ಮೈತ್ರಿ ಸರ್ಕಾರ ಜನರ ಪಾಲಿಗೆ ಇದ್ದು ಇಲ್ಲದಂತಾಗಿದೆ-ನೂತನ ಸಂಸದ ಡಾ.ಉಮೇಶ್ ಜಾಧವ್

ಬೆಂಗಳೂರು,ಮೇ 24- ಕಾಂಗ್ರೆಸ್-ಜೆಡಿಎಸ್‍ನಲ್ಲಿ ಅಸಮಾಧಾನಗೊಂಡಿರುವ ಅನೇಕ ಶಾಸಕರು ಸ್ವಯಂಪ್ರೇರಿತರಾಗಿ ಪಕ್ಷದಿಂದ ಹೊರಬಂದು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಕಲಬುರಗಿ ಲೋಕಸಭಾ ಕ್ಷೇತ್ರದ ನೂತನ ಸಂಸದ ಡಾ.ಉಮೇಶ್ ಜಾಧವ್ ಇಂದಿಲ್ಲಿ ಹೇಳಿದರು.

ಸಮ್ಮಿಶ್ರ ಸರ್ಕಾರದಲ್ಲಿರುವ ಅನೇಕ ಶಾಸಕರು ಬಿಜೆಪಿಗೆ ಬರಲು ತುದಿಗಾಲಲ್ಲಿ ನಿಂತಿದ್ದಾರೆ.ಫಲಿತಾಂಶ ಬರಲಿ ಎಂದು ಕೆಲವರು ಕಾದು ಕುಳಿತಿದ್ದರು.ಈ ಸರ್ಕಾರ ಜನರ ಪಾಲಿಗೆ ಇದ್ದು ಇಲ್ಲದಂತಾಗಿದೆ ಎಂದಿ ವಾಗ್ದಾಳಿ ನಡೆಸಿದರು.

ಯಾವುದೇ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಸಾಧ್ಯವಿಲ್ಲ.ನನ್ನಂತಹ ಅನೇಕರು ಅಸಮಾಧಾನಗೊಂಡಿದ್ದಾರೆ. ಕ್ಷೇತ್ರಕ್ಕೆ ಅನುದಾನವೂ ಸಿಗುತ್ತಿಲ್ಲ. ಕೆಲಸ ಕಾರ್ಯಗಳು ನಡೆಯುತ್ತಿಲ್ಲ. ನಾವು ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಕ್ಕೆ ಕೈ ಹಾಕುವುದಿಲ್ಲ. ಅದು ತನ್ನಿಂದ ತಾನೇ ಬಿದ್ದು ಹೋಗುತ್ತದೆ ಎಂದು ಭವಿಷ್ಯ ನುಡಿದರು.

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಾಧವ್, ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ನೈತಿಕವಾಗಿ ಸರ್ಕಾರ ಜನರಿಂದ ತಿರಸ್ಕøತವಾಗಿದೆ. ಕಾಂಗ್ರೆಸ್-ಜೆಡಿಎಸ್ ನಾಯಕರು ನೈತಿಕತೆ ಇದ್ದರೆ ರಾಜೀನಾಮೆ ನೀಡಬೇಕೆಂದು ಒತ್ತಾಯ ಮಾಡಿದರು.

ನಾವು ಮೊದಲಿನಿಂದಲೂ ಸಮ್ಮಿಶ್ರ ಸರ್ಕಾರವನ್ನು ವಿರೋಧ ಮಾಡುತ್ತಿದ್ದೆವು.ಇದು ಕೇವಲ ಅವಕಾಶವಾದಿ ಹೊಂದಾಣಿಕೆ ಎಂದು ಪ್ರಾರಂಭದಲ್ಲೇ ಹೇಳಿದ್ದೆವು.

ನಿನ್ನೆಯ ಫಲಿತಾಂಶ ಸಮ್ಮಿಶ್ರ ಸರ್ಕಾರ ಎಲ್ಲ ರಂಗಗಳಲ್ಲೂ ವಿಫಲವಾಗಿದೆ ಎಂಬುದನ್ನು ಸಾಬೀತುಪಡಿಸಿದೆ ಎಂದರು.

ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆಯನ್ನೇ ಕುಮಾರಸ್ವಾಮಿ ಇಟ್ಟುಕೊಂಡಿಲ್ಲ. ಜನರಿಂದ ತಿರಸ್ಕøತವಾಗಿರುವವರು ಯಾವ ಮುಖವಿಟ್ಟುಕೊಂಡು ಆಡಳಿತ ನಡೆಸುತ್ತಾರೆ.ಸಂಜೆಯೊಳಗೆ ಅವರು ರಾಜೀನಾಮೆ ನೀಡಿ ತಮ್ಮ ಘನತೆಯನ್ನು ಉಳಿಸಿಕೊಳ್ಳಲಿ ಎಂದು ಸವಾಲು ಹಾಕಿದರು.

ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಮಾತನಾಡುವುದರಲ್ಲಿ ಅರ್ಥವಿಲ್ಲ. ಜಿಲ್ಲೆಯ ಜನರು ಬೇಸತ್ತು ಅಪ್ಪ-ಮಕ್ಕಳಿಗೆ ತಕ್ಕ ಪಾಠ ಕಲಿಸಿದ್ದಾರೆ. ಗುಲ್ಬರ್ಗದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ.ಪ್ರಿಯಾಂಕ ಖರ್ಗೆ ದುರಾಹಂಕಾರಕ್ಕೆ ಜನತೆ ಪಾಠ ಕಲಿಸಿದ್ದಾರೆ ಎಂದು ಹರಿಹಾಯ್ದರು.

ನನ್ನನ್ನು ಪ್ರಧಾನಿ ನರೇಂದ್ರಮೋದಿ ಅವರು ಸಂಪುಟಕ್ಕೆ ತೆಗೆದುಕೊಳ್ಳುವುದು, ಬಿಡುವುದು ಅವರ ವಿವೇಚನೆಗೆ ಬಿಟ್ಟಿದ್ದು, ನಾನು ಮಂತ್ರಿಯಾಗಬೇಕೆಂದು ಯಾರ ಬಳಿ ಲಾಬಿ ನಡೆಸುವುದಿಲ್ಲ. ಸಚಿವ ಸ್ಥಾನ ನೀಡಿದರೆ ಕೆಲಸ ಮಾಡುತ್ತೇನೆ ಎಂದಷ್ಟೇ ಪ್ರತಿಕ್ರಿಯಿಸಿದರು.

ಇದಕ್ಕೂ ಮುನ್ನ ಅಪಾರ ಬೆಂಬಲಿಗರೊಂದಿಗೆ ಗುಲ್ಬರ್ಗಕ್ಕೆ ಆಗಮಿಸಿದ ಜಾಧವ್ ಅವರನ್ನು ಯಡಿಯೂರಪ್ಪ ಆತ್ಮೀಯವಾಗಿ ಅಭಿನಂದಿಸಿದರು. ಓಹೋ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿಯೇ ಬಿಟ್ಟೀರ ಎಂದರು

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ