ಜೂ.26 ಮತ್ತು 27ರಂದು ಮತ್ತೆ ಸಿಎಂ ಗ್ರಾಮ ವಾಸ್ತವ್ಯ

ಬೆಂಗಳೂರು, ಜೂ.23-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜೂ.26 ಮತ್ತು 27 ರಂದು ಮತ್ತೆ ಗ್ರಾಮ ವಾಸ್ತವ್ಯವನ್ನು ನಡೆಸಲಿದ್ದಾರೆ.

ಜೂ.25ರಂದು ರಾತ್ರಿ ಬೆಂಗಳೂರಿನಿಂದ ರೈಲಿನ ಮೂಲಕ ರಾಯಚೂರಿಗೆ ಪ್ರಯಾಣ ಬೆಳೆಸಲಿರುವ ಮುಖ್ಯಮಂತ್ರಿಗಳು, ಜೂ.26ರಂದು ಬೆಳಗ್ಗೆ ಜಿಲ್ಲೆಯ ಮಾನ್ವಿ ತಾಲೂಕಿನ ಕರಿಗುಡ್ಡ ಗ್ರಾಮದಲ್ಲಿ ಜನತಾದರ್ಶನ ನಡೆಸಲಿದ್ದಾರೆ.

ಅಂದು ಬೆಳಗ್ಗೆಯಿಂದ ಸಂಜೆಯವರೆಗೆ ಸಾರ್ವಜನಿಕರಿಂದ ಮನವಿಗಳನ್ನು ಸ್ವೀಕರಿಸಲಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಲಿದ್ದಾರೆ. ಅಂದು ಸಂಜೆ ರೈತರಿಗೆ ಮಾಹಿತಿ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ಮುಖ್ಯಮಂತ್ರಿ ಸ್ಥಳೀಯ ಶಾಲಾ ಮಕ್ಕಳು ನಡೆಸಿಕೊಡುವ ಸಾಂಸ್ಕøತಿಕ ಕಾರ್ಯಕ್ರಮ ವೀಕ್ಷಣೆ ಮಾಡಲಿದ್ದಾರೆ.

ನಂತರ ಶಾಲಾ ಮಕ್ಕಳು ಹಾಗೂ ಶಿಕ್ಷಕರೊಂದಿಗೆ ಭೋಜನ ಮಾಡಲಿರುವ ಮುಖ್ಯಮಂತ್ರಿ, ಕರಿಗುಡ್ಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ವಾಸ್ತವ್ಯವನ್ನು ಮಾಡಲಿದ್ದಾರೆ.

ಮರುದಿನ ಬೆಳಗ್ಗೆ ಕರಿಗುಡ್ಡದಿಂದ ಬೀದರ್ ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ಉಜಿಳಾಂಬ ಗ್ರಾಮಕ್ಕೆ ತೆರಳಲಿದ್ದಾರೆ. ಆ ಗ್ರಾಮದಲ್ಲೂ ಬೆಳಗ್ಗೆಯಿಂದ ಸಂಜೆಯವರೆಗೆ ಜನತಾದರ್ಶನ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಜನರ ಕುಂದುಕೊರತೆಗಳನ್ನು ಆಲಿಸಲಿದ್ದಾರೆ.

ಅಂದು ಸಂಜೆ ರೈತರಿಗೆ ಮಾಹಿತಿ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶಾಲಾ ಮಕ್ಕಳು ನಡೆಸಿಕೊಡುವ ಸಾಂಸ್ಕøತಿಕ ಕಾರ್ಯಕ್ರಮ ವೀಕ್ಷಿಸಲಿದ್ದಾರೆ. ನಂತರ ಶಾಲಾ ಮಕ್ಕಳು ಮತ್ತು ಶಿಕ್ಷಕರೊಂದಿಗೆ ರಾತ್ರಿ ಭೋಜನ ಮಾಡುವ ಮುಖ್ಯಮಂತ್ರಿ ಉಜಿಳಾಂಬ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂದು ರಾತ್ರಿ ಗ್ರಾಮ ವಾಸ್ತವ್ಯ ಮಾಡಲಿದ್ದು, ಜೂ.28 ರಂದು ವಿಶೇಷ ವಿಮಾನದ ಮೂಲಕ ಬೀದರ್‍ನಿಂದ ಬೆಂಗಳೂರಿಗೆ ಮರಳುವ ಕಾರ್ಯಕ್ರಮವಿದೆ.

ಜೂ.21 ರಂದು ಗುರುಮಿಟ್ಕಲ್ ತಾಲೂಕಿನ ಚಂಡರಕಿ ಗ್ರಾಮದಲ್ಲಿ ತಮ್ಮ ಮೊದಲ ಗ್ರಾಮ ವಾಸ್ತವ್ಯವನ್ನು ಮುಖ್ಯಮಂತ್ರಿ ಮಾಡಿದ್ದರು. ನಿನ್ನೆ ಕಲಬುರಗಿ ತಾಲೂಕಿನ ಹೆರೂರು ಬಿ ಗ್ರಾಮದಲ್ಲಿ ನಡೆಯಬೇಕಿದ್ದ ಜನತಾದರ್ಶನ ಹಾಗೂ ಗ್ರಾಮ ವಾಸ್ತವ್ಯವನ್ನು ಮಳೆಯಿಂದಾಗಿ ಮುಂದೂಡಲಾಗಿತ್ತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ