ಮಾಜಿ ಪಿಎಂ ದೇವೇಗೌಡರ ಜೊತೆ ಸಮಾಲೋಚನೆ ನಡೆಸಿದ ಸಿಎಂ

ಬೆಂಗಳೂರು, ಜು.8-ಅತೃಪ್ತ ಶಾಸಕರ ರಾಜೀನಾಮೆಯಿಂದ ಉಂಟಾಗಿರುವ ಬಿಕ್ಕಟ್ಟು ಪರಿಹಾರ ಹಾಗೂ ಜೆಡಿಎಸ್‍ನ ಮುಂದಿನ ನಿರ್ಧಾರ ಕುರಿತಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಜತೆ ಇಂದು ಗಹನವಾದ ಮಾತುಕತೆ ನಡೆಸಿದರು.

ಪದ್ಮನಾಭನಗರದ ನಿವಾಸದಲ್ಲಿ ದೇವೇಗೌಡರನ್ನು ಭೇಟಿಯಾದ ಮುಖ್ಯಮಂತ್ರಿ ಮೈತ್ರಿ ಸರ್ಕಾರಕ್ಕೆ ಎದುರಾಗಿರುವ ಸಮಸ್ಯೆ ನಿವಾರಣೆ ಕುರಿತಂತೆ ಗಂಭೀರ ಸಮಾಲೋಚನೆ ನಡೆಸಿ ಸಲಹೆ-ಸೂಚನೆಗಳನ್ನು ಗೌಡರಿಂದ ಪಡೆದುಕೊಂಡಿದ್ದಾರೆ.

ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು ಕೂಡ ಇದೇ ಸಂದರ್ಭದಲ್ಲಿ ಗೌಡರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಮತ್ತೆ ಜೆಡಿಎಸ್ ಶಾಸಕರು ಆಪರೇಷನ್ ಕಮಲಕ್ಕೆ ಒಳಗಾಗುವುದನ್ನು ತಪ್ಪಿಸಲು ಎಲ್ಲರನ್ನೂ ಒಟ್ಟಾಗಿ ರೆಸಾರ್ಟ್‍ಗೆ ಕರೆದೊಯ್ಯುವ ಬಗ್ಗೆ ಗಂಭೀರ ಚರ್ಚೆ ನಡೆಸಿದರು.

ಕೊನೆಗಳಿಗೆವರೆಗೂ ಸಾಧ್ಯವಿರುವ ಎಲ್ಲ ಮಾರ್ಗೋಪಾಯಗಳನ್ನು ಬಳಸಿ ಸರ್ಕಾರ ಉಳಿಸಿಕೊಳ್ಳುವ ಪ್ರಯತ್ನವನ್ನು ಮುಂದುವರಿಸುವ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ. ಈಗಾಗಲೇ ರಾಜೀನಾಮೆ ನೀಡಿರುವ ಜೆಡಿಎಸ್ ಶಾಸಕರನ್ನು ಮನವೊಲಿಸುವ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ