ಕೈಲಾಗದ ಏಕವ್ಯಕ್ತಿ ರಾಜ್ಯ ಸರ್ಕಾರ

ಬೆಂಗಳೂರು,ಆ.9- ಕೈಲಾಗದ ಏಕವ್ಯಕ್ತಿ ರಾಜ್ಯ ಸರ್ಕಾರ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರವನ್ನು ಟೀಕಿಸಿರುವ ಕಾಂಗ್ರೆಸ್, ಕೇಂದ್ರ ಸರ್ಕಾರ ರಾಜ್ಯದ ಜನರ ಪಾಲಿಗೆ ಬದುಕಿಲ್ಲ ಎನಿಸುತ್ತಿದೆ ಎಂದು ವಾಗ್ದಾಳಿ ನಡೆಸಿದೆ.

ಟ್ವಿಟರ್‍ನಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್, ರಾಜ್ಯದಲ್ಲಿ 16 ಜಿಲ್ಲೆಗಳು ಜಲಾವೃತವಾಗಿವೆ. 15ಮಂದಿ ಸಾವನ್ನಪ್ಪಿದ್ದಾರೆ. 40 ಪ್ರಮುಖ ರಸ್ತೆಗಳ ಸಂಪರ್ಕ ಕಡಿತಗೊಂಡಿದೆ. ಸಾವಿರಾರು ಕೋಟಿ ಬೆಳೆ ನಷ್ಟವಾಗಿದೆ. ಲಕ್ಷಾಂತರ ಜನರ ಜೀವನ ಅಸ್ತವ್ಯಸ್ತವಾಗಿದೆ. ಆದರೆ, ಸರ್ಕಾರ ಜನರ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ಕಿಡಿಕಾರಿದೆ.

ಯಡಿಯೂರಪ್ಪ ಅವರ ಸರ್ಕಾರ ಕೈಲಾಗದ ಏಕವ್ಯಕ್ತಿ ಬಿಜೆಪಿ ರಾಜ್ಯ ಸರ್ಕಾರ. ಕೇಂದ್ರ ಸರ್ಕಾರವಂತೂ ರಾಜ್ಯದ ಜನರ ನೆರವಿಗೆ ಬಂದಿಲ್ಲ. ಈ ಸಂದರ್ಭದಲ್ಲಿ ಕನ್ನಡಿಗರೇ ಒಟ್ಟಾಗಿ ಶ್ರಮಿಸೋಣ. ಸಂಕಷ್ಟದಲ್ಲಿರುವವರಿಗೆ ನೆರವಾಗೋಣ ಎಂದು ಕಾಂಗ್ರೆಸ್ ಕರೆ ನೀಡಿದೆ.

ಜಲ ಪ್ರಳಯ ಇನ್ನಷ್ಟು ಹೆಚ್ಚಾಗದಿರಲಿ. ಆದಷ್ಟು ಬೇಗ ಸಂಕಷ್ಟದಿಂದ ಪಾರಾಗಲಿ ಎಂದು ಪ್ರಾರ್ಥಿಸಿರುವ ಕಾಂಗ್ರೆಸ್, ಇದೇ ಸಂದರ್ಭದಲ್ಲಿ ರಾಜ್ಯದ ಜನರಿಗೆ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳನ್ನು ತಿಳಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ