ಚುನಾವಣೋತ್ತರ ಸಮೀಕ್ಷೆ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅಸಮಾಧಾನ

ಬೆಂಗಳೂರು, ಮೇ 20- ಇತ್ತೀಚೆಗೆ ನಡೆದಿರುವ ಚುನಾವಣೋತ್ತರ ಸಮೀಕ್ಷೆಗಳು ದೇಶದಲ್ಲಿ ಇನ್ನೂ ಪ್ರಧಾನಿ ನರೇಂದ್ರ ಮೋದಿ ಅಲೆ ಇದೆ ಎಂಬುದನ್ನು ನಂಬಿಸುವ ಪ್ರಯತ್ನ ನಡೆಸಿವೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಟ್ವಿಟರ್‍ನಲ್ಲಿ ಪ್ರತಿಕ್ರಿಯಿಸಿರುವ ಅವರು, ಕೃತಕವಾಗಿ ಮತ್ತು ಉದ್ದೇಶ ಪೂರ್ವಕವಾಗಿ ಸೃಷ್ಟಿಸಲಾದ ಮೋದಿ ಅಲೆಯನ್ನು ಕಾಯ್ದಿಕೊಳ್ಳಲು ಬಿಜೆಪಿ ಪ್ರಯತ್ನಿಸುತ್ತಿದೆ. ಆದರೆ, ಬಿಜೆಪಿ ಪಕ್ಷಕ್ಕಿಂತಲೂ ಪ್ರಾದೇಶಿಕ ಪಕ್ಷಗಳು ಹೆಚ್ಚು ಸ್ಥಾನಗಳಿಸಲಿದ್ದು, ಕೇಂದ್ರದಲ್ಲಿ ಸರ್ಕಾರ ರಚಿಸಲು ಸಂಖ್ಯಾಬಲದ ಕೊರತೆ ಕಂಡು ಬಂದರೆ ಅದನ್ನು ತುಂಬಲು ಪ್ರಾದೇಶಿಕ ಪಕ್ಷಗಳು ಶಕ್ತಿಯುತವಾಗಿವೆ ಎಂದು ಟ್ವಿಟರ್‍ನಲ್ಲಿ ತಿಳಿಸಿದ್ದಾರೆ.

ಮತಯಂತ್ರಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ವಿಶ್ವಾದ್ಯಂತ ಮುಂದುವರೆದ ದೇಶಗಳೂ ಕೂಡ ಮತಪತ್ರಗಳನ್ನೇ ಬಳಕೆ ಮಾಡುತ್ತಿವೆ. ವಿರೋಧ ಪಕ್ಷಗಳು ಮತಯಂತ್ರಗಳ ಬಗ್ಗೆ ಗಂಭೀರವಾದ ಆರೋಪ ಮಾಡಿ ಸುಪ್ರೀಂಕೋರ್ಟ್ ಬಾಗಿಲು ಕೂಡ ತಟ್ಟಿದ್ದವು.

ಮೇ 19ರಂದು ಪ್ರಕಟವಾಗಿರುವ ಚುನಾವಣೋತ್ತರ ಸಮೀಕ್ಷೆಗಳನ್ನು ನೋಡಿದರೆ ಮತಯಂತ್ರಗಳ ದುರುಪಯೋಗದ ಬಗ್ಗೆ ಅನುಮಾನಗಳು ಬರುತ್ತಿವೆ ಎಂದು ಅವರು ಹೇಳಿದ್ದಾರೆ.

ಚುನಾವಣೋತ್ತರ ಸಮೀಕ್ಷೆಗಳು ಒಬ್ಬ ವ್ಯಕ್ತಿ, ಒಂದು ಪಕ್ಷದ ಪರವಾಗಿ ಜನಾಭಿಪ್ರಾಯ ಮೂಡಿಸುವ ಪ್ರಯತ್ನ ನಡೆಸಿದಂತೆ ಕಂಡುಬರುತ್ತಿದೆ ಎಂದು ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ