ನ್ಯೂಜೆರ್ಸಿಯ ಕಾಲಭೈರವ ದೇವಾಲಯ ಕನ್ನಡಿಗರ ಸಾಂಸ್ಕೃತಿಕ ಏಕೀಕರಣಕ್ಕೆ ಕೇಂದ್ರವಾಗಲಿದೆ: ಸಿಎಂ ಹೆಚ್​ಡಿಕೆ

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ನ್ಯೂ ಜೆರ್ಸಿಯ ಸೋಮರ್‍ಸೆಟ್ ಎಂಬಲ್ಲಿ 20 ಎಕರೆ ಪ್ರದೇಶದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನದ ವತಿಯಿಂದ ನಿರ್ಮಾಣವಾಗುತ್ತಿರುವ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಾಲಯದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂದಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಹೊರನಾಡಿಗರನ್ನು ಸಾಂಸ್ಕೃತಿಕವಾಗಿ ಒಂದಾಗಿಸಲು ಶ್ರದ್ಧಾ ಕೇಂದ್ರಗಳ ಅಗತ್ಯವಿದೆ. ಆ ನಿಟ್ಟಿನಲ್ಲಿ ಆದಿಚುಂಚನಗಿರಿ ಮಹಾಕ್ಷೇತ್ರ ನ್ಯೂಜೆರ್ಸಿಯಲ್ಲಿ ಸ್ಥಾಪಿಸುತ್ತಿರುವ ಶ್ರೀ ಕಾಲಭೈರೇಶ್ವರ ದೇವಾಲಯ ಒಂದು ಸ್ವಾಗತಾರ್ಹ ಹೆಜ್ಜೆ. ಇಂದು ಅದರ ಭೂಮಿ ಪೂಜೆ ಹಾಗೂ ಇತರೆ ಧಾರ್ಮಿಕ ವಿಧಿಗಳಲ್ಲಿ ಪಾಲ್ಗೊಂಡೆ” ಎಂದು ತಿಳಿಸಿದ್ದಾರೆ.

ಇದಕ್ಕೂ ಮುನ್ನ, ನ್ಯೂಜರ್ಸಿಗೆ ಆಗಮಿಸಿದ ಸಿಎಂ ಕುಮಾರಸ್ವಾಮಿ ಅವರನ್ನು ಸ್ಥಳೀಯ ಕನ್ನಡಿಗರು ಆದರದಿಂದ ಬರಮಾಡಿಕೊಂಡರು.

ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು, ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್, ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಅವರು ಸಿಎಂಗೆ ಸಾಥ್ ನೀಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ