ಮುಖಂಡರುಗಳು ಗೊಂದಲಕಾರಿ ಹೇಳಿಕೆಗಳನ್ನು ನೀಡಬಾರದು-ಸಚಿವ ಆರ್.ವಿ.ದೇಶಪಾಂಡೆ

ಬೆಂಗಳೂರು, ಮೇ 9-ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಬೇಕೆಂಬ ಹೇಳಿಕೆಗಳಿಂದ ಮೈತ್ರಿ ಸರ್ಕಾರದ ವಾತಾವರಣ ಹದಗೆಡಲಿದೆ. ಹಾಗಾಗಿ ಯಾರೂ ಈ ವಿಷಯವನ್ನು ಪದೇ ಪದೇ ಚರ್ಚಿಸಬಾರದು ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಮನವಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಕುಮಾರಸ್ವಾಮಿ ಸಿಎಂ ಆಗಿದ್ದಾರೆ. ಮುಂದಿನ ನಾಲ್ಕು ವರ್ಷಗಳವರೆಗೂ ಆಗಿರುತ್ತಾರೆ. ಜೆಡಿಎಸ್-ಕಾಂಗ್ರೆಸ್ ಎರಡೂ ಪಕ್ಷಗಳು ಸೇರಿಯೇ ಈ ತೀರ್ಮಾನ ತೆಗೆದುಕೊಂಡಿವೆ. ಹಾಗಾಗಿ ಯಾವುದೇ ಪಕ್ಷಗಳ ಮುಖಂಡರು ಗೊಂದಲಕಾರಿ ಹೇಳಿಕೆಗಳನ್ನು ನೀಡಬಾರದು ಎಂದು ಸಲಹೆ ನೀಡಿದರು.

ಮುಂದೆ ಚುನಾವಣೆ ನಡೆದು ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಮತ್ತೊಮ್ಮೆ ಮುಖ್ಯಮಂತ್ರಿ ವಿಷಯ ಚರ್ಚೆಯಾಗಲಿ. ಸದ್ಯಕ್ಕೆ ಆ ವಿಷಯ ಈಗ ಚರ್ಚೆ ಬೇಡ. ನಾನು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಾಗಿಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಬರಗಾಲ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ದೇಶಪಾಂಡೆ ಅವರು, ಯಡಿಯೂರಪ್ಪ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ನಾವು ಬರಗಾಲವನ್ನು ಸಮರ್ಥವಾಗಿ ನಿಭಾಯಿಸಿದ್ದೇವೆ.

ಮುಖ್ಯಮಂತ್ರಿಯವರು ಎರಡು ಬಾರಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯತ್ ಮುಖ್ಯಾಧಿಕಾರಿಗಳ ಸಭೆ ನಡೆಸಿದ್ದಾರೆ. ನಾನು ಎಲ್ಲಾ ಕಡೆ ಪ್ರವಾಸ ಮಾಡಿ ಪರಿಶೀಲನೆ ನಡೆಸಿದ್ದೇನೆ. ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿದ್ದೇವೆ ಎಂದರು.

ಬರ ನಿರ್ವಹಣೆಗೆ ಹಣಕಾಸಿನ ಕೊರತೆ ಇಲ್ಲ. ಜಿಲ್ಲಾಧಿಕಾರಿಗಳ ವೈಯಕ್ತಿಕ ಖಾತೆಯಲ್ಲಿ 10 ಕೋಟಿ ಹಣವಿದೆ. ಎಲ್ಲಿಯಾದರೂ ಕುಡಿಯುವ ನೀರಿನ ಸಮಸ್ಯೆ ಕಂಡುಬಂದರೆ ತಕ್ಷಣ ಬಗೆಹರಿಸುತ್ತೇವೆ. ಬರ ಪರಿಹಾರ ಕಾಮಗಾರಿಗಳಿಗೆ ಕೆಲವು ತಾಂತ್ರಿಕ ಪ್ರಯತ್ನಗಳಿವೆ. ಅದನ್ನು ಬಗೆಹರಿಸಿಕೊಂಡು ಬರನಿರ್ವಹಣೆ ಮಾಡುತ್ತಿದ್ದೇವೆ ಅವರು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ