ನಾಳೆಯಿಂದ ಜೆಡಿಎಸನಿಂದ ಜಿಲ್ಲಾವಾರು ಸಭೆ

ಬೆಂಗಳೂರು, ಸೆ.15- ಪಕ್ಷಸಂಘಟನೆ, ಸ್ಥಳೀಯ ಸಂಸ್ಥೆಗಳು ಹಾಗೂ ಮುಂಬರುವ ವಿಧಾನಸಭೆ ಉಪಚುನಾವಣೆ ಸಿದ್ಧತೆ, ಪದಾಧಿಕಾರಿಗಳ ಬದಲಾವಣೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲು ನಾಳೆಯಿಂದ ಜಿಲ್ಲಾವಾರು ಸಭೆಗಳನ್ನುಜೆಡಿಎಸ್ ನಡೆಸಲಿದೆ.

ಕಳೆದ ಆಗಸ್ಟ್‍ನಲ್ಲಿ ಇದೇ ರೀತಿ 13 ಜಿಲ್ಲೆಗಳ ಸಭೆ ನಡೆಸಲಾಗಿತ್ತು.ಈಗ ಮತ್ತೆ ನಾಳೆಯಿಂದ ಸೆ.20ರವರೆಗೂ ಉಳಿದ 17 ಜಿಲ್ಲೆಗಳ ಜಿಲ್ಲಾವಾರು ಸಭೆಗಳನ್ನು ನಡೆಸಲಾಗುತ್ತಿದೆ.

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಆಯಾ ಜಿಲ್ಲಾವಾರು ಪದಾಧಿಕಾರಿಗಳು, ಮುಖಂಡರು, ಮಾಜಿ ಸಚಿವರು, ಮಾಜಿ ಸಂಸದರು, ಶಾಸಕರು, ಮಾಜಿ ಶಾಸಕರು, ಲೋಕಸಭೆ, ವಿಧಾನಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದು, ಪ್ರತಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ನೀಡಬೇಕಾದ ಆದ್ಯತೆ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಸ್ಥಳೀಯ ಸಮಸ್ಯೆಗಳ ಬಗ್ಗೆ ಸಮಾಲೋಚಿಸಿ ಅಗತ್ಯ ಬಿದ್ದರೆ ಜಿಲ್ಲಾಮಟ್ಟದ ಪದಾಧಿಕಾರಿಗಳ ಪುನರ್ ರಚನೆ ಮಾಡುವುದು ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಜ್ಜುಗೊಳಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಹಳೇ ಮೈಸೂರು ಭಾಗದ 13 ಜಿಲ್ಲೆಗಳ ಪದಾಧಿಕಾರಿಗಳು ಹಾಗೂ ಮುಖಂಡರ ಸಭೆಯನ್ನು ಆಗಸ್ಟ್‍ನಲ್ಲಿ ದೇವೇಗೌಡರು ನಡೆಸಿದ್ದರು. ಉತ್ತರ ಕರ್ನಾಟಕ ಹಾಗೂ ಕರಾವಳಿ ಭಾಗದಲ್ಲಿ ಮಳೆ ಹಾಗೂ ಪ್ರವಾಹ ಉಂಟಾಗಿದ್ದ ಹಿನ್ನೆಲೆಯಲ್ಲಿ ಜಿಲ್ಲಾವಾರು ಸಭೆಗಳನ್ನು ಮುಂದೂಡಲಾಗಿತ್ತು.

ನಾಳೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, 17ರಂದು ದಕ್ಷಿಣಕನ್ನಡ, ಉತ್ತರಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳ ಸಭೆ ನಡೆಸಲು ತೀರ್ಮಾನಿಸಲಾಗಿದೆ.

ಸೆ.18ರಂದು ರಾಯಚೂರು, ಯಾದಗಿರಿ, ಕಲಬುರಗಿ, 19ರಂದು ವಿಜಯಪುರ, ಬಾಗಲಕೋಟೆ, ಚಿಕ್ಕೋಡಿ, ಬೆಳಗಾವಿ, 20ರಂದು ಹುಬ್ಬಳ್ಳಿ, ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳ ಸಭೆ ನಡೆಸಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ