ವಿಕಾಸಕ್ಕಾಗಿ ಕಾಂಗ್ರೆಸ್ ಗೆಲ್ಲಿಸಿ: ಖಂಡ್ರೆ

ಬೀದರ್: ಜಿಲ್ಲೆಯ ಸರ್ವಾಂಗೀಣ ವಿಕಾಸಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು ಎಂದು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಖಂಡ್ರೆ ಮನವಿ ಮಾಡಿದರು.

ನಗರದ ನೌಬಾದ್ ಬಳಿಯ ಆಟೋನಗರದಲ್ಲಿ ನಡೆದ ಪಕ್ಷದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಇಡೀ ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಮಹತ್ವದ ಕೊಡುಗೆ ನೀಡಿದೆ. ಭವ್ಯ ಭಾರತ ನಿರ್ಮಾಣಕ್ಕೆ ಅಡಿಪಾಯ ಹಾಕಿದ್ದೇ ಕಾಂಗ್ರೆಸ್. ಇಂದು ದೇಶದ ಜನ ಪಡೆಯುತ್ತಿರುವ ವಿವಿಧ ಸೌಲಭ್ಯಗಳಿಗೆ ಕಾಂಗ್ರೆಸ್ ಶ್ರಮವೇ ಕಾರಣವಾಗಿದೆ ಎಂದು ಈಶ್ವರ ಖಂಡ್ರೆ ಹೇಳಿದರು.

ಬೀದರ್ ಜಿಲ್ಲೆಯ ಸರ್ವಾಂಗೀಣ ವಿಕಾಸಕ್ಕೆ ಭೀಮಣ್ಣ ಖಂಡ್ರೆಯವರು ದೊಡ್ಡ ಕೊಡುಗೆ ನೀಡಿದ್ದಾರೆ. ಸಕ್ಕರೆ ಕಾರಖಾನೆ ಸ್ಥಾಪನೆ, ಶಾಲಾ ಕಾಲೇಜು ಮುಂತಾದವು ಖಂಡ್ರೆಯವರ ಕೊಡುಗೆಯಾಗಿವೆ. ಜಿಲ್ಲೆಯ ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಬೆಳವಣಿಗೆಯಲ್ಲಿ ಭೀಮಣ್ಣ ಖಂಡ್ರೆ ಅವರ ಕೊಡುಗೆ ಮಹತ್ವದ್ದಾಗಿದೆ ಎಂದರು.

ಸಿದ್ಧರಾಮಯ್ಯ ಸರಕಾರದಲ್ಲಿ ಸಚಿವನಾಗಿದ್ದಾಗ ಜಿಲ್ಲೆಯ ಪ್ರಗತಿಗೆ ಶ್ರಮಿಸಿದ್ದೇನೆ. ಕಾರಂಜಾ ಕಾಲುವೆ ಆಧುನೀಕರಣಕ್ಕೆ ನೂರಾರು ಕೋಟಿ ರೂ. ಮಂಜೂರಾಗಿದೆ. ಕೆರೆ ಸುಧಾರಣೆಯಂತಹ ಮಹತ್ವದ ಯೋಜನೆಗಳನ್ನು ಕೈಗೊಳ್ಳಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳನ್ನು ಬಲಪಡಿಸುವ ಕೆಲಸವನ್ನೂ ಮಾಡಲಾಗಿದೆ. ನೂರಾರು ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ಅಭ್ಯರ್ಥಿ ಈಶ್ವರ ಖಂಡ್ರೆ ಹೇಳಿದರು.

ನಗರ ಶಾಸಕರೂ ಆಗಿರುವ ಸಚಿವ ರಹೀಂ ಖಾನ್ ಮಾತನಾಡಿ, ಈಶ್ವರ ಖಂಡ್ರೆ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು. ಜನಪರ ಕಾಳಜಿ, ಅಭಿವೃದ್ಧಿಪರ ದೃಷ್ಟಿಕೋನ ಈಶ್ವರ ಖಂಡ್ರೆ ಅವರಲ್ಲಿದೆ. ಹಿಂದೆ ಸಚಿವರಾಗಿದ್ದಾಗ ಜಿಲ್ಲೆಯ ಅಭಿವೃದ್ದಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ ಎಂದು ರಹೀಂ ಖಾನ್ ಬಣ್ಣಿಸಿದರು.

ಜಿಲ್ಲೆಯ ಅಭಿವೃದ್ಧಿಗೆ ಈಶ್ವರ ಖಂಡ್ರೆ ಅವರು ಮಹತ್ವದ ಕೊಡುಗೆ ನೀಡಿದ್ದಾರೆ. ಅವರು ಸಂಸದರಾದಲ್ಲಿ ಕೇಂದ್ರ ಸರಕಾರದ ಯೋಜನೆಗಳೂ ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳಲಿವೆ. ಇದರಿಂದ ಜಿಲ್ಲೆಯ ಅಭಿವೃದ್ಧಿಯ ವೇಗ ಹೆಚ್ಚುವುದು ಎಂದು ರಹೀಂ ಖಾನ್ ಹೇಳಿದರು.

ಮಾಜಿ ಶಾಸಕ ಸೈಯದ್ ಜುಲ್ಫೇಕಾರ್ ಹಾಸ್ಮಿ ಮಾತನಾಡಿ, ಪ್ರತಿಯೊಬ್ಬರು ಕಾಂಗ್ರೆಸ್‍ಅನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು. ಕಾರ್ಯಕರ್ತರು ಮತ್ತು ಮುಖಂಡರು ನಿಷ್ಠೆ, ಪ್ರಾಮಾಣಿಕತೆಯಿಂದ ಪಕ್ಷದ ಪರವಾಗಿ ಕೆಲಸ ಮಾಡಬೇಕು. ಈಶ್ವರ ಖಂಡ್ರೆ ಅವರನ್ನು ಸಂಸತ್ತಿಗೆ ಕಳಿಸಿದ ನಂತರವೇ ವಿಶ್ರಾಂತಿ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಬಸವಕಲ್ಯಾಣ ಶಾಸಕ ಬಿ. ನಾರಾಯಣರಾವ್, ಮಾಜಿ ಜಿಪಂ ಅಧ್ಯಕ್ಷ ಮುರಲಿಧರರಾವ್ ಕಾಳೆ, ಆಟೋನಗರ ಯೂನಿಯನ್ ಪದಾಧಿಕಾರಿಗಳು, ಪ್ರಮುಖರು ಪಾಲ್ಗೊಂಡಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ