ಕಲಾ ಸೇವೆಯನ್ನು ಗುರುತಿಸಿ ಡಾಕ್ಟರೇಟ್ ನೀಡಿರುವುದು ಸಂತೋಷ ತಂದಿದೆ-ಕ್ರೇಜಿಸ್ಟಾರ್ ರವಿಚಂದ್ರನ್

ಬೆ0ಗಳೂರು, ನ.೪-ಸಿನಿಮಾ ಕ್ಷೇತ್ರದಲ್ಲಿ ತಾವು ಮಾಡಿದ ಸಾಧನೆ ಹಾಗೂ ೩೧ ವರ್ಷಗಳ ಕಲಾ ಸೇವೆಯನ್ನು ಗುರುತಿಸಿ ಡಾಕ್ಟರೇಟ್ ನೀಡಿರುವುದು ಸಂತೋಷ ತಂದಿದೆ ಎಂದು ಕ್ರೇಜಿಸ್ಟಾರ್ ರವಿಚಂದ್ರನ್ ಹೇಳಿದರು.

ನಗರದ ಸಿಎಂಆರ್ ವಿಶ್ವವಿದ್ಯಾನಿಲಯದ ೪ನೇ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಪದವಿ ಸ್ವೀಕರಿಸಿ ಮಾತನಾಡಿದರು.

ಸಿನಿಮಾ ಕ್ಷೇತ್ರದಲ್ಲಿ ನಾನು ಏನಾದರೂ ಸಾಧನೆ ಮಾಡಬೇಕೆಂಬುದು ನನ್ನ ತಂದೆಯವರ ಕನಸಾಗಿತ್ತು. ಹಾಗಾಗಿ  ಅವರ ಈ ಗೌರವವನ್ನು ತಂದೆ ವೀರಸ್ವಾಮಿ ಅವರಿಗೆ ಅರ್ಪಿಸಿದ್ದೇನೆ ಎಂದು ತಿಳಿಸಿದರು.

ಇದೇ ವೇಳೆ ವಿವಿಯಲ್ಲಿ ವಿವಿಧ ವಿಭಾಗಗಳಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ೧೭ ವಿದ್ಯಾರ್ಥಿಗಳಿಗೆ ೧೮ ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಯಿತು.

ಗುಣಾತ್ಮಕ ಶಿಕ್ಷಣ ನೀಡುವ ವಿಶ್ವವಿದ್ಯಾನಿಲಯಗಳು ಬರಬೇಕು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅಭಿಪ್ರಾಯಪಟ್ಟರು.

ಮನೆ ಕಟ್ಟಲು ತಳಪಾಯ ಹೇಗೆ ಮುಖ್ಯವಾಗುವುದೋ ಅದೇ ರೀತಿ ಪ್ರತಿಯೊಬ್ಬ ವಿದ್ಯಾರ್ಥಿಗೂ ಗುಣಮಟ್ಟದ ಶಿಕ್ಷಣದ ಅವಶ್ಯಕತೆ ಇದೆ ಎಂದು ಹೇಳಿದರು.

ಎಂ.ಕಾಂ.ವಿಭಾಗದಲ್ಲಿ ಉನ್ನತ ಶ್ರೇಣಿ ಪಡೆದ ಪ್ರಿಯದರ್ಶಿನಿ ಅವರಿಗೆ ಸಿಎಂಆರ್ ಚಿನ್ನದ ಪದಕ ಮತ್ತು ಐಎಸ್‌ಡಿಸಿ ಚಿನ್ನದ ಪದಕವನ್ನು ನೀಡಿ ಗೌರವಿಸಲಾಯಿತು.

ಮೂವರಿಗೆ ಡಾಕ್ಟರೇಟ್, ೧೯೮ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಪದವಿ ಹಾಗೂ ೨೧೬ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ