ಬೆಂಕಿ ಕಾಣಿಸಿಕೊಂಡ ಹಿನ್ನಲೆ ವರ್ತೂರು ಕೆರೆಗೆ ಬಿಬಿಎಂಪಿಯಿಂದ ಸೂಕ್ತ ಭದ್ರತೆ

ಬೆಂಗಳೂರು, ಜ.24- ವರ್ತೂರು ಕೆರೆಗೆ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೆರೆಗೆ ಸೂಕ್ತ ಭದ್ರತೆ ಒದಗಿಸಲು ಮುಂದಾಗಿರುವ ಬಿಬಿಎಂಪಿ 21 ಮಾರ್ಷಲ್‍ಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಿದೆ.

ಕೆರೆಯ ಸುತ್ತಮುತ್ತ ಹಗಲು-ರಾತ್ರಿ ತೀವ್ರ ನಿಗಾ ವಹಿಸಲು 21 ಮಾರ್ಷಲ್‍ಗಳನ್ನು ನೇಮಕ ಮಾಡುವ ಪ್ರಸ್ತಾಪವನ್ನು ಬಿಬಿಎಂಪಿ ಈಗಾಗಲೇ ಸರ್ಕಾರಕ್ಕೆ ಕಳುಹಿಸಿದೆ.ಸರ್ಕಾರ ಸಮ್ಮತಿ ನೀಡಿದ ಕೂಡಲೇ ಮಾರ್ಷಲ್‍ಗಳ ನೇಮಕ ಮಾಡಿಕೊಳ್ಳುತ್ತೇವೆ ಎಂದು ಪಾಲಿಕೆ ಆಯುಕ್ತರಾದ ಮಂಜುನಾಥ್ ಪ್ರಸಾದ್ ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಹಾಕುವುದನ್ನು ನಿಯಂತ್ರಿಸಲು ಮಾರ್ಷಲ್‍ಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಮಾರ್ಷಲ್‍ಗಳ ನೇಮಕದಿಂದ ನಗರದಲ್ಲಿ ಎಲ್ಲೆಂದರಲ್ಲಿ ಕಸ ಬೀಳುವುದು ನಿಯಂತ್ರಣವಾಗಿತ್ತು. ವರ್ತೂರು ಕೆರೆಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿರುವುದಕ್ಕೆ ಹಲವಾರು ಕಾರಣಗಳಿವೆ. ಕೆರೆಯ ನೀರಿಗೆ ರಾಸಾಯನಿಕ ಮಿಶ್ರಣ ಬರುತ್ತಿರುವುದರಿಂದ ಬೆಂಕಿ ಕಾಣಿಸಿಕೊಳ್ಳುತ್ತಿದೆ ಎಂದು ಹೇಳಲಾಗುತ್ತಿದೆ.

ಆದರೆ, ಇತ್ತೀಚಿನ ಬೆಳವಣಿಗೆಯಲ್ಲಿ ಕೆಲವು ಕಿಡಿಗೇಡಿಗಳು ಬಿಬಿಎಂಪಿಗೆ ಕೆಟ್ಟ ಹೆಸರು ತರಲು ಈ ದುಷ್ಕøತ್ಯ ನಡೆಸಿದ್ದಾರೆ ಎಂಬ ವಿಷಯ ಮಾಧ್ಯಮಗಳಲ್ಲಿ ಬಹಿರಂಗವಾಗಿತ್ತು.ಕೆರೆಯ ರಕ್ಷಣೆ ಹಿನ್ನೆಲೆಯಲ್ಲಿ ಮಾರ್ಷಲ್‍ಗಳನ್ನು ನೇಮಕ ಮಾಡಿಕೊಳ್ಳುವುದು ಸೂಕ್ತ ಎಂಬ ತೀರ್ಮಾನಕ್ಕೆ ಬಂದ ಬಿಬಿಎಂಪಿ ಈ ಪ್ರಸ್ತಾಪವನ್ನು ಸರ್ಕಾರಕ್ಕೆ ಕಳುಹಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ