ಶುಕ್ರವಾರದಿಂದ ಚುನಾವಣಾ ಅಖಾಡಕ್ಕೆ ಸಿಎಂ; ಮಂಡ್ಯದಿಂದ ಕುಮಾರಸ್ವಾಮಿ ಪ್ರಚಾರ ಆರಂಭ

ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ಅಖಾಡ ರಂಗೇರಿದ್ದು, ಮೊದಲ ಹಂತದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಕ್ಷೇತ್ರಗಳಲ್ಲಿ ಇದುವರೆಗೂ ಕಾಂಗ್ರೆಸ್​​, ಜೆಡಿಎಸ್​​ ಸೇರಿದಂತೆ ಬಿಜೆಪಿಯೂ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ ಮಾಡಿಲ್ಲ. ಈ ನಡುವೆಯೇ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಸಿಎಂ ಮುಂದಾಗಿದ್ದಾರೆ.

ಶುಭಶುಕ್ರವಾರದಿಂದ ಸಿಎಂ ಕುಮಾರಸ್ವಾಮಿ ಪ್ರಚಾರ ಆರಂಭಿಸಲು ಮುಂದಾಗಿದ್ದು, ಮಗನ ಪರ ಮೊದಲ ಪ್ರಚಾರ ಆರಂಭಿಸಲಿದ್ದಾರೆ. ಮಂಡ್ಯದಲ್ಲಿ ಸುಮಲತಾ ಪ್ರಬಲ ಸ್ಪರ್ಧಿಯಾಗಿದ್ದು, ಅವರ ಪರ ಇಡೀ ಚಿತ್ರರಂಗವೇ ನಿಂತಿದ್ದಾರೆ. ಈ ಹಿನ್ನೆಲೆಯಲ್ಲಿ ನಿಖಿಲ್​ ಪರ ಹೆಚ್ಚಿನ ಪ್ರಚಾರ ಕೈಗೊಳ್ಳಲು ಸಿಎಂ ಕುಮಾರಸ್ವಾಮಿ ಚಿಂತನೆ ನಡೆಸಿದ್ದಾರೆ.

ಸಿನಿಮಾ ನಟ, ನಟಿಯರ ಪ್ರಚಾರದಿಂದ ಸುಮಲತಾ ಅವರಿಗೆ ಆನೆಬಲ ತರಲಿದ್ದು, ಈ ಹಿನ್ನೆಲೆಯಲ್ಲಿ ನಿಖಿಲ್​ ಪರ  ಯಾವ ರೀತಿ ಪ್ರಚಾರ ನಡೆಸಬೇಕು ಎಂಬ ಬಗ್ಗೆ ಕೂಡ ಸಿಎಂ  ನಿರ್ಧರಿಸಿದ್ದಾರೆ. . ಈಗಾಗಲೇ ಜಿಲ್ಲೆಯಲ್ಲಿ ಜೆಡಿಎಸ್​ ನಾಯಕರು ಒಗ್ಗಟ್ಟಿನ ಪ್ರದರ್ಶನ ಮಾಡಿದ್ದು, ಕಾಂಗ್ರೆಸ್​ ನಾಯಕರಿಗೂ ಪ್ರಚಾರದಲ್ಲಿ ಭಾಗಿಯಾಗುವಂತೆ ಸೂಚನೆ ಮಾಡಲಾಗಿದೆ.

ಮಂಡ್ಯ ಹೊರತಾಗಿ ಬೇರೆ ಎಲ್ಲ ಕ್ಷೇತ್ರಗಳಲ್ಲಿ ಕೂಡ ಸಿಎಂ ಪ್ರಚಾರ ನಡೆಸಲಿದ್ದಾರೆ. ಜೆಡಿಎಸ್​ ಅಭ್ಯರ್ಥಿಗಳಿರುವ ಕ್ಷೇತ್ರಗಳಲ್ಲಿ ಮೂರು ದಿನಗಳ ಕಾಲ ಪ್ರಚಾರ ನಡೆಸಲಿದ್ದು, ಕಾಂಗ್ರೆಸ್​ ಶಾಸಕರಿರುವ ಕ್ಷೇತ್ರಗಳಲ್ಲಿ ಒಂದು ದಿನ ಪ್ರಚಾರ ನಡೆಸಲು ನಿರ್ಧರಿಸಲಾಗಿದೆ.

ಪ್ರಚಾರ ಆರಂಭಕ್ಕೂ ಮುನ್ನ ಜೆಡಿಎಸ್​ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವ ಬಗ್ಗೆ ಕೂಡ ಸಿಎಂ ಚಿಂತನೆ ನಡೆಸಿದ್ದಾರೆ. 10 ಕ್ಷೇತ್ರಗಳಲ್ಲಿ ಯಾವ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಬೇಕು ಎಂಬ ಬಗ್ಗೆ  ಈಗಾಗಲೇ ಜೆಡಿಎಸ್​ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮವಾಗಿದ್ದು, ಇಂದು ಅವರು ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ