ಸರ್ಕಾರ ಉಳಿಸಲು ದೇವರ ಮೊರೆ ಹೋದ ಎಚ್ .ಡಿ. ರೇವಣ್ಣ

ಚಿಕ್ಕಮಗಳೂರು: ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳಲು ಸಿಎಂ ಸಭೆ ಮೇಲೆ ಸಭೆ ಮಾಡುತ್ತಿದ್ದಾರೆ. ಇತ್ತ ಸರ್ಕಾರ ಉಳಿಸಲು ರೇವಣ್ಣ ದೇವರ ಮೊರೆ ಹೋಗಿದ್ದಾರೆ.

ಇಂದು ಬೆಳಗ್ಗೆಯೇ ರೇವಣ್ಣ ಶೃಂಗೇರಿ ದೇವಾಲಯಕ್ಕೆ ಹೋಗಿ ಶಾರದೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಶಾರದಾಂಬೆ ದೇವೇಗೌಡರ ಕುಟುಂಬದ ಇಷ್ಟದ ದೇವರಾಗಿದ್ದು, ಹೀಗಾಗಿ ಒಂದೇ ವಾರದಲ್ಲಿ ಎರಡು ಬಾರಿ ಶೃಂಗೇರಿಗೆ ರೇವಣ್ಣ ಬಂದು ಪೂಜೆ ಸಲ್ಲಿಸಿದ್ದಾರೆ.

ಈ ಹಿಂದೆ ದೇವೇಗೌಡರು ಶೃಂಗೇರಿಯಲ್ಲಿ ಅತಿರುದ್ರ ಮಹಾಯಾಗ ನಡೆಸಿದ್ದರು. ನಂತರ ಸರ್ಕಾರಕ್ಕೆ ಸಂಚಕಾರ ಬಂದಾಗ ದೇವೇಗೌಡರು ಒಂದೊಂದು ಯಾಗ ನಡೆಸಿದ್ದರು. ಅಷ್ಟೇ ಅಲ್ಲದೇ ಸಿಎಂ ಕೂಡ ತಮ್ಮ ಕುರ್ಚಿ ಉಳಿವಿಗಾಗಿ ಶೃಂಗೇರಿಯಲ್ಲಿ ಮೂರ್ನಾಲ್ಕು ಯಾಗ ಮಾಡಿಸಿದ್ದರು. ಇಂದು ರೇವಣ್ಣ ಮತ್ತೆ ಶಾರದಾಂಬೆ ದರ್ಶನ ಪಡೆದು ವಿಶೇಷ ಪೂಜೆ ಮಾಡಿಸಿದ್ದಾರೆ.

ವಿಧಾನ ಸಭೆ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಜೆಡಿಎಸ್ ಅಭ್ಯರ್ಥಿಗಳ ಬಿ ಫಾರಂಗಳನ್ನು ಶೃಂಗೇರಿಗೆ ತಂದು ಪೂಜೆ ಮಾಡಿ ಬಳಿಕ ನಾಮಪತ್ರ ಸಲ್ಲಿಸಲಾಗಿತ್ತು.

ಇತ್ತ ಮಾಜಿ ಪ್ರಧಾನಿ ದೇವೇಗೌಡರು ಕೂಡ ಸರ್ಕಾರ ಉಳಿಸಿಕೊಳ್ಳಲು ದೇವರ ಮೊರೆ ಹೋಗಿದ್ದಾರೆ. ಬೆಂಗಳೂರಿನ ಎಚ್‍ಎಸ್‍ಆರ್ ಲೇಔಟ್‍ನ ಈಶ್ವರನ ದೇವಸ್ಥಾನಕ್ಕೆ ಹೋಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇಂದು ಬೆಳಗ್ಗೆ ಸುಮಾರು 6 ಗಂಟೆಗೆ ಪದ್ಮನಾಭ ನಗರದ ಮನೆಯಿಂದ ಹೋಗಿ ಪೂಜೆ ಮಾಡಿಸಿ ಬಂದಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ