ಐವರು ಅತೃಪ್ತ ಶಾಸಕರು ಮುಂಬೈನಿಂದ ಬೆಂಗಳೂರಿಗೆ

ಬೆಂಗಳೂರು,ಜು.29- ಸ್ಪೀಕರ್ ರಮೇಶ್ ಕುಮಾರ್ 14 ಮಂದಿ ಅತೃಪ್ತ ಶಾಸಕರನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿಯೇ ಐವರು ಅತೃಪ್ತ ಶಾಸಕರು ಮುಂಬೈನಿಂದ ಬೆಂಗಳೂರಿಗೆ ಆಗಮಿಸಿದ್ದಾರೆ.

ಅನರ್ಹಗೊಂಡಿರುವ ಬೈರತಿ ಬಸವರಾಜು, ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್, ಮುನಿರತ್ನ ಹಾಗೂ ಎಂಟಿಬಿ ನಾಗರಾಜ್ ಅವರು ರಾತ್ರಿ 12.50ರ ಸುಮಾರಿಗೆ ಕೆಂಪೇಗೌಡ ಏರ್ಪೋರ್ಟ್ಗೆ ಬಂದಿಳಿದರು.

ಮೊದಲು ಬಂದ ನಾಲ್ವರು ಅನರ್ಹರು ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ಹೊರಟುಹೋದರು. ಸುಮಾರು 15 ನಿಮಿಷಗಳ ಬಳಿಕ ಒಬ್ಬಂಟಿಯಾಗಿ ಬಂದ ಎಂಟಿಬಿ ನಾಗರಾಜ್ ಅವರು, ಮುಂಬೈಯಿಂದ ಒಬ್ಬನೇ ಬಂದೆ. ಮುಂದೆ ನಾಲ್ಕು ಜನ ಹೋಗಿದ್ದಾರೆ. ಇನ್ನುಳಿದವರು ಮುಂಬೈನಲ್ಲಿದ್ದಾರೆ. ದೆಹಲಿಗೆ ಹೋಗಿ ಸುಪ್ರಿಂಕೋರ್ಟಿಗೆ ಅರ್ಜಿ ಹಾಕುತ್ತಾರೆ. ಸ್ಪೀಕರ್ ಅನರ್ಹ ಆದೇಶ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ ಎಂದು ಹೇಳಿದರು.

ಇದೇ ವೇಳೆ ಡಿ.ಕೆ.ಶಿವಕುಮಾರ್ ಹೊಸಕೋಟೆಗೆ ಬರಲಿ, ಸಂತೋಷದಿಂದ ನಿಮ್ಮ ಸವಾಲನ್ನು ಸ್ವೀಕರಿಸುತ್ತೇನೆ ಎಂದು ಎಂಬಿಟಿಗೆ ಸವಾಲು ಹಾಕಿದರು.

ಅನರ್ಹರು ವಿಮಾನ ನಿಲ್ದಾಣದಿಂದ ಹೊರಬಂದ ಬಳಿಕ ಆರ್.ಅಶೋಕ್, ಅಶ್ವಥ್ ನಾರಾಯಣ್ ಕೂಡ ಆಗಮಿಸಿದ್ದಾರೆ. ಇವರ ಜೊತೆ ಪಕ್ಷೇತರ ಶಾಸಕ ನಾಗೇಶ್ ಕೂಡ ಬಂದಿದ್ದು, ಮಾಧ್ಯಮಗಳ ಕಣ್ತಪ್ಪಿಸಿ ಹೊರಹೋಗಿದ್ದಾರೆ.

ಗುರುವಾರ ಸಂಜೆ ಸುದ್ದಿಗೋಷ್ಠಿ ಕರೆದಿದ್ದ ಸಭಾಧ್ಯಕ್ಷ ರಮೇಶ್‍ಕುಮಾರ್ ಅವರು ಕಾಂಗ್ರೆಸ್‍ನ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಮಸ್ಕಿಯ ಪ್ರತಾಪ್ ಗೌಡ ಪಾಟೀಲ್, ರಾಣೆಬೆನ್ನೂರು ಶಾಸಕ ಆರ್ ಶಂಕರ್ ಅವರನ್ನು ಅನರ್ಹ ಗೊಳಿಸಿದ್ದರು.

ಆ ಬಳಿಕ ಮತ್ತೆ ನಿನ್ನೆ ಸುದ್ದಿಗೋಷ್ಠಿ ಕರೆದು, ಮಸ್ಕಿ ಶಾಸಕ ಪ್ರತಾಪ್‍ಗೌಡ ಪಾಟೀಲ್, ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್, ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್, ವಿಜಯನಗರದ ಆನಂದ್ ಸಿಂಗ್, ರಾಜರಾಜೇಶ್ವರಿ ನಗರದ ಮುನಿರತ್ನ, ಚಿಕ್ಕಬಳ್ಳಾಪುರದ ಕೆ.ಸುಧಾಕರ್, ಹೊಸಕೋಟೆಯ ಎಂಟಿಬಿ ನಾಗರಾಜ್, ಯಲ್ಲಾಪುರದ ಶಿವರಾಂ ಹೆಬ್ಬಾರ್, ಶಿವಾಜಿನಗರದ ರೋಷನ್ ಬೇಗ್, ಕೆ.ಆರ್.ಪುರಂನ ಬೈರತಿ ಬಸವರಾಜ್, ಮಹಾಲಕ್ಷ್ಮಿ ಲೇಔಟ್ ಶಾಸಕ ಗೋಪಾಲಯ್ಯ, ಕಾಗವಾಡದ ಶ್ರೀಮಂತ್ ಪಾಟೀಲ್, ಹುಣಸೂರಿನ ಹೆಚ್.ವಿಶ್ವನಾಥ್ ಮತ್ತು ಕೆ.ಆರ್.ಪೇಟೆಯ ನಾರಾಯಣಗೌಡ ಹೀಗೆ ಎಲ್ಲ 14 ಶಾಸಕರನ್ನೂ ಅನರ್ಹಗೊಳಿಸಿ ಆದೇಶ ಹೊರಡಿಸಿದ್ದಾರೆ.

ಒಟ್ಟಿನಲ್ಲಿ 14 ಮತ್ತು 3 ಒಟ್ಟು 17 ಮಂದಿ ಶಾಸಕರು ಅನರ್ಹಗೊಂಡಿದ್ದು, ಇದರಲ್ಲಿ ಮೂವರು ಈಗಾಗಲೇ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಇನ್ನು 14 ಮಂದಿ ಇಂದು ಸುಪ್ರೀಂಕೋರ್ಟ್ ಕದ ತಟ್ಟಲಿದ್ದಾರೆ. ಹೀಗಾಗಿ ಕೋರ್ಟ್ 17 ಮಂದಿ ಶಾಸಕರ ಅರ್ಜಿಯನ್ನು ವಿಚಾರಣೆ ನಡೆಸಿ ಯಾವ ತೀರ್ಪು ನೀಡಲಿದೆ ಎಂಬುದು ಎಲ್ಲರಲ್ಲಿ ಕುತೂಹಲ ಸೃಷ್ಟಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ