ನಕ್ಸಲರಿಂದ ಮತದಾನದಲ್ಲಿ ಜನರು ಭಾಗವಹಿಸದಂತೆ ಪ್ರಭಾವ ಬೀರುವ ಪ್ರಯತ್ನ-ಇದನ್ನು ತಪ್ಪಿಸಲು ಪೊಲೀಸರ ವಿಶೇಷ ಕಾರ್ಯಾಚರಣೆ

ಚಿಕ್ಕಮಗಳೂರು,ಮಾ.13- ಜಿಲ್ಲೆಯ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಲೋಕಸಭಾ ಚುನಾವಣೆಗೆ ಮತ ಚಲಾಯಿಸದಂತೆ ಜನರ ಮೇಲೆ ಪ್ರಭಾವ ಬೀರುವುದನ್ನು ತಪ್ಪಿಸಲು ವಿಶೇಷ ಕಾರ್ಯಾಚರಣೆಯನ್ನು ಪೊಲೀಸ್ ಇಲಾಖೆ ಜಿಲ್ಲಾ ಆಡಳಿತದೊಂದಿಗೆ ಸೇರಿಕೊಳ್ಳಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರೀಶ್ ಪಾಂಡೆ ತಿಳಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನಕ್ಸಲರು ಮತದಾನದಲ್ಲಿ ಭಾಗವಹಿಸದಂತೆ ಪ್ರಭಾವ ಬೀರುವ ಪ್ರಯತ್ನ ನಡೆಸುತ್ತಾರೆ. ಈ ಹಿನ್ನಲೆಯಲ್ಲಿ ಶೃಂಗೇರಿ, ಮೂಡಿಗೆರೆ ತಾಲೂಕುಗಳ ನಕ್ಸಲ್ ಪೀಡಿತ ಪ್ರದೇಶಗಳ ಜನರ ಸಭೆ ಕರೆದು ಪ್ರಜಾಪ್ರಭುತ್ವ ಹಾಗೂ ಚುನಾವಣೆ ಅಗತ್ಯತೆ ಬಗ್ಗೆ ತಿಳಿಸುತ್ತೇವೆ ಎಂದರು.

ನಕ್ಸಲ್‍ಪೀಡಿತ ಪ್ರದೇಶಗಳಲ್ಲಿ ಮತಗಟ್ಟೆ ಸ್ಥಾಪಿಸಿರುವ ಹಿನ್ನೆಲೆಯಲ್ಲಿ ರಕ್ಷಣೆ ಇನ್ನಿತರ ಕ್ರಮಕ್ಕೆ ಬಗ್ಗೆ ಸಿಸಿಟಿವಿ ಕ್ಯಾಮರಾ ಅಳವಡಿಕೆ ಮತ್ತಿತರ ಬಗ್ಗೆ ಚುನಾವಣಾ ವೀಕ್ಷಕರ ಅಭಿಪ್ರಾಯ ಪಡೆದು ಮುಂಜಾಗ್ರತ ಕ್ರಮ ವಹಿಸಲಾಗುವುದು ಎಂದು ಹೇಳಿದರು.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಜಿಲ್ಲೆಯ ನಾಲ್ಕು ಕ್ಷೇತ್ರಗಳು ಸೇರಿದ್ದಲ್ಲಿ 2000ಮಂದಿ ಪೊಲೀಸ್ ಅಧಿಕಾರಿ ಸಿಬ್ಬಂದಿಯನ್ನು ಶಾಂತಿಯುತ ಮತದಾನಕ್ಕಾಗಿ ನೇಮಿಸಲಾಗುವುದು ಎಂದು ಅವರು ತಿಳಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶೃತಿ ಇದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ