ಕಾಂಗ್ರೇಸಿಗರು ಜಾತಿ ವಿಷ ಬೀಜ ಬಿತ್ತುತ್ತಿದ್ದಾರೆ

ಹುಬ್ಬಳ್ಳಿ, ಮೇ 16- ಕುಂದಗೋಳ ಉಪಚುನಾವಣೆಯಲ್ಲಿ ಕಾಂಗ್ರೆಸ್ಸಿಗರು ಜಾತಿ ವಿಷ ಬೀಜ ಬಿತ್ತಿ ಮತ ಪಡೆಯುವ ಹುನ್ನಾರ ನಡೆಸಿದ್ದಾರೆ. ಆದರೆ ಅವರ ಆಟ ನಡೆಯೊಲ್ಲ. ಮತದಾರರು ಜಾಗೃತರಾಗಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹರಿಹಾಯ್ದಿದ್ದಾರೆ.

ಬಿಜೆಪಿ ಅಭ್ಯರ್ಥಿ ಚಿಕ್ಕನಗೌಡ್ರ ಪರ ಮತ ಯಾಚನೆಗೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರದಲ್ಲಿ ಕಾಂಗ್ರೆಸ್‍ನವರು ಹಣದ ಹೊಳೆ ಹರಿಸುತ್ತಿದ್ದಾರೆ. ಆಡಳಿತ ಯಂತ್ರ ದುರುಪಯೋಗವಾಗುತ್ತಿದೆ.ನಿನ್ನೆ ಒಂದೇ ದಿನಕ್ಕೆ ಸುಮಾರು 5 ಕೋಟಿ ರೂ.ಹಣ ಸಂಗ್ರಹಿಸಿದ್ದಾರೆ ಎಂಳದು ಆರೋಪ ಮಾಡಿದರಲ್ಲದೇ ಸಚಿವರ ಬೆಂಗಾವಲು ಸ್ಥಗಿತಗೊಳಿಸಬೇಕು ಎಂದರು.

ಕಾಂಗ್ರೆಸ್‍ನವರು ಪ್ರಚಾರದಲ್ಲಿ ಅಭಿವೃದ್ಧಿ ವಿಚಾರ ಮಾತನಾಡುತ್ತಿಲ್ಲ. ಬಿಜೆಪಿ ವಿರುದ್ಧ ಅಪಪ್ರಚಾರ, ಟೀಕೆ ಮಾಡುವುದೇ ಅವರ ಕೆಲಸವಾಗಿದೆ. ಡಿ.ಕೆ.ಶಿವಕುಮಾರ್ ಮತ್ತು ಎಂ.ಬಿ.ಪಾಟೀಲ್ ಅವರಿಬ್ಬರೂ ಭ್ರಷ್ಟರು ಎಂದರು.

ಕುಂದಗೋಳ, ಚಿಂಚೋಳಿ ಎರಡೂ ಕ್ಷೇತ್ರಗಳಲ್ಲಿ ಗೆಲುವಿಗಾಗಿ ತಲಾ 50 ಕೋಟ ಖರ್ಚು ಮಾಡಲಾಗುತ್ತಿದೆ. ಅಷ್ಟೇ ಅಲ್ಲದೇ ಜನರಲ್ಲಿ ಭಯದ ವಾತಾವರಣ ಸೃಷ್ಠಿಸುತ್ತಿದ್ದಾರೆ ಎಂದರು.

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲು ದುಡ್ಡು ಚೆಲ್ಲುತ್ತಿದ್ದಾರೆ.ಅವರನ್ನು ನೋಡಿದರೆ ಅಯ್ಯೋ ಪಾಪ ಎನಿಸುತ್ತದೆ.ಈ ಬಗ್ಗೆ ಅವರು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಹೇಳಿದರು.

ಜಮೀರ್ ಅಹ್ಮದ್‍ಖಾನ್ ಹೇಳಿಕೆಗಳ ಬಗ್ಗೆ ಪ್ರಸ್ತಾಪಿಸಿದ ಅವರು, ಅವರ ನಾಲಿಗೆಗೆ ಲಗಾಮು ಇಲ್ಲ. ಅವರೊಬ್ಬ ಕೋಮುವಾದಿ ಎಂದು ಟೀಕಿಸಿದರು.

ಕುಂದಗೋಳ ಮತ ಕ್ಷೇತ್ರದಲ್ಲಿ ಬಿಜೆಪಿ ಪರ ಒಲವಿದೆ.ನರೇಂದ್ರ ಮೋದಿ ಎರಡನೇ ಬಾರಿ ಪ್ರಧಾನಿಯಾಗುತ್ತಾರೆ.ಅದರಂತೆ ಪ್ರಹ್ಲಾದಜೋಶಿ ಅವರು ಮತ್ತೆ ಸಂಸದರಾಗಿ ಆಯ್ಕೆಯಾಗುವುದು ಖಚಿತ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ