ಡಿ.ಕೆ.ಶಿವಕುಮಾರ್ರವರ ದೆಹಲಿ ನಿವಾಸದ ಮೇಲೆ ಸಿಬಿಐ ದಾಳಿ-ಇದು ದ್ವೇಷದ ರಾಜಕಾರಣ-ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್

ಬೆಂಗಳೂರು, ಅ.21-ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ದೆಹಲಿ ನಿವಾಸದ ಮೇಲೆ ಸಿಬಿಐ ದಾಳಿ ಆಗಿರುವುದನ್ನು ಖಂಡಿಸುವುದಾಗಿ ಹೇಳಿದ  ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್, ಇದು ದ್ವೇಷದ ರಾಜಕಾರಣ ಇಂತಹದ್ದಕ್ಕೆಲ್ಲ ಕಾಂಗ್ರೆಸ್ ಹೆದರುವುದಿಲ್ಲ. ಒಟ್ಟಾಗಿ ಪ್ರತಿಭಟಿಸುವ ಮೂಲಕ ಈ ಷಡ್ಯಂತ್ರ ಎದುರಿಸುತ್ತೇವೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ಸಿಬಿಐ, ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ.ಕಾಂಗ್ರೆಸ್ ನಾಯಕರ ವಿರುದ್ಧ ಅವುಗಳನ್ನು ಬಳಕೆ ಮಾಡಿ ಹೆದರಿಸುವ ಪ್ರಯತ್ನ ಮಾಡುತ್ತಿದೆ.

ಮೊದಲಿನಿಂದಲೂ ಈ ರೀತಿಯ ಪ್ರಯತ್ನಗಳನ್ನು ನೋಡುತ್ತಲೇ ಬಂದಿದ್ದೇವೆ. ಇದಕ್ಕೆಲ್ಲ ಹೆದರುವ ಪ್ರಶ್ನೆಯೇ ಇಲ್ಲ ಎಂದರು.

ಭ್ರಷ್ಟಾಚಾರ ನಡೆದಿದೆ ಎಂದಾದರೆ ಅದರ ವಿರುದ್ಧ ಕ್ರಮಕೈಗೊಳ್ಳಲು ನಮ್ಮ ಅಭ್ಯಂತರವಿಲ್ಲ. ಆದರೆ  ಅದು ನಿಷ್ಪಕ್ಷಪಾತವಾಗಿರಬೇಕು. ಕಾಂಗ್ರೆಸ್ ನಾಯಕರನ್ನು ಮಾತ್ರ ಗುರಿಯಾಗಿಸಿಕೊಂಡು ನಡೆಸುತ್ತಿರುವ ದಾಳಿಗಳು ಖಂಡನೀಯ ಎಂದರು.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ