ಪಿಒಕೆ ಪ್ರದೇಶವನ್ನು ಮುಕ್ತಗೊಳಿಸಲು ನಾವೆಲ್ಲ ಒಂದಾಗಬೇಕಿದೆ-ಕೇಂದ್ರ ರಾಜ್ಯ ಸಚಿವ ಜಿತೇಂದ್ರ ಸಿಂಗ್

ಜಮ್ಮು, ಆ.19-ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಭಾರತೀಯ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದ ಕೇಂದ್ರ ಸರ್ಕಾರದ ದಿಟ್ಟ ಕ್ರಮದ ನಂತರ, ಪಾಕಿಸ್ತಾನದಿಂದ ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಪ್ರದೇಶವನ್ನು ಮುಕ್ತಗೊಳಿಸಲು ನಾವೆಲ್ಲ ಒಂದಾಗಬೇಕಿದೆ ಎಂದು ಕೇಂದ್ರ ಈಶಾನ್ಯ ಪ್ರಾಂತ್ಯ ಅಭಿವೃದ್ದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಪ್ರಾಂತ್ಯವನ್ನು ಭಾರತದೊಂದಿಗೆ ಸೇರ್ಪಡೆ ಮಾಡಲು ಜನರು ಈಗ ಪ್ರಾರ್ಥಿಸಬೇಕಿದೆ ಎಂದು ಅವರು ತಿಳಿಸಿದ್ದಾರೆ.

ಪಾಕಿಸ್ತಾನದೊಂದಿಗೆ ಪಿಒಕೆ ವಿಷಯದಲ್ಲಿ ಮಾತ್ರ ಮಾತುಕತೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಖಡಕ್ ಹೇಳಿಕೆ ನೀಡಿರುವ ಬೆನ್ನಲ್ಲೇ ಜಿತೇಂದ್ರ ಸಿಂಗ್ ನೀಡಿರುವ ಈ ಹೇಳಿಕೆ ಪ್ರಾಮುಖ್ಯತೆ ಪಡೆದುಕೊಂಡಿದೆ.

ಜಮ್ಮುವಿನಲ್ಲಿ ರಾಜ್ಯ ಬಿಜೆಪಿ ಘಟಕ ಆಯೋಜಿಸಿದ್ದ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಸ್ತುತ ಸಾಮಾಜಿಕ-ರಾಜಕೀಯ ಸ್ಥಿತಿ ಕುರಿತ ಸಂವಾದದಲ್ಲಿ ಅವರು ಮಾತನಾಡಿದರು.

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದತಿ ಹಾಗೂ ಈ ಪ್ರಾಂತ್ಯವನ್ನು ಎರಡು ಕೇಂದಾಡಳಿತ ಪ್ರದೇಶಗಳಾಗಿ ಮರುವಿಂಗಡಣೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ದಿಟ್ಟ ಕ್ರಮವನ್ನು ಜಿತೇಂದ್ರ ಸಿಂಗ್ ಸಮರ್ಥಿಸಿಕೊಂಡಿರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ