ಕರ್ನಾಟಕದಿಂದ ಸ್ಪರ್ಧಿಸುವಂತೆ ರಾಹುಲ್ ಗಾಂಧಿಗೆ ಆಹ್ವಾನ ನೀಡಿದ ದಿನೇಶ್ ಗುಂಡುರಾವ್

ಬೆಂಗಳೂರು, ಮಾ.18-ದಕ್ಷಿಣ ಭಾರತದಲ್ಲಿ ಕಾಂಗ್ರೆಸ್‍ನ್ನು ಬಲಿಷ್ಠಗೊಳಿಸಲು ಕರ್ನಾಟಕದ ಯಾವುದಾದರೂ ಒಂದು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವಂತೆ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಹ್ವಾನ ನೀಡಿದ್ದಾರೆ.

ಇಂದು ರಾಹುಲ್‍ಗಾಂಧಿಯವರಿಗೆ ಪತ್ರ ಬರೆದಿರುವ ದಿನೇಶ್‍ಗುಂಡೂರಾವ್ ಅವರು, ಕಾಂಗ್ರೆಸ್ ಕಷ್ಟದಲ್ಲಿದ್ದಾಗಲೆಲ್ಲಾ ಕರ್ನಾಟಕದಲ್ಲಿ ಪಕ್ಷದ ಜೊತೆಗೆ ನಿಂತು ಬಲ ತುಂಬಿದೆ. ಪ್ರಸ್ತುತ ದಿನಗಳಲ್ಲಿ ಕಾಂಗ್ರೆಸ್ ಸಂಕಷ್ಟದಲ್ಲಿದೆ. ಈ ಸಂದರ್ಭದಲ್ಲಿ ಚುನಾವಣೆ ಮೂಲಕ ಬಲವಾದ ನಾಯಕತ್ವ ಹೊರಹೊಮ್ಮಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಹುಲ್‍ಗಾಂಧಿಯವರು ಕರ್ನಾಟಕದಿಂದ ಸ್ಪರ್ಧಿಸುವುದರಿಂದ ನಮ್ಮ ರಾಜ್ಯದಲ್ಲಷ್ಟೇ ಅಲ್ಲ, ಇಡೀ ದಕ್ಷಿಣ ಭಾರತದಲ್ಲೇ ಪಕ್ಷ ಬಲಿಷ್ಠಗೊಳ್ಳಲಿದೆ. ಕೇಂದ್ರದ ಆಡಳಿತಾರೂಢ ಎನ್‍ಡಿಎ ಸರ್ಕಾರ ತನ್ನ ವರ್ಚಸ್ಸನ್ನು ಕಳೆದುಕೊಳ್ಳುತ್ತಿದ್ದು, ಕಾಂಗ್ರೆಸ್ ನೇತೃತ್ವದ ಮಿತ್ರ ಪಕ್ಷಗಳು ಹೆಚ್ಚು ಸದೃಢವಾಗಿವೆ. ಈ ಹಿಂದೆ ಇಂದಿರಾಗಾಂಧಿಯವರು ಚಿಕ್ಕಮಗಳೂರಿನಿಂದ, ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿ ಬಳ್ಳಾರಿಯಿಂದ ಸ್ಪರ್ಧಿಸಿದ್ದನ್ನು ದಿನೇಶ್‍ಗುಂಡೂರಾವ್ ಇದೇ ಸಂದರ್ಭದಲ್ಲಿ ಸ್ಮರಿಸಿಕೊಂಡಿದ್ದಾರೆ.

ಈಗ ರಾಹುಲ್‍ಗಾಂಧಿಯವರು ಕರ್ನಾಟಕದಿಂದ ಸ್ಪರ್ಧಿಸುವುದಾದರೆ ಅದನ್ನು ಎಲ್ಲಾ ಕಾರ್ಯಕರ್ತರು ಮುಕ್ತವಾಗಿ ಸ್ವಾಗತಿಸಲಿದ್ದಾರೆ. ದಕ್ಷಿಣ ಭಾರತಕ್ಕೆ ಹೊಸ ಸಂದೇಶ ರವಾನೆಯಾಗುತ್ತದೆ ಎಂದು ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ