷದ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ.ದೇವೇಗೌಡರು, ರಾಜ್ಯಾಧ್ಯಕ್ಷರಾದ ಅಡಗೂರು ಎಚ್.ವಿಶ್ವನಾಥ್ ಸೇರಿದಂತೆ ಪಕ್ಷದ ಹಲವು ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದತ್ತ ಅವರಿಗೆ ಜೆಡಿಎಸ್ ಪಕ್ಷದ ಪ್ರಚಾರದ ಹೊಣೆಗಾರಿಕೆಯನ್ನು ನೀಡಲಾಗಿದೆ. ದತ್ತ ಅವರು ಜೆಡಿಎಸ್ ಪಕ್ಷದ ನಿಷ್ಠಾವಂತ ಮುಖಂಡರಾಗಿದ್ದು, ಪಕ್ಷ ಸಂಘಟನೆಗೆ ಒತ್ತು ನೀಡುತ್ತಾ ಬಂದಿದ್ದಾರೆ. ಅಲ್ಲದೆ ಪಕ್ಷದ ಕಾರ್ಯಕರ್ತರು, ಮುಖಂಡರಿಗೂ ಚಿರಪರಿಚಿತರಾಗಿದ್ದು, ಸಮನ್ವಯತೆ ಕಾಪಾಡಿಕೊಳ್ಳಲಿದ್ದಾರೆ ಎಂಬ ವಿಶ್ವಾಸ ವರಿಷ್ಠರಿಗಿದೆ.

ಈಗಾಗಲೇ ದತ್ತ ಅವರು ಪಕ್ಷದ ವಕ್ತಾರರಾಗಿ ಕಡೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿ, ವಿಧಾನಪರಿಷತ್ ಸದಸ್ಯರಾಗಿ ಕಾರ್ಯ ನಿರ್ವಹಿಸಿರುವ ಅನುಭವ ಹೊಂದಿದ್ದಾರೆ.
ಈ ನಿಟ್ಟಿನಲ್ಲಿ ವೈ.ಎಸ್.ವಿ.ದತ್ತ ಅವರಿಗೆ ಪ್ರಚಾರ ಸಮಿತಿಯ ಮಹತ್ವದ ಜವಾಬ್ದಾರಿಯನ್ನು ನೀಡಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ