ನಾಳೆ ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿರುವ ರಾಜ್ಯಪಾಲರು

ಬೆಂಗಳೂರು, ಫೆ.5- ಒಂದೆಡೆ ಆಪರೇಷನ್ ಕಮಲದ ಮೂಲಕ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರತಿಪಕ್ಷ ಬಿಜೆಪಿ ಸತತ ಪ್ರಯತ್ನ ನಡೆಸುತ್ತಿರುವ ಬೆನ್ನಲ್ಲೇ ನಾಳೆಯಿಂದ ವಿಧಾನಮಂಡಲದ ಜಂಟಿ ಅಧಿವೇಶನ ಆರಂಭವಾಗಲಿದೆ.

ಸರ್ಕಾರವನ್ನು ಶತಾಯ-ಗತಾಯ ಕೆಡವಲೇಬೇಕೆಂದು ಅಖಾಡಕ್ಕಿಳಿದಿರುವ ಬಿಜೆಪಿ, ಕಾಂಗ್ರೆಸ್‍ನ ಅತೃಪ್ತ ಶಾಸಕರನ್ನು ಸೆಳೆಯಲು ಮುಂದಾಗಿದೆ.ಇದಕ್ಕೆ ಪ್ರತಿತಂತ್ರ ರೂಪಿಸಿರುವ ಕೈ ಪಡೆ ಆಪರೇಷನ್‍ಗೆ ಪ್ರತಿಯಾಗಿ ಭೋಜನ ಮತ್ತು ಔತಣ ಕೂಟ ಏರ್ಪಡಿಸಿ ವಿಶ್ವಾಸಕ್ಕೆ ತೆಗೆದುಕೊಳ್ಳುವ ಕಸರತ್ತು ನಡೆಸಿದೆ.

ಈ ಬೆಳವಣಿಗೆಗಳ ನಡುವೆಯೇ ನಾಳೆ ರಾಜ್ಯಪಾಲ ವಿ.ಆರ್.ವಾಲಾ ಅವರು ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ.

ಸಮ್ಮಿಶ್ರ ಸರ್ಕಾರದ ಯೋಜನೆಗಳು ಹಾಗೂ ಈ ವರ್ಷದ ದೂರದೃಷ್ಟಿ ಏನೆಂಬುದನ್ನು ರಾಜ್ಯಪಾಲರು ತಮ್ಮ ಭಾಷಣದಲ್ಲಿ ಬಿಂಬಿಸಲಿದ್ದಾರೆ.

ರಾಜ್ಯಪಾಲರ ಭಾಷಣದ ನಂತರ ಶುಕ್ರವಾರ ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ.

ಸಮ್ಮಿಶ್ರ ಸರ್ಕಾರದ ಎರಡನೆ ಬಜೆಟ್ ಇದಾಗಿರುವುದರಿಂದ ರೈತರು, ಕಾರ್ಮಿಕರು, ಮಹಿಳೆಯರು, ಹಿರಿಯ ನಾಗರಿಕರು, ಹಿಂದುಳಿದವರು ಸೇರಿದಂತೆ ಎಲ್ಲ ವರ್ಗದವರನ್ನೂ ಓಲೈಸಿಕೊಳ್ಳಲು ಭರಪೂರ ಮತಾಕರ್ಷಣೆ ಬಜೆಟ್ ಮಂಡಿಸುವ ಸಾಧ್ಯತೆ ಇದೆ.

ಕಳೆದ 15 ದಿನಗಳಿಂದ ಕುಮಾರಸ್ವಾಮಿಯವರು ಇಲಾಖಾವಾರು ಮತ್ತು ಅಧಿಕಾರಿಗಳ ಸಭೆ ನಡೆಸಿ ಬಜೆಟ್‍ನಲ್ಲಿ ಕೈಗೊಳ್ಳಬೇಕಾದ ಯೋಜನೆಗಳ ಬಗ್ಗೆಯೂ ಚರ್ಚೆ ನಡೆಸಿದ್ದರು.

ಕಲಾಪದ ಮೇಲೆ ಕರಿನೆರಳು: ಇನ್ನು ಜಂಟಿ ಅಧಿವೇಶನದಲ್ಲಿ ಈ ಬಾರಿ ಭಿನ್ನಮತೀಯ ಶಾಸಕರ ಅತೃಪ್ತಿ, ಆಪರೇಷನ್ ಕಮಲ ಸಾಕಷ್ಟು ಪ್ರತಿಧ್ವನಿಸುವ ಸಾಧ್ಯತೆ ಇದೆ.

ಕಾಂಗ್ರೆಸ್ ವಿರುದ್ಧ ಮುನಿಸಿಕೊಂಡು ಕಳೆದ 20 ದಿನಗಳಿಂದ ಯಾರ ಕೈಗೂ ಸಿಗದೆ ಅಜ್ಞಾತ ಸ್ಥಳದಲ್ಲಿರುವ ಶಾಸಕರಾದ ರಮೇಶ್ ಜಾರಕಿಹೊಳಿ, ಬಿ.ನಾಗೇಂದ್ರ, ಮಹೇಶ್ ಕುಮಟಳ್ಳಿ, ಉಮೇಶ್ ಜಾಧವ್ ನಡೆ ಈಗಲೂ ನಿಗೂಢವಾಗಿದೆ. ಇದರ ಜತೆಗೆ ಶಾಸಕರಾದ ಪ್ರತಾಪ್‍ಗೌಡ ಪಾಟೀಲ್, ಜೆ.ಗಣೇಶ್ ಸೇರಿದಂತೆ ಕೆಲವು ಶಾಸಕರ ಬಗ್ಗೆಯೇ ಕಾಂಗ್ರೆಸ್ ಚಿಂತಾಕ್ರಾಂತವಾಗಿದೆ.

ಹೇಗಾದರೂ ಮಾಡಿ ಈ ಶಾಸಕರನ್ನು ಸೆಳೆದು ರಾಜೀನಾಮೆ ನೀಡುವ ಮೂಲಕ ಸರ್ಕಾರದಲ್ಲಿ ಅಸ್ಥಿರತೆ ಉಂಟುಮಾಡಬೇಕೆಂಬುದು ಬಿಜೆಪಿ ಲೆಕ್ಕಾಚಾರವಾಗಿದೆ.

ಮೂಲಗಳ ಪ್ರಕಾರ, ಮುಂಬೈನಲ್ಲಿರುವ ಶಾಸಕರು ಇಂದು ಮಧ್ಯರಾತ್ರಿಯೊಳಗೆ ಬೆಂಗಳೂರಿಗೆ ಆಗಮಿಸುವ ಸಾಧ್ಯತೆ ಇದೆ.ನಾಳೆ ರಾಜ್ಯಪಾಲರ ಭಾಷಣಕ್ಕೂ ಮುನ್ನವೆ ಇವರೆಲ್ಲರೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆಂದು ತಿಳಿದುಬಂದಿದೆ.

ಹೀಗೆ ಅತೃಪ್ತರು ಪಕ್ಷಕ್ಕೆ ಕೈ ಕೊಡಬಹುದೆಂಬ ಭೀತಿಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಭೋಜನ ಕೂಟ ಏರ್ಪಡಿಸಿದ್ದರೆ, ಬುಧವಾರ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಔತಣ ಕೂಟ ಹಮ್ಮಿಕೊಂಡಿದ್ದಾರೆ.

ಕಾವೇರಿದ ಚರ್ಚೆ: ಇನ್ನು ಕಲಾಪದ ಸಂದರ್ಭದಲ್ಲಿ ಉಭಯ ಸದನಗಳಲ್ಲಿ ಕಾವೇರಿದ ಚರ್ಚೆ ನಡೆಯುವ ಸಾಧ್ಯತೆ ಇದೆ. ಸರ್ಕಾರದ ವಿರುದ್ಧ ಮುಗಿಬೀಳಲು ಪ್ರತಿಪಕ್ಷ ಬಿಜೆಪಿ ಸಜ್ಜಾಗಿದೆ.

ರಾಜ್ಯದಲ್ಲಿ ಬರಗಾಲ ತಾಂಡವವಾಡುತ್ತಿದ್ದು, ಕುಡಿಯುವ ನೀರು, ಜಾನುವಾರುಗಳಿಗೆ ಮೇವು, ಜನರು ಕೆಲಸವಿಲ್ಲದೆ ಗುಳೆ ಹೋಗುತ್ತಿದ್ದು, ಸರ್ಕಾರ ಬರಗಾಲವನ್ನು ನಿರ್ವಹಣೆ ಮಾಡುವಲ್ಲಿ ವಿಫಲವಾಗಿದೆ ಎಂದು ಬಿಜೆಪಿ ತರಾಟೆಗೆ ತೆಗೆದುಕೊಳ್ಳಲು ತೀರ್ಮಾನಿಸಿದೆ.

ಈಗಾಗಲೇ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಹಲವಾರು ನಾಯಕರು ಬರ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದಾರೆ.

ಇದರ ಜತೆಗೆ ಆಪರೇಷನ್ ಕಮಲ ಪ್ರತಿಧ್ವನಿಸುವ ಸಾಧ್ಯತೆ ಇದೆ.ಶಾಸಕರಿಗೆ ಆಮಿಷ ನೀಡಿ ಬಿಜೆಪಿ ಸೆಳೆಯಲು ಮುಂದಾಗಿದೆ ಎಂಬುದು ಕಾಂಗ್ರೆಸ್-ಜೆಡಿಎಸ್ ನಾಯಕರ ಆರೋಪ.

ಈ ಮೊದಲು ಬಿಜೆಪಿ ಹರಿಯಾಣದ ಗುರುಗ್ರಾಮ ರೆಸಾರ್ಟ್‍ನಲ್ಲಿ ತನ್ನ ಶಾಸಕರನ್ನು ಕರೆದೊಯ್ದ ನಂತರ ಕಾಂಗ್ರೆಸ್ ಕೂಡ ಈಗಲ್‍ಟನ್ ರೆಸಾರ್ಟ್‍ಗೆ ಕರೆದೊಯ್ಯಿತು.ನಂತರ ನಡೆದ ಬೆಳವಣಿಗೆಗಳು ಕಲಾಪದಲ್ಲಿ ಮಾತಿನ ಚಕಮಕಿಗೆ ಕಾರಣವಾಗುವ ನಿರೀಕ್ಷೆ ಇದೆ.

ಒಟ್ಟಿನಲ್ಲಿ ನಾಳೆಯಿಂದ ಆರಂಭವಾಗಲಿರುವ ಆಧಿವೇಶನ ಆಡಳಿತ ಮತ್ತು ಪ್ರತಿಪಕ್ಷಕ್ಕೆ ಅಗ್ನಿಪರೀಕ್ಷೆಯಾಗುವುದರಲ್ಲಿ ಸಂದೇಹವೇ ಇಲ್ಲ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ