ಮಾಜಿ ಸಿಎಂ ಸಿದ್ದರಾಮಯ್ಯನವರಿಂದ ಜಾತಿ ಉಪಜಾತಿಗಳ ನಡುವೆ ಬೆಂಕಿ ಹಚ್ಚುವ ಪ್ರಯತ್ನ -ಸಚಿವ ಜಗದೀಶ್ ಶೆಟ್ಟರ್

ಹುಬ್ಬಳ್ಳಿ, ಅ.2- ಈ ಹಿಂದೆ ಸಿದ್ದರಾಮಯ್ಯನವರು ತಮ್ಮ ರಾಜಕೀಯ ಲಾಭಕ್ಕಾಗಿ ಜಾತಿ ಜನಗಣತಿ ಹೆಸರಲ್ಲಿ ಜಾತಿ ಒಡೆಯುವ ಕೆಲಸವನ್ನು ಮಾಡಿದ್ದಾರೆ.ಅಲ್ಲದೇ ಜಾತಿ ಉಪಜಾತಿಗಳ ನಡುವೆ ಬೆಂಕಿ ಹಚ್ಚುವ ಪ್ರಯತ್ನ ಮಾಡಿದ್ದಾರೆ.ಇದರಿಂದ ಸರ್ಕಾರಕ್ಕೆ 190 ಕೋಟಿ ರೂ.ನಷ್ಟವಾಗಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಜನಗಣತಿ ಮೂಲಕ ಸಿದ್ದರಾಮಯ್ಯ ರಾಜಕೀಯ ಲಾಭ ಪಡೆಯಲು ಮುಂದಾಗಿದ್ದರು.ಇನ್ನೂ ಆ ವರದಿ ಕ್ಯಾಬಿನೆಟ್‍ನಲ್ಲಿ ಮಂಡನೆಯಾಗಿಲ್ಲ. ತಿರಸ್ಕಾರವುಗೊಂಡಿಲ್ಲ. ಜಾತಿ ಜನಗಣತಿಯನ್ನು ನಾವು ಈ ಹಿಂದೆಯೇ ವಿರೋಧ ಮಾಡಿದ್ದೆವು.ಅದರಂತೆ ವರದಿ ತಿರಸ್ಕರಿಸುವ ಕುರಿತು ಕ್ಯಾಬಿನೆಟ್‍ನಲ್ಲಿ ಚರ್ಚಿಸಲಾಗುವುದು ಎಂದರು.

ನೆರೆ ಪರಿಹಾರದ ಬಗ್ಗೆ ರಾಜ್ಯದ ಜನರಲ್ಲಿ ಯಾವುದೇ ಗೊಂದಲಗಳಿಲ್ಲ. ಆದರೆ ಕಾಂಗ್ರೆಸ್ ನೆರೆ ಹಾವಳಿಯನ್ನು ತನ್ನ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ.ನೆರೆ ಹಾವಳಿಗೆ ಸಂಬಂಧಿಸಿದಂತೆ ರಾಜ್ಯದ ಬೊಕ್ಕಸದಲ್ಲಿ ಹಣವಿದ್ದು, ಅದರ ಮೂಲಕ ನೆರೆ ಸಂತ್ರಸ್ತರಿಗೆ 10 ಸಾವಿರ ಪರಿಹಾರದ ಹಣವನ್ನು ಬಿಡುಗಡೆ ಮಾಡಲಾಗುವುದು.ಅಲ್ಲದೇ ಮನೆ ನಿರ್ಮಾಣಕ್ಕೆ 5 ಲಕ್ಷದ ವರೆಗೆ ಹಣವನ್ನು ನೀಡಲಾಗುವುದು ಎಂದರು.

ಮೈಸೂರು ದಸರಾ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸುವ ಹಾಗೇ ಕಿತ್ತೂರು ಉತ್ಸವ ಆಚರಣೆ ಯಾಕಿಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ನೆರೆಹಾವಳಿಯಿಂದ ಜನ ತತ್ತರಿಸಿ ಹೋಗಿದ್ದು, ಈ ಹಿನ್ನೆಲೆಯಲ್ಲಿ ಕಿತ್ತೂರು ಭಾಗದ ಜನರ ಅಭಿಪ್ರಾಯ ತೆಗೆದುಕೊಂಡೆ ಸರಳ ಕಿತ್ತೂರ ಉತ್ಸವ ಆಚರಣೆಗೆ ಮುಂದಾಗಿದ್ದೇವೆ ಅಲ್ಲದೇ, ಉತ್ಸವದಿಂದ ಉಳಿದ ಹಣವನ್ನು ನೆರೆ ಸಂತ್ರಸ್ತರ ಕೆಲಸಗಳಿಗೆ ಬಳಸಿಕೊಳ್ಳಲು ತೀರ್ಮಾನ ತೆಗೆದುಕೊಂಡಿದ್ದೇವೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ