ಮುಂದುವರೆದ ಕೇಂದ್ರ ಸರ್ಕಾರ ಹಾಗೂ ಮಮತಾ ಬ್ಯಾನರ್ಜಿ ನಡುವಿನ ಕಿತ್ತಾಟ

ನವದೆಹಲಿ: ಕೇಂದ್ರ ಸರ್ಕಾರ ಹಾಗೂ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ನಡುವಿನ ಕಿತ್ತಾಟ ಮತ್ತೆ ಮುಂದುವರೆದಿದ್ದು, ಫೊನಿ ಚಂಡಮಾರುತದ ಅಬ್ಬರಕ್ಕೆ ತತ್ತರಿಸಿರುವ ಪಶ್ಚಿಮ ಬಂಗಾಳದ ಸಂತ್ರಸ್ತರ ಪರಿಹಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಜತೆಗಿನ ಪರಿಶೀಲನಾ ಸಭೆಯನ್ನು ಮಮತಾ ಬ್ಯಾನರ್ಜಿ ಸರ್ಕಾರ ಬಹಿಷ್ಕರಿಸಿದೆ.

ಒಡಿಶಾದಲ್ಲಿ ಫೊನಿಯಿಂದ ಉಂಟಾಗಿರುವ ಹಾನಿ ಬಗ್ಗೆ ಸೋಮವಾರ ವೈಮಾನಿಕ ಸಮೀಕ್ಷೆ ನಡೆಸಿದ ಮೋದಿ ನಂತರ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡುವ ಯೋಜನೆ ಹಾಕಿಕೊಂಡಿದ್ದರು. ಫೊನಿಯಿಂದ ಉಂಟಾದ ಹಾನಿ ಕುರಿತು ಪರಿಶೀಲನಾ ಸಭೆ ನಡೆಸಲು ನಿರ್ಧರಿಸಿದ್ದರು. ಆದರೆ ಸಭೆಗೆ ಹಾಜರಾಗಲು ಮಮತಾ ಬ್ಯಾನರ್ಜಿ ಸರ್ಕಾರ ನಿರಾಕರಿಸಿದೆ.

ಈ ಬಗ್ಗೆ ಪ್ರಧಾನಿ ಕಾರ್ಯಾಲಯಕ್ಕೆ ತಿಳಿಸಿರುವ ಪಶ್ಚಿಮ ಬಂಗಾಳ ಸರ್ಕಾರ, ರಾಜ್ಯದ ಅಧಿಕಾರಿಗಳು ಚುನಾವಣೆ ಕೆಲಸದಲ್ಲಿ ನಿರತರಾಗಿದ್ದಾರೆ. ಹೀಗಾಗಿ ಸಭೆ ನಡೆಸಲು ಸಾಧ್ಯವಿಲ್ಲ ಎಂದಿದೆ.

ಫೊನಿ ಚಂಡಮಾರುತದ ಕುರಿತಂತೆ ಪ್ರಧಾನಿ ಮೋದಿ, ಒಡಿಶಾ ಸಿಎಂ ನವೀನ್ ಪಟ್ನಾಯಕ್​ಗೆ ಕರೆ ಮಾಡಿ ಮಾತನಾಡಿದ್ದಾರೆ. ಆದರೆ ತಮಗೆ ಕರೆ ಮಾಡಿಲ್ಲ ಎಂದು ಕೆಲ ದಿನಗಳ ಹಿಂದೆ ಮಮತಾ ಬ್ಯಾನರ್ಜಿ ಆರೋಪಿಸಿದ್ದರು. ಪ್ರಧಾನಿ ಕಾರ್ಯಾಲಯ ಆರೋಪವನ್ನು ತಳ್ಳಿಹಾಕಿತ್ತು. ಮಮತಾ ಬ್ಯಾನರ್ಜಿಯನ್ನು ಸಂರ್ಪಸಲು ಎರಡು ಬಾರಿ ಕರೆ ಮಾಡಿದ್ದೇವೆ. ಮೊದಲು ಸಿಎಂ ಪ್ರವಾಸದಲ್ಲಿದ್ದಾರೆ ಎಂದು ಅಧಿಕಾರಿಗಳು ಉತ್ತರಿಸಿದ್ದರು. ಮತ್ತೊಮ್ಮೆ ಮಾಡಿದ ಕರೆಗೆ ಉತ್ತರಿಸಲೇ ಇಲ್ಲ ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ.

PM Modi,Mamata banerjee,Fani cyclone

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ