ಬಸ್ಸು ಮತ್ತು ಕಾರಿನ ನಡುವೆ ಡಿಕ್ಕಿ-ಒಂದೇ ಕುಟುಂಬದ ಮೂವರ ಸಾವು

ಹಾಸನ, ಮಾ.13-ಕೆಎಸ್‍ಆರ್‍ಟಿಸಿ ಬಸ್ ಹಾಗೂ ಓಮ್ನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 206ರ ಲಕ್ಷ್ಮಿದೇವರಹೊಸಳ್ಳಿ ಬಳಿ ತಡರಾತ್ರಿ ನಡೆದಿದೆ.

ಶಿವಮೊಗ್ಗದ ರಾಗಿಗುಡ್ಡ ಮೂಲದವರಾದ ಮುಜೀಬಾ(43), ಮಹಮ್ಮದ್ ಸಾದಿಕ್(22), ಮುಸ್ಕಾನ್(19) ಮೃತಪಟ್ಟ ದುರ್ದೈವಿಗಳು.

ಮಧುಗಿರಿ ಕಡೆಯಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಕಾರು, ಶಿವಮೊಗ್ಗ ಕಡೆಯಿಂದ ಬರುತ್ತಿದ್ದ ಸಾರಿಗೆ ಬಸ್ ಮುಖಾಮುಖಿ ಡಿಕ್ಕಿಯಾಗಿದ್ದು, ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾದ ಪರಿಣಾಮ ತಾಯಿ, ಮಗ, ಮಗಳು ಸ್ಥಳದಲ್ಲೇ ಸಾವನ್ನಪ್ಪಿದರೆ, ಶಾಹಿನಾಬಾನು, ಇಮ್ರಾನ್ ಅಹಮ್ಮದ್, ಶಾಹಿನ್‍ತಾಜ್, ಮೊಹಮ್ಮದ್ ಶಾಹಿನ್‍ಗೆ ಗಂಭೀರ ಗಾಯಗಳಾಗಿದ್ದು, ಅರಸೀಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ.

ಬಸ್‍ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅರಸೀಕೆರೆ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ