ಅಧಿಕಾರಿಗಳ ಕಾರ್ಯವೈಖರಿಗೆ ಸಿಡಿಮಿಡಿಗೊಂಡ ಆಯುಕ್ತರು

ಬೆಂಗಳೂರು,ಸೆ.14-ಅಗತ್ಯ ಕಾಮಗಾರಿಗಳನ್ನು ನಿಧಾನಗತಿಯಲ್ಲಿ ನಡೆಸುತ್ತಿದ್ದ ಅಧಿಕಾರಿಗಳನ್ನು ಬಿಬಿಪಿಎಂ ಆಯುಕ್ತ ಅನಿಲ್‍ಕುಮಾರ್ ಇಂದಿಲ್ಲಿ ತರಾಟೆಗೆ ತೆಗೆದುಕೊಂಡರು.
ಬಿಬಿಎಂಪಿಗೆ ಸೇರ್ಪಡೆಗೊಂಡಿರುವ 110 ಹಳ್ಳಿಗಳ ವ್ಯಾಪ್ತಿಗೆ ಬರುವ ಕೆ.ಆರ್.ಪುರಂ ಸುತ್ತಮುತ್ತ ನಡೆಯುತ್ತಿರುವ ರಸ್ತೆ, ಒಳಚರಂಡಿ, ಕಾವೇರಿ ಪೈಪ್‍ಲೈನ್ ಅಳವಡಿಕೆ ಕಾಮಗಾರಿಗಳನ್ನು ಖುದ್ದು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಆಯುಕ್ತರು ಅಧಿಕಾರಿಗಳ ಕಾರ್ಯವೈಖರಿಗೆ ಸಿಡಿಮಿಡಿಗೊಂಡರು.

ಸ್ಥಳದಲ್ಲಿದ್ದ ಬಿಬಿಎಂಪಿ, ಬೆಸ್ಕಾಂ , ಜಲಮಂಡಳಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಆಯುಕ್ತರು, ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸುವಂತೆ ತಾಕೀತು ಮಾಡಿದರು.
ಇತ್ತೀಚೆಗೆ ಮೇಯರ್ ಗಂಗಾಂಬಿಕೆ ಈ ಸ್ಥಳಗಳಿಗೆ ಭೇಟಿ ನೀಡಿ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸುವಂತೆ ತಾಕೀತು ಮಾಡಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ.
ಹೀಗಾಗಿ ಸ್ಥಳೀಯರ ದೂರಿನ ಮೇರೆಗೆ ಅನಿಲ್‍ಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ನಂದೀಶ್ ರೆಡ್ಡಿ ಮತ್ತಿತರರು ಹಾಜರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ