ಶ್ರೀಗಳ ಹುಟ್ಟೂರಾದ ವೀರಾಪುರ ಗ್ರಾಮವನ್ನು ದತ್ತು ತೆಗೆದುಕೊಳ್ಳುವುದಾಗಿ ಹೇಳಿದ ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಜ.22-ಸಿದ್ದಗಂಗಾ ಶ್ರೀಗಳ ಹುಟ್ಟೂರಾದ ವೀರಾಪುರ ಗ್ರಾಮವನ್ನು ದತ್ತು ತೆಗೆದುಕೊಂಡು ಅಭಿವೃದ್ಧಿ ಪಡಿಸುವುದಾಗಿ ಜಲಸಂಪನ್ಮೂಲ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ.

ರಾಮನಗರ ಜಿಲ್ಲೆ, ಮಾಗಡಿ ತಾಲೂಕು, ಕುದೂರು ಹೋಬಳಿಯಲ್ಲಿರುವ ವೀರಾಪುರ ಗ್ರಾಮ ಅಭಿವೃದ್ಧಿಯಲ್ಲಿ ಹಿಂದುಳಿದಿದೆ.ರಸ್ತೆ, ಕುಡಿಯುವ ನೀರು ಸೇರಿದಂತೆ ವಿವಿಧ ಮೂಲಸೌಕರ್ಯಗಳ ಕೊರತೆಯಿದ್ದು, ಅದನ್ನು ಬಗೆಹರಿಸಲು ಡಿ.ಕೆ.ಶಿವಕುಮಾರ್ ಮುಂದಾಗಿದ್ದಾರೆ ಎನ್ನಲಾಗಿದೆ.

ಶ್ರೀ ಡಾ.ಶಿವಕುಮಾರಸ್ವಾಮೀಜಿಗಳು ಪೂರ್ವಾಶ್ರಮದಲ್ಲಿ ಇದೇ ಊರಿನಲ್ಲಿ ಹುಟ್ಟಿ ಬೆಳೆದಿದ್ದರು.ಸನ್ಯಾಸ ದೀಕ್ಷೆ ಸ್ವೀಕರಿಸಿದ ನಂತರ ಭವ-ಬಂಧನಗಳಿಗೆ ಜೋತು ಬೀಳದೆ ಬಂಧುಗಳು, ಸ್ವಗ್ರಾಮ ಎಂಬ ವ್ಯಾಮೋಹದಿಂದ ಮುಕ್ತರಾಗಿದ್ದರು. ವೀರಾಪುರ ಗ್ರಾಮದ ಪ್ರವೇಶದಲ್ಲೇ ಡಾ.ಶ್ರೀ ಶಿವಕುಮಾರಸ್ವಾಮೀಜಿಗಳ ಜನ್ಮಸ್ಥಳ ವೀರಾಪುರದ ಮಹಾದ್ವಾರ ನಾಮಫಲಕ ಅಳವಡಿಸಲಾಗಿದೆ.

ಡಿ.ಕೆ.ಶಿವಕುಮಾರ್ ಅವರು ರಾಮನಗರ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದು, ಇಡೀ ಗ್ರಾಮವನ್ನು ದತ್ತು ತೆಗೆದುಕೊಂಡು ಸಮಗ್ರವಾಗಿ ಅಭಿವೃದ್ಧಿ ಪಡಿಸುವುದಾಗಿ ಹೇಳಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ