ವಿಶ್ವಾಸಮತ ಯಾಚನೆಯಲ್ಲಿ ಸರ್ಕಾರಕ್ಕೆ ಸೋಲಾಗಲಿದೆ-ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು,ಜು.18- ನೂರಕ್ಕೆ ನೂರರಷ್ಟು ವಿಶ್ವಾಸಮತಯಾಚನೆಯಲ್ಲಿ ಸರ್ಕಾರಕ್ಕೆ ಸೋಲಾಗಲಿದ್ದು, ನಾವೇ ಸರ್ಕಾರ ರಚನೆ ಮಾಡಲಿದ್ದೇವೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ಯಾವುದೇ ಕಾರಣಕ್ಕೂ ವಿಶ್ವಾಸ ಮತಯಾಚನೆಯಲ್ಲಿ ಗೆಲ್ಲುವ ಲಕ್ಷಣಗಳಿಲ್ಲ. ಅವರ ಸಂಖ್ಯೆ 100ಕ್ಕೂ ಕಡಿಮೆಯಾದರೂ ಅಚ್ಚರಿ ಪಡಬೇಕಾದ ಅಗತ್ಯವಿಲ್ಲ ಎಂದು ಬಾಂಬ್ ಸಿಡಿಸಿದರು.

ನಾವು 105 ಮಂದಿ ಶಾಸಕರಿದ್ದೇವೆ. ಇಬ್ಬರು ಪಕ್ಷೇತರ ಶಾಸಕರು ನಮಗೆ ಬೆಂಬಲ ನೀಡಿರುವುದರಿಂದ ನಮ್ಮ ಸಂಖ್ಯೆ 107ಕ್ಕೆ ಏರಿಕೆಯಾಗಿದೆ. 16 ಮಂದಿ ಶಾಸಕರು ರಾಜೀನಾಮೆ ಕೊಟ್ಟಿರುವುದು ಹಾಗೂ ಇಬ್ಬರು ಶಾಸಕರು ಬೆಂಬಲ ಹಿಂದೆತೆಗೆದೆಕೊಂಡಿರುವುದರಿಂದ ಸಮ್ಮಿಶ್ರ ಸರ್ಕಾರ ಅಲ್ಪ ಮತಕ್ಕೆ ಕುಸಿದಿದೆ ಎಂದು ಹೇಳಿದರು.

ಸ್ಪೀಕರ್ ಯಾವ ನಿರ್ಧಾರ ಕೈಗೊಳ್ಳುತ್ತಾರೋ ಕಾದು ನೋಡಬೇಕು. ವಿಶ್ವಾಸ ಮತಯಾಚನೆ ನಿರ್ಣಯವನ್ನು ನೇರವಾಗಿ ಮತಕ್ಕೆ ಹಾಕುವರೋ ಇಲ್ಲವೇ ಚರ್ಚೆಗೆ ಕೊಡುವರೋ ಎಂಬುದು ಅವರ ವಿವೇಚನೆಗೆ ಬಿಟ್ಟಿದ್ದು. ನಮಗೆ ಬೆಂಬಲ ಇರುವುದರಿಂದ ಯಾವುದೇ ಆತಂಕವಿಲ್ಲ. ಕೆಲವೇ ದಿನಗಳಲ್ಲಿ ಸರ್ಕಾರ ರಚನೆ ಮಾಡುವುದು ಖಚಿತ ಎಂದು ಆತ್ಮವಿಶ್ವಾಸದಿಂದಲೇ ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ