ಬೆಂಗಳೂರಿನಲ್ಲಿ ಸುಸ್ಥಿರ ಸಾರಿಗೆ ವ್ಯವಸ್ಥೆಗೆ ಸಂಕಲ್ಪ ಮಾಡಿರುವ ಸರ್ಕಾರ

ಬೆಂಗಳೂರು, ಫೆ.6- ನಾಗವಾರ ಮೆಟ್ರೋ ರೈಲು ನಿಲ್ದಾಣದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೋ ಹಂತ-2ಬಿ ಯೋಜನೆಯನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳಲು ಸರ್ಕಾರ ತೀರ್ಮಾನಿಸಿದೆ ಎಂದು ರಾಜ್ಯಪಾಲ ವಜುಬಾಯಿ ವಾಲಾ ತಿಳಿಸಿದರು.

ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಅವರು, ರಾಜಧಾನಿ ಬೆಂಗಳೂರಿನಲ್ಲಿ ಸುಸ್ಥಿರ ಸಾರಿಗೆ ವ್ಯವಸ್ಥೆಗೆ ಸರ್ಕಾರ ಸಂಕಲ್ಪ ಮಾಡಿದೆ ಎಂದು ಅವರು ಹೇಳಿದರು.

ನಗರದಲ್ಲಿ ಸುಸ್ಥಿರ ಸಾರಿಗೆ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ರೈಲ್ವೆ ಮಂತ್ರಾಲಯದೊಂದಿಗೆ ಉಪನಗರ ರೈಲು ಸಂಪರ್ಕ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಸ್ಪೆಷಲ್ ಪರ್ಪಸ್ ವೆಹಿಕಲ್ ಸ್ಥಾಪಿಸಲು ಸರ್ಕಾರ ಉದ್ದೇಶಿಸಲಾಗಿದೆ.ಅದೇ ರೀತಿ ನಗರದ ಕೇಂದ್ರ ಭಾಗದಲ್ಲಿ ಚತುರ ಸಂಚಾರಿ ನಿರ್ವಹಣಾ ವ್ಯವಸ್ಥೆ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದರು.

ರಾಜ್ಯ ರಸ್ತೆ ಸಾರಿಗೆ ನಿಗಮಗಳು, ಜನರು ಮತ್ತು ಸ್ಥಳಗಳ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರಯಾಣಿಕರ ಅನುಕೂಲಕ್ಕಾಗಿ ಹೊಸ ಬಸ್‍ಗಳನ್ನು ಸೇರ್ಪಡೆಗೊಳಿಸುವುದರ ಜತೆಗೆ ಡಿಪೋಗಳು ಮತ್ತು ಟರ್ಮಿನಲ್‍ಗಳನ್ನು ನಿರ್ಮಾಣ ಮಾಡಲಾಗುತ್ತಿದೆ.

ಪ್ರಯಾಣಿಕರ ಮಾಹಿತಿ ವ್ಯವಸ್ಥೆ ಸೇರಿದಂತೆ ಚತುರ ಸಾರಿಗೆ ವ್ಯವಸ್ಥೆ ಮತ್ತು ನಗದು ರಹಿತ ವ್ಯವಹಾರಕ್ಕಾಗಿ ಪಾಯಿಂಟ್ ಆಫ್ ಸೇಲ್‍ಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳಿಗೆ ಸೇರಿದ 3.98 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್ ಹಾಗೂ 15.53 ಲಕ್ಷ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್ ವಿತರಿಸಲಾಗಿದೆ ಎಂದು ರಾಜ್ಯಪಾಲರು ವಿವರ ನೀಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ