ಇಂದು ಅತೃಪ್ತ ಶಾಸಕರ ಭವಿಷ್ಯ ನಿರ್ಧರಿಸಲಿದೆ ಸುಪ್ರೀಂ ಕೋರ್ಟ್; ತೀರ್ಪಿಗಾಗಿ ಕಾದು ಕುಳಿತಿರುವ ಯಡಿಯೂರಪ್ಪ!

ಬೆಂಗಳೂರು; ಮೈತ್ರಿ ಸರ್ಕಾರದ ಅತೃಪ್ತ ಶಾಸಕರು ನೀಡಿರುವ ರಾಜೀನಾಮೆ ಅರ್ಜಿ ಅಂಗೀಕಾರ ಕುರಿತ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ಕೈಗೆತ್ತಿಕೊಳ್ಳಲಿದ್ದು, ಎಲ್ಲಾ ಶಾಸಕರ ಹಣೆಬರಹ ನಿರ್ಧಾರವಾಗಲಿದೆ. ಬಿಜೆಪಿ ನಾಯಕರೂ ಮಹತ್ವಾಕಾಂಕ್ಷೆಯ ಬೆಳವಣಿಗೆಗೆ ಕಾದು ಕುಳಿತಿದ್ದಾರೆ.

ಕಾಂಗ್ರೆಸ್-ಜೆಡಿಎಸ್ ಸರ್ಕಾರದ ಮೇಲೆ ತಮಗೆ ವಿಶ್ವಾಸ ಇಲ್ಲ ಎಂದು ಘೋಷಿಸಿದ್ದ 13 ಜನ ಶಾಸಕರು ಕಳೆದ ಶನಿವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ, ಕೆಲವು ತಾಂತ್ರಿಕ ಕಾರಣಗಳಿಂದ ಈ ರಾಜೀನಾಮೆ ಅಂಗೀಕಾರಕ್ಕೆ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ವಿಳಂಬ ಮಾಡಿದ್ದರು. ಅಲ್ಲದೆ, ಕಾಂಗ್ರೆಸ್ ಎಲ್ಲಾ ಶಾಸಕರ ವಿರುದ್ದ ಪಕ್ಷಾಂತರ ನಿಷೇಧ ಕಾಯ್ದೆಯ ಅಡಿ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿತ್ತು.
ಹೀಗಾಗಿ, ತಮ್ಮ ರಾಜೀನಾಮೆ ಅಂಗೀಕಾರಕ್ಕೆ ಒತ್ತಾಯಿಸಿ ಎಲ್ಲಾ ಅತೃಪ್ತ ಶಾಸಕರು ಸುಪ್ರೀಂ ಕೋರ್ಟ್​ ಮೊರೆ ಹೋಗಿದ್ದಾರೆ.  ಅಲ್ಲದೆ, ಸ್ಪೀಕರ್ ರಮೇಶ್ ಕುಮಾರ್, ಸಿಎಂ ಕುಮಾರಸ್ವಾಮಿ ಹಾಗೂ ಮೈತ್ರಿ ಸರ್ಕಾರದ ವಿರುದ್ಧವೂ ದೂರು ಸಲ್ಲಿಸಿದ್ದಾರೆ.
ಈ ಅರ್ಜಿ ಹಾಗೂ ದೂರಿನ ಕುರಿತ ವಿಚಾರಣೆಯನ್ನು ಗುರುವಾರ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದ ತ್ರಿಸದಸ್ಯ ಪೀಠ ಕೈಗೆತ್ತಿಕೊಳ್ಳಲಿದೆ. ಸಂವಿಧಾನದ ಕಲಂ 190ರ ಅಡಿಯಲ್ಲಿ ವಿಚಾರಣೆ ನಡೆಸಲಿರುವ ನ್ಯಾಯಾಧೀಶರು ಶಾಸಕರು ಖುದ್ದಾಗಿ ಸ್ಪೀಕರ್ ಎದುರು ಹಾಜರಾಗಿಯೇ ರಾಜೀನಾಮೆ ನೀಡಬೇಕೆ? ಹಾಗೂ ರಾಜೀನಾಮೆ ಅಂಗೀಕಾರ ಮತ್ತು ತಿರಸ್ಕಾರದ ಬಗ್ಗೆ ಸ್ಪೀಕರ್ ಅಧಿಕಾರ ವ್ಯಾಪ್ತಿ ಕುರಿತು ವಿಚಾರಣೆ ನಡೆಸಿ ತೀರ್ಪು ನೀಡಲಿದ್ದಾರೆ ಎನ್ನಲಾಗುತ್ತಿದೆ.
ಈ ವಿಚಾರಣೆಯಲ್ಲಿ ಅತೃಪ್ತ ಶಾಸಕರ ಪರವಾಗಿ ಸುಪ್ರೀಂ ಕೋರ್ಟ್​ ಹಿರಿಯ ವಕೀಲ ಮುಖುಲ್ ರೋಹಟಗಿ ಹಾಜರಾಗಲಿದ್ದಾರೆ.

 

ಸುಪ್ರೀಂ ತೀರ್ಪಿಗಾಗಿ ಕಾಯುತ್ತಿದ್ದೇವೆ; ಬಿ.ಎಸ್. ಯಡಿಯೂರಪ್ಪ
ಅತೃಪ್ತ ಶಾಸಕರ ರಾಜೀನಾಮೆ ಅರ್ಜಿಯ ಕುರಿತ ವಿಚಾರಣೆ ಇಂದು ಸುಪ್ರೀಂ ಕೋರ್ಟ್​ನಲ್ಲಿ ಆರಂಭವಾಗಲಿದ್ದು, ತೀರ್ಪಿಗಾಗಿ ನಾವು ಕಾಯುತ್ತಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, “ಪ್ರಜಾಪ್ರಭುತ್ವದ ಅಡಿಯಲ್ಲಿ ಎಲ್ಲಾ ಶಾಸಕರ ರಾಜೀನಾಮೆ ಅರ್ಜಿಯನ್ನು ಸ್ಪೀಕರ್ ಇಂದು ತುರ್ತಾಗಿ ಅಂಗೀಕಾರ ಮಾಡಬೇಕಿದೆ. ಹೀಗಾಗಿ ನಾವು ಸುಪ್ರೀಂ ತೀರ್ಪನ್ನು ಎದುರು ನೋಡುತ್ತಿದ್ದೇವೆ” ಎಂದು ತಿಳಿಸಿದ್ದಾರೆ.
ಒಂದು ವೇಳೆ ಸುಪ್ರೀಂ ಕೋರ್ಟ್ ಶಾಸಕರ ಹಕ್ಕು ಹಾಗೂ ಅವರ ಸಾರ್ವಭೌಮತ್ವವನ್ನು ಎತ್ತಿ ಹಿಡಿದರೆ ಸ್ಪೀಕರ್ ಅನಿವಾರ್ಯವಾಗಿ ಎಲ್ಲಾ ಶಾಸಕರ ರಾಜೀನಾಮೆಯನ್ನು ಅಂಗೀಕಾರ ಮಾಡಲೇಬೇಕಾಗುತ್ತದೆ. ಹೀಗಾಗಿ ಇಂದೇ ಸರ್ಕಾರ ಉರುಳಿದರೂ ಅಚ್ಚರಿ ಇಲ್ಲ ಎನ್ನಲಾಗುತ್ತಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ