ಡಾ.ಶಿವಕುಮಾರ್ ಸ್ವಾಮೀಜಿಯವರ ಗದ್ದುಗೆಗೆ ಪೂಜೆ ಸಲ್ಲಿಸಿದ ಎ.ಮಂಜು

ತುಮಕೂರು, ಮಾ.24- ಹಾಸನ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ನಾಳೆ ನಾಮಪತ್ರ ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ಡಾ.ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ಪೂಜೆ ಮಾಡಿ, ಆಶೀರ್ವಾದ ಪಡೆಯಲು ಬಂದಿದ್ದೇನೆ ಎಂದು ಎ.ಮಂಜು ತಿಳಿಸಿದ್ದಾರೆ.

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ನಂತರ ಮಾತನಾಡಿದ ಅವರು, ದೊಡ್ಡವರಿದ್ದಾಗ ಆಗಾಗ ಬಂದು ಆಶೀರ್ವಾದ ಪಡೆದುಕೊಂಡು ಹೋಗುತ್ತಿದ್ದೆ. ಇದೀಗ ಹಿರಿಯರಿಲ್ಲ. ಅವರ ಗದ್ದುಗೆಗೆ ಪೂಜೆ ಸಲ್ಲಿಸಿದ್ದೇನೆ ಎಂದರು.

ಮೊದಲಿನಿಂದಲೂ ಹಾಸನದಲ್ಲಿ ದೇವೇಗೌಡರು, ಮಂಡ್ಯದಲ್ಲಿ ಅಂಬರೀಶ್ ನಿಲ್ಲಲಿ ಎಂದೇ ಹೇಳುತ್ತಿದ್ದೆ. ಆದರೆ ದೇವೇಗೌಡರು ತಮ್ಮ ಮೊಮ್ಮಗನಿಗೆ ಸ್ಥಾನ ಬಿಟ್ಟುಕೊಡುವ ಮೂಲಕ ಕುಟುಂಬ ರಾಜಕಾರಣ ಮಾಡಿದ್ದಾರೆ. ಮಕ್ಕಳು ಚುನಾವಣೆಗೆ ನಿಲ್ಲಬಾರದು ಎಂದೇನಿಲ್ಲ. ಆದರೆ ಅದಕ್ಕೆ ವಯಸ್ಸು, ಅನುಭವ ಬೇಕು ಎಂದು ಹೇಳಿದರು.

ಹಾಸನದಲ್ಲಿ ಹೊಂದಾಣಿಕೆ ರಾಜಕಾರಣ ನಡೆಯುತ್ತಿದೆ. ಮೇಲ್ಮಟ್ಟದಲ್ಲಿ ಹೊಂದಾಣಿಕೆಯಾದರೂ ತಳಮಟ್ಟದಲ್ಲಿ ಹೊಂದಾಣಿಕೆ ಕಷ್ಟ. ಹಾಸನದಲ್ಲಿ ನೇರಾ ನೇರ ಸ್ಪರ್ಧೆಯಿದೆ ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ