ಮೈತ್ರಿ ಅಭ್ಯರ್ಥಿಗಳ ಗೆಲವು ನಿಶ್ಚಿತ-ಮುಖ್ಯಮಂತ್ರಿ ಕುಮಾರಸ್ವಾಮಿ

ಅರಸೀಕೆರೆ,ಏ.3- ಬಿಜೆಪಿ ನಾಯಕರಿಗೆ ರಾಜ್ಯದ ಅಭಿವೃದ್ದಿ ಬಗ್ಗೆ ಚಿಂತನೆಯಿಲ್ಲ. ಅವರು ತಮ್ಮ ಸ್ವಾರ್ಥಕ್ಕಾಗಿ ಹಾಗೂ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ಹೋರಾಟ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಹೇಳಿದರು.

ಚನ್ನರಾಯಪಟ್ಟಣದಿಂದ ಶಿವಮೊಗ್ಗಕ್ಕೆ ತೆರಳುವ ಮಾರ್ಗಮಧ್ಯೆ ಹೊರವಲಯದಲ್ಲಿರುವ ಹಳ್ಳಿಮನೆಯಲ್ಲಿ ತಮ್ಮನ್ನುಭೇಟಿ ಮಾಡಿದ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಬಿಜೆಪಿಯ ಅಸ್ತಿತ್ವಕ್ಕೆ ಧಕ್ಕೆಯಾಗುತ್ತಿದೆ.

ಹಾಗಾಗಿ ಹತಾಶರಾಗಿರುವ ಬಿಜೆಪಿಯವರು ತಮ್ಮ ಉಳಿವಿಗಾಗಿ ಬಾಯ್ಗೆ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ಅಲ್ಲದೆ ಅದೇ ರೀತಿ ನಡೆದುಕೊಳ್ಳುತ್ತಿದ್ದಾರೆ. ಇದಕ್ಕೆಲ್ಲ ಜನತೆಯೇ ಪಾಠ ಕಲಿಸಲಿದ್ದಾರೆ ಎಂದರು.

ಮಂಡ್ಯದಲ್ಲಿ ನಿಖಿಲ್‍ ಕುಮಾರಸ್ವಾಮಿ ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದ ಸಿಎಂ, ಮಂಡ್ಯ ಅಥವಾ ರಾಜ್ಯದ ಯಾವುದೇ ಜನರಿರಬಹುದು ಅವರೆಲ್ಲರೂ ಅಭಿವೃದ್ಧಿ ಪರವಾಗಿದ್ದಾರೆ. ಹಾಗಾಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಅತಿಹೆಚ್ಚು ಮತಗಳಿಂದ ಗೆಲ್ಲಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಒಗ್ಗಟ್ಟಾಗಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ.ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಸಕ ಶಿವಲಿಂಗೇಗೌಡ, ನಗರಸಭೆ ಮಾಜಿ ಅಧ್ಯಕ್ಷ ಸಮಿವುಲ್ಲಾ, ತಾಪಂ ಮಾಜಿ ಅಧ್ಯಕ್ಷ ಹಾರ್ನಹಳ್ಳಿ ಶಿವಮೂರ್ತಿ, ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಬಾಬು ಸೇರಿದಂತೆ ಹಲವು ಜೆಡಿಎಸ್ ಮುಖಂಡರು, ಕಾರ್ಯಕರ್ತರು ಜೊತೆಯಲ್ಲಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ