ಇನ್ನೆರಡು ದಿನಗಳಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಲಿರುವ ಜೆಡಿಎಸ್

ಬೆಂಗಳೂರು,ಏ.5-ಪ್ರಸಕ್ತ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಇನ್ನೆರಡು ದಿನಗಳಲ್ಲಿ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡುವುದಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ಪ್ರಣಾಳಿಕೆ ಸಿದ್ದಪಡಿಸಲಾಗುತ್ತಿದ್ದು, ಯುಗಾದಿ ಹಬ್ಬದ ದಿನದ ನಂತರ ಬಿಡುಗಡೆ ಮಾಡುವುದಾಗಿ ಹೇಳಿದರು.

ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆ ಬಗ್ಗೆ ಬಿಜೆಪಿ ನಾಯಕರು ಮಾಡಿರುವ ಆರೋಪದ ಬಗ್ಗೆ ತೀವ್ರ ಅಸಮಾಧಾನಗೊಂಡ ಗೌಡರು ಪ್ರಧಾನಿ ನರೇಂದ್ರ ಮೋದಿ ಒಬ್ಬರೇ ದೇಶದ ರಕ್ಷಣೆ ಮಾಡುವುದಿಲ್ಲ. ಎಲ್ಲರೂ ದೇಶದ ರಕ್ಷಣೆ ಮಾಡುತ್ತಾರೆ ಎಂದು ಖಾರವಾಗಿ ನುಡಿದರು.

ವಯನಾಡಿನಿಂದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸ್ಪರ್ಧೆ ಮಾಡಿರುವ ವಿಚಾರ ಪ್ರಸ್ತಾಪಿಸುತ್ತಿದ್ದಂತೆ ಗೌಡರು ಮಾಧ್ಯಮಗಳ ಬಗ್ಗೆಯೂ ಅಸಮಾಧಾನಗೊಂಡು ಪ್ರತಿದಿನವೂ ಮೋದಿ ಅವರ ಬಗ್ಗೆಯೇ ಸುದ್ದಿ ಮಾಡಿ ಯಾರು ಬೇಡ ಅಂತಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ