ಟಿಡಿಆರ್ ಹಗರಣ-ಎಸಿಬಿ ಪೊಲೀಸರಿಂದ ಬಿಬಿಎಂಪಿ ಆಯುಕ್ತರಿಗೆ ಪತ್ರ

ಬೆಂಗಳೂರು,ಮೇ4- ಟಿಡಿಆರ್ ಹಗರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸುತ್ತಿರುವ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆದಿದ್ದು, ಹಗರಣಕ್ಕೆ ಸಂಬಂಧಪಟ್ಟ ಎಲ್ಲ ದಾಖಲಾತಿಗಳಿಗೆ ಸೂಕ್ತ ಭದ್ರತೆ ಒದಗಿಸುವಂತೆ ಒತ್ತಾಯಿಸಿದ್ದಾರೆ.

ನಿನ್ನೆ ಮಹದೇವಪುರ ವಲಯದ ಬೆಳ್ಳಂದೂರು ಇಂಜಿನಿಯರ್ ವಿಭಾಗದ ಕಚೇರಿಗೆ ಬೆಂಕಿ ಬಿದ್ದಿತ್ತು. ಈ ಸಂದರ್ಭದಲ್ಲಿ ಟಿಡಿಆರ್ ಹಗರಣಕ್ಕೆ ಸಂಬಂಧಪಟ್ಟಂತೆ ಮಹತ್ವದ ದಾಖಲಾತಿಗಳು ಸುಟ್ಟುಹೋಗಿವೆ ಎಂದು ಹೇಳಲಾಗಿತ್ತು.

ಅದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಎಸಿಬಿ ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆದಿದೆ. ಎಸಿಬಿಯ ಐಜಿಪಿ ಚಂದ್ರಶೇಖರ್ ಅವರು ಪತ್ರ ಬರೆದು ಟಿಡಿಆರ್‍ಗೆ ಸಂಬಂಧಪಟ್ಟ ಎಲ್ಲ ದಾಖಲೆಗಳಿಗೂ ಸೂಕ್ತ ಭದ್ರತೆ ಒದಗಿಸಬೇಕೆಂದು ಮನವಿ ಮಾಡಿದ್ದಾರೆ.

ನಿನ್ನೆಯ ಬೆಂಕಿ ಪ್ರಕರಣದಲ್ಲಿ ಪಿಡಿಆರ್‍ನ ದಾಖಲಾತಿಗಳು ನಷ್ಟವಾಗಿರುವ ಬಗ್ಗೆ ನಮಗೆ ಅಧಿಕೃತವಾಗಿ ಯಾವುದೇ ಮಾಹಿತಿ ಬಂದಿಲ್ಲ. ಒಂದು ವೇಳೆ ಉದ್ದೇಶಪೂರ್ವಕವಾಗಿ ಸಾಕ್ಷ್ಯಗಳನ್ನು ನಾಶ ಮಾಡುವ ಪ್ರಯತ್ನ ಮಾಡಿದ್ದರೆ, ದಾಖಲಾತಿಗಳು ಸುಟ್ಟುಹೋಗಿದ್ದರೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸಿಬಿ ಸಹಜವಾಗಿಯೆ ದಾಖಲಾತಿ ನಾಶ ಮಾಡಿದವರ ವಿರುದ್ದ ಕ್ರಮ ಜರುಗಿಸಲಿದೆ ಎಂದು ಎಸಿಬಿಯ ಎಸ್‍ಪಿ ಸಂಜಯ್ ಪಾಟೀಲ್ ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ