ಕೆಲವರು ವೈಯುಕ್ತಿಕ ಚಪಲಕ್ಕಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ-ಸಚಿವ ವೆಂಕಟರಮಣಪ್ಪ

ಬೆಂಗಳೂರು, ಮೇ 13- ಕೆಲವರು ಬಾಯಿ ಚಪಲಕ್ಕಾಗಿ ಮತ್ತು ಚಟ ತೀರಿಸಿಕೊಳ್ಳಲು ಹೇಳಿಕೆಗಳನ್ನು ನೀಡುತ್ತಾರೆ. ಅದಕ್ಕೆಲ್ಲ ತಲೆ ಕೆಡಿಸಿಕೊಳ್ಳುವ ಅಗತ್ಯ ಇಲ್ಲ ಎಂದು ಕಾರ್ಮಿಕ ಸಚಿವ ವೆಂಕಟರಮಣಪ್ಪ, ಜೆಡಿಎಸ್ ಅಧ್ಯಕ್ಷ ವಿಶ್ವನಾಥ್ ವಿರುದ್ಧ ಕಿಡಿಕಾರಿದ್ದಾರೆ.

ಚಿತ್ರದುರ್ಗದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್-ಜೆಡಿಎಸ್‍ನ ವರಿಷ್ಠರು ಕುಳಿತು ಚರ್ಚೆ ಮಾಡಿ ಸಮ್ಮಿಶ್ರ ಸರ್ಕಾರ ರಚಿಸಿದ್ದಾರೆ. ಅದು ಐದು ವರ್ಷ ಅಧಿಕಾರಾವಧಿ ಪೂರ್ಣಗೊಳಿಸುತ್ತದೆ. ಕೆಲವರು ತಮ್ಮ ವೈಯಕ್ತಿಕ ಚಪಲಕ್ಕಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರು.

ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿರುವುದರಲ್ಲಿ ತಪ್ಪಿಲ್ಲ. ಮುಂದಿನ ಚುನಾವಣೆಯಲ್ಲಿ ಬಹುಮತ ಪಡೆದು ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗುತ್ತಾರೆ. ಕಾಂಗ್ರೆಸ್ ನಾಯಕರ ಹೇಳಿಕೆಗಳಿಗೆ ನನ್ನ ಬೆಂಬಲವೂ ಇದೆ ಎಂದು ಹೇಳಿದರು.

ಬಿಜೆಪಿಯ ಯಡಿಯೂರಪ್ಪ ಮತ್ತು ಈಶ್ವರಪ್ಪ ಅವರಿಗೆ ತಲೆ ಕೆಟ್ಟಿದೆ. ಹಾಗಾಗಿ ಸಮ್ಮಿರ್ಶರ ಸರ್ಕಾರ ಪತನಗೊಳ್ಳುತ್ತದೆ. ಹೊಸ ಸರ್ಕಾರ ರಚಿಸುತ್ತೇವೆ ಎಂದು ಹೇಳುತ್ತಿದ್ದಾರೆ. ಅವರಿಗೆ ತಾಕತ್ತಿದ್ದರೆ, ಹೊಸ ಸರ್ಕಾರ ರಚಿಸುವ ದಿನಾಂಕ ಪ್ರಕಟ ಮಾಡಲಿ. ಸಮ್ಮಿಶ್ರ ಸರ್ಕಾರ ಪತನಗೊಳಿಸಲು ನಡೆಸುತ್ತಿರುವ ಆಪರೇಷನ್ ಕಮಲವನ್ನು ಬಹಿರಂಗವಾಗಿಯೇ ಮಾಡಲಿ ಎಂದು ಸವಾಲು ಹಾಕಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ