ನಿಖಿಲ್ ಕುಮಾರಸ್ವಾಮಿ ಮೈಸೂರಿನಿಂದ ಸ್ಪರ್ಧಿಸಿದರೆ ಗೆಲ್ಲಿಸುವ ಜವಾಬ್ದಾರಿ ನಮ್ಮದು : ಸಚಿವ ಜಿ.ಟಿ.ದೇವೇಗೌಡ

ಮೈಸೂರು: ನಗರದಲ್ಲಿ ನಡೆದ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಅಭಿನಂದನಾ ಸಮಾರಂಭ ಹೊಸ ರಾಜಕೀಯ ಬೆಳವಣಿಗೆಗೆ ಸಾಕ್ಷಿಯಾಗಿದೆ. ಸಮಾರಂಭದಲ್ಲಿ ಸಚಿವ ಜಿ.ಟಿ.ದೇವೇಗೌಡ ಅವರು ನಿಖಿಲ್ ಕುಮಾರಸ್ವಾಮಿ ಹೆಸರು ಪ್ರಸ್ತಾಪಿಸಿ, ನಿಖಿಲ್ ಮೈಸೂರಿನಿಂದ ಸ್ಪರ್ಧೆ ಮಾಡಿದರೆ ಅವರನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮದು ಎಂದು ಘೋಷಿಸಿದ್ದಾರೆ.

ನಿಖಿಲ್ ಮಂಡ್ಯದಿಂದ ಸ್ಪರ್ಧಿಸಲು ಬಯಸಿದ್ದಾರೆ. ಆದರೆ ನಾವು ಅವರನ್ನು ಮೈಸೂರಿನಿಂದ ಸ್ಪರ್ಧಿಸುವಂತೆ ಕೇಳಿಕೊಳ್ಳುತ್ತೇವೆ ಎಂದು ಸಚಿವರು ಹೇಳಿದರು. ಮಾಜಿ ಪ್ರಧಾನಿ ದೇವೇಗೌಡರನ್ನ ಕಣಕ್ಕಿಳಿಯುವಂತೆ ಬಹಿರಂಗ ಸಭೆಯಲ್ಲಿ ಮನವಿ ಮಾಡಿದ ಸಚಿವ ಜಿಟಿಡಿ, ದೇವೇಗೌಡರು ಮೈಸೂರು ಕ್ಷೇತ್ರದಿಂದ ಕಣಕ್ಕಿಳಿಯದಿದ್ದರೆ ನಿಖಿಲ್​ ಅವರನ್ನು ಕಳುಹಿಸಿ ನಾವು ಗೆಲ್ಲಿಸಿ ಕೊಡುತ್ತೀವಿ ಎಂದರು.

ಈ ವೇಳೆ ನಿಖಿಲ್ ಕುಮಾರಸ್ವಾಮಿ ಅವರ ಹೆಸರೇಳುತ್ತಿದ್ದಂತೆ ಸಮಾರಂಭದಲ್ಲಿ ಜೆಡಿಎಸ್​ ಕಾರ್ಯಕರ್ತರಿಂದ ಹರ್ಷೋದ್ಗಾರ ಮೊಳಗಿತು. ಈ ಮೂಲಕ ಮಂಡ್ಯ ಲೋಕಸಭಾ ಕ್ಷೇತ್ರ ಬಿಟ್ಟು ಮೈಸೂರು ಕ್ಷೇತ್ರದಿಂದ ನಿಖಿಲ್​ ರನ್ನು ಕಣಕ್ಕಿಳಿಸುವ ತೆರೆ ಮರೆಯ ಪ್ರಯತ್ನಗಳು ನಡೆಯುತ್ತಿದೆ ಎನ್ನಲಾಗಿದೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಅಂಬರೀಷ್ ಅವರ ಪತ್ನಿ ಸುಮಲತಾ ಸ್ಫರ್ಧಿಸುವ ಸಾಧ್ಯತೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಮೈತ್ರಿ ಸರ್ಕಾರಕ್ಕೆ ಈ ಕ್ಷೇತ್ರ ಹೊಸ ಬಿಕ್ಕಟಿಗೆ ಕಾರಣವಾಗಿದ್ದು, ಹೀಗಾಗಿ  ನಿಖಿಲ್ ಕುಮಾರಸ್ವಾಮಿ ಮೈಸೂರು ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ