ಅತೃಪ್ತ ಶಾಸಕರ ಪಟ್ಟಿನಿಂದ ಟೆನ್ಷನ್‍ಗೆ ಒಳಗಾಗಿರುವ ಮುಖ್ಯಮಂತ್ರಿ

ಬೆಂಗಳೂರು, ಜು.10- ಕಾಂಗ್ರೆಸ್-ಜೆಡಿಎಸ್‍ನ ಅತೃಪ್ತ ಶಾಸಕರ ಬಿಗಿಪಟ್ಟಿನಿಂದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೆನ್ಷನ್‍ಗೆ ಒಳಗಾಗಿದ್ದಾರೆ.

ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ನೇತೃತ್ವದ ನಿಯೋಗ ಮುಂಬೈನ ಖಾಸಗಿ ಹೊಟೇಲ್‍ನಲ್ಲಿ ಬೀಡು ಬಿಟ್ಟಿರುವ ಉಭಯ ಪಕ್ಷಗಳ ಶಾಸಕರನ್ನು ಮನವೊಲಿಸಿ ಕರೆತರುತ್ತಾರೆಂಬ ವಿಶ್ವಾಸವಿತ್ತು. ಆದರೆ, ಹೊಟೇಲ್‍ನಲ್ಲಿರುವ ಶಾಸಕರು ಡಿ.ಕೆ.ಶಿವಕುಮಾರ್ ಮತ್ತು ಜೆಡಿಎಸ್‍ನ ಸಚಿವರು, ಶಾಸಕರನ್ನು ಭೇಟಿ ಮಾಡಲು ನಿರಾಕರಿಸಿದ್ದಾರೆ. ಜತೆಗೆ ಹೊಟೇಲ್‍ಗೂ ಪ್ರವೇಶ ಮಾಡದಂತೆ ತಡೆದಿರುವುದರಿಂದ ಮುಖ್ಯಮಂತ್ರಿ ಟೆನ್ಷನ್‍ಗೆ ಒಳಗಾಗಿದ್ದಾರೆ ಎನ್ನಲಾಗಿದೆ.

ಹೇಗಾದರೂ ಮಾಡಿ ಅತೃಪ್ತ ಶಾಸಕರನ್ನು ಸಂಪರ್ಕಿಸಿ ಮನವೊಲಿಸುವ ಪ್ರಯತ್ನ ಮಾಡುವಂತೆ ಡಿ.ಕೆ.ಶಿವಕುಮಾರ್ ನೇತೃತ್ವದ ನಿಯೋಗಕ್ಕೆ ಮುಖ್ಯಮಂತ್ರಿ ಸಲಹೆ ಮಾಡಿದ್ದು, ಪರ್ಯಾಯ ಮಾರ್ಗೋಪಾಯಗಳ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಕಳೆದ ಮೂರು ದಿನಗಳಿಂದಲೂ ಕಾಂಗ್ರೆಸ್ ನಾಯಕರೊಂದಿಗೆ ನಿರಂತರ ಸಂಪರ್ಕ, ಸಮಾಲೋಚನೆ ನಡೆಸುತ್ತಿರುವ ಮುಖ್ಯಮಂತ್ರಿ, ಮೈತ್ರಿ ಸರ್ಕಾರದ ಉಳಿವಿಗೆ ಸಾಧ್ಯವಿರುವ ಪರಿಹಾರ ಕ್ರಮಗಳ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಅತೃಪ್ತ ಶಾಸಕರ ರಾಜೀನಾಮೆಯಿಂದ ಸರ್ಕಾರಕ್ಕೆ ಎದುರಾಗಿರುವ ಸಂಕಷ್ಟ ಪರಿಹರಿಸುವ ಸಂಬಂಧ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಸಲಹೆಯನ್ನು ಕೂಡ ಪಡೆದಿದ್ದಾರೆ. ಇಂದು ಕೂಡ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಸೇರಿದಂತೆ ಕಾಂಗ್ರೆಸ್ ನಾಯಕರೊಂದಿಗೆ ಸಿಎಂ ಸಮಾಲೋಚನೆ ನಡೆಸಿದ್ದಾರೆ.

ರೆಸಾರ್ಟ್‍ನಲ್ಲಿ ಉಳಿದುಕೊಂಡಿರುವ ಜೆಡಿಎಸ್ ಶಾಸಕರೊಂದಿಗೂ ಸಮಾಲೋಚನೆ ನಡೆಸಿದ್ದು, ಮೈತ್ರಿ ಸರ್ಕಾರ ಉಳಿಸಿಕೊಳ್ಳುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರಚಲಿತ ರಾಜಕೀಯ ವಿದ್ಯಮಾನ ಹಾಗೂ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆದು ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ