ಜನಪ್ರತಿನಿಧಿಗಳ ಫೋನ್ ಕದ್ದಾಲಿಕೆ ಪ್ರಕರಣ-ತನಿಖೆ ಚುರುಕುಗೊಳಿಸಿದ ಸಿಬಿಐ ಅಧಿಕಾರಿಗಳು

ಬೆಂಗಳೂರು,ನ.೪- ಜನಪ್ರತಿನಿಧಿಗಳ ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.

ಈ ಬಗ್ಗೆ ಟೆಲಿಗ್ರಾಫ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಕೇಂದ್ರ ತನಿಖಾ ಸಂಸ್ಥೆಯ ಅಧಿಕಾರಿಗಳು ಒಟ್ಟು ೫೪ ಮಂದಿ ಪೊಲೀಸ್ ಇನ್ಸ್ಪೆಕ್ಟರ್‌ಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.

ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪದ ಮೇರೆಗೆ ಈ ಹಿಂದೆ ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್, ಆಡುಗೋಡಿ ಟೆಕ್ನಿಕಲ್ ಸೆಲ್‌ನ ಎಸಿಪಿ ಇನ್ಸ್ಪೆಕ್ಟರ್‌ಗಳನ್ನ ಸಿಬಿಐ ವಿಚಾರಣೆಗೊಳಪಡಿಸಿತ್ತು.

ಇದೀಗ ಬೇರೆ ಬೇರೆ ಠಾಣೆಯ ಒಟ್ಟು ೫೪ ಇನ್ಸ್ಪೆಕ್ಟರ್‌ಗಳಿಗೆ ನೋಟಿಸ್ ಜಾರಿ ಮಾಡಿ ನವೆಂಬರ್ ೪, ೫ ಮತ್ತು  ೬ ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆಂದು ತಿಳಿದುಬಂದಿದೆ.

ಈ ಎಲ್ಲಾ ಪೊಲೀಸರು ತನಿಖೆಯ ಉದ್ದೇಶದಿಂದ ಹಲವು ಪ್ರಕರಣಗಳಲ್ಲಿ ತಮ್ಮ ವ್ಯಾಪ್ತಿಗೊಳಪಟ್ಟ ಆರೋಪಿಗಳ ಫೋನ್ ಟ್ಯಾಪಿಂಗ್ ಮಾಡಿದ್ದರು. ಈ ಹಿನ್ನೆಲೆ ಇವರಿಗೆ ನೋಟಿಸ್ ನೀಡಿರುವ ಸಿಬಿಐ, ಫೋನ್ ಟ್ಯಾಪಿಂಗ್ ಯಾವ ಉದ್ದೇಶಕ್ಕಾಗಿ ಮಾಡಲಾಗಿದೆ? ನಿಮಗೆ ಸಿಕ್ಕ ಮಾಹಿತಿ ಕುರಿತು ಮಾಹಿತಿ ನೀಡುವಂತೆ ಇನ್ಸ್ಪೆಕ್ಟರ್‌ಗಳಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ