ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿ ಮಾಡಿದ ಸಿಎಂ ಕುಮಾರಸ್ವಾಮಿ:ವಿವಿಧ ನೀರಾವರಿ ಯೋಜನೆಗಳ ಕುರಿತು ಚರ್ಚೆ

ಬೆಂಗಳೂರು: ಮಹದಾಯಿ ಹಾಗೂ ಕೃಷ್ಣಾ ನ್ಯಾಯಾಧಿಕರಣದ ತೀರ್ಪಿನ ಗೆಜೆಟ್ ಅಧಿಸೂಚನೆ ಹೊರಡಿಸುವ ಬಗ್ಗೆ ಸಂಬಂಧಿಸಿದ ರಾಜ್ಯಗಳೊಂದಿಗೆ ಸಭೆ ಕರೆದು ಚರ್ಚಿಸುವುದಾಗಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ತಿಳಿಸಿದರು. ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ನೀರಾವರಿ ಯೋಜನೆಗಳ ಕುರಿತು ಚರ್ಚಿಸಿದರು.

ಈ ಸಂದರ್ಭದಲ್ಲಿ ಅವರು ಮೇಕೆದಾಟು ಯೋಜನೆಗೆ ಅನುಮತಿ ನೀಡುವಂತೆ ಹಾಗೂ ಕೃಷ್ಣಾ ನ್ಯಾಯಾಧಿಕಾರಣದ ಆದೇಶ ಹಾಗೂ ಮಹದಾಯಿ ನ್ಯಾಯಾಧಿಕರಣದ ಆದೇಶಗಳ ಗಜೆಟ್ ಅಧಿಸೂಚನೆ ಹೊರಡಿಸಿ, ಶೀಘ್ರವೇ ಈ ಯೋಜನೆಗಳ ಅನುಷ್ಠಾನಕ್ಕೆ ಅನುವು ಮಾಡಿಕೊಡುವಂತೆ ಮನವಿ ಮಾಡಿದರು.

ಮೇಕೆದಾಟು: ಕರ್ನಾಟಕ ರಾಜ್ಯವು ಜನವರಿ 18, 2019 ರಂದು ಕೇಂದ್ರ ಸರ್ಕಾರಕ್ಕೆ ಮೇಕೆದಾಟು ಬ್ಯಾಲನ್ಸಿಂಗ್ ರಿಸರ್ವಯರ್ ಕಂ ಕುಡಿಯುವ ನೀರಿನ ಯೋಜನೆಯ ವಿಸ್ತøತ ಯೋಜನಾ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಅನುಮೋದನೆಗಾಗಿ ಸಲ್ಲಿಸಿದೆ. ಈ ಯೋಜನೆಯಿಂದ 4.75 ಟಿಎಂಸಿ ನೀರನ್ನು ಬೆಂಗಳೂರಿಗೆ ಕುಡಿಯುವ ನೀರು ಪೂರೈಕೆಗೆ ಬಳಸುವ ಹಾಗೂ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಉದ್ದೇಶವಿದೆ. ಇದು ಕರ್ನಾಟಕದ ಪಾಲಿನ ನೀರನ್ನು ಬಳಕೆ ಮಾಡಿಕೊಳ್ಳಲು ಕರ್ನಾಟಕದ ನೆಲದಲ್ಲಿ ಅನುಷ್ಠಾನಗೊಳ್ಳುತ್ತಿರುವ ಯೋಜನೆಯಾದ್ದರಿಂದ ಈ ಯೋಜನೆಗೆ ಅನುಮತಿ ನೀಡಲು ತಮಿಳುನಾಡು ಸರ್ಕಾರದ ಅಭಿಪ್ರಾಯ ಪಡೆಯುವ ಅಗತ್ಯವಿರುವುದಿಲ್ಲ. ಆದ್ದರಿಂದ ಶೀಘ್ರವೇ ಈ ಯೋಜನೆಗೆ ಅನುಮತಿ ನೀಡುವಂತೆ ಮುಖ್ಯಮಂತ್ರಿಗಳು ಕೇಂದ್ರ ಸಚಿವರನ್ನು ಕೋರಿದರು.

ಕೃಷ್ಣಾ ನ್ಯಾಯಾಧಿಕರಣ-2: ಕೃಷ್ಣಾ ಜಲವಿವಾದಗಳ ನ್ಯಾಯಾಧಿಕರಣ-2 ರಾಜ್ಯಕ್ಕೆ 166 ಟಿಎಂಸಿ ನೀರನ್ನು ನೀರಾವರಿ ಮತ್ತು ಇತರ ಉದ್ದೇಶಗಳಿಗಾಗಿ ಹಂಚಿಕೆ ಮಾಡಿದೆ. ಆದರೆ ಕೃಷ್ಣಾ ನ್ಯಾಯಾಧಿಕರಣದ ಆದೇಶ ಗಜೆಟ್ ಅಧಿಸೂಚನೆ ಹೊರಡಿಸದ ಕಾರಣ ರಾಜ್ಯದ ಪಾಲಿನ ನೀರಿನ ಸದ್ಬಳಕೆ ಸಾಧ್ಯವಾಗುತ್ತಿಲ್ಲ. ಆದ್ದರಿಂದ ಶೀಘ್ರವೇ ಗಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಿದರು.

ಮಹದಾಯಿ ಜಲ ವಿವಾದ ನ್ಯಾಯಾಧಿಕರಣವೂ ಸಹ ರಾಜ್ಯಕ್ಕೆ 13.2 ಟಿಎಂಸಿ ನೀರು ಹಂಚಿಕೆ ಮಾಡಿದ್ದು, ಈ ಕುರಿತು ಇನ್ನೂ ಗಜೆಟ್ ಅಧಿಸೂಚನೆ ಹೊರಡಿಸದ ಕಾರಣ ಬಹುಕಾಲದಿಂದ ನೆನೆಗುದಿಗೆ ಬಿದ್ದಿದ್ದ ಹುಬ್ಬಳ್ಳಿ-ಧಾರವಾಡ ನಗರಗಳು ಹಾಗೂ ದಾರಿಯಲ್ಲಿರುವ ಪಟ್ಟಣ, ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸುವ ಕಳಸಾ-ಬಂಡೂರಿ ನಾಲಾ ಯೋಜನೆ ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಕಾವೇರಿ ಜಲ ವಿವಾದ ನ್ಯಾಯಾಧಿಕರಣದ ಹಂಚಿಕೆಗೆ ಸಂಬಂಧಿಸಿದಂತೆ, ನ್ಯಾಯಾಲಯದಲ್ಲಿ ಕಾವೇರಿ ಜಲಾನಯನ ಪ್ರದೇಶದ ರಾಜ್ಯಗಳು ಪ್ರಕರಣಗಳನ್ನು ದಾಖಲಿಸಿದ್ದಾಗ್ಯೂ, ನ್ಯಾಯಾಲಯದ ಅಂತಿಮ ತೀರ್ಪಿಗೆ ಒಳಪಡುವ ಷರತ್ತು ವಿಧಿಸಿ, ಗಜೆಟ್ ಅಧಿಸೂಚನೆ ಹೊರಡಿಸಲಾಗಿತ್ತು. ಅದೇ ರೀತಿ ಕೃಷ್ಣಾ ಹಾಗೂ ಮಹದಾಯಿ ನ್ಯಾಯಾಧಿಕರಣಗಳ ನೀರು ಹಂಚಿಕೆ ಕುರಿತಂತೆ ನ್ಯಾಯಾಲಯದ ತೀರ್ಪು ನಿರೀಕ್ಷಿಸಿ, ಗಜೆಟ್ ಅಧಿಸೂಚನೆ ಹೊರಡಿಸುವಂತೆ ಮನವಿ ಮಾಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ