ನಮಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿರುವುದು ಸಂತೋಷವಾಗಿದೆ-ಅನರ್ಹ ಶಾಸಕ ಎಚ್.ವಿಶ್ವನಾಥ್

ನವದೆಹಲಿ, ನ.13-ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ದಿನವೇ ನಾವು ಉಪಚುನಾವಣೆಯನ್ನು ಎದುರಿಸಲು ನಿರ್ಧಾರ ಮಾಡಿದ್ದೆವು. ಸುಪ್ರೀಂಕೋರ್ಟ್ ಸ್ಪೀಕರ್ ಆದೇಶವನ್ನು ಬದಿಗೆ ಸರಿಸಿ ನಮಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿರುವುದರಿಂದ ನಮಗೆ ಸಂತೋಷವಾಗಿದೆ ಎಂದು ಅನರ್ಹ ಶಾಸಕ ಎಚ್.ವಿಶ್ವನಾಥ್ ಹೇಳಿದ್ದಾರೆ.

ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್, ಜೆಡಿಎಸ್ ಮತ್ತು ಸ್ಪೀಕರ್ ಅವರು ನಮ್ಮನ್ನು ಮೂರೂವರೆ ವರ್ಷಗಳ ಕಾಲ ರಾಜಕೀಯದಿಂದ ದೂರವಿಡುವ ಪ್ರಯತ್ನ ಮಾಡಿದರು. ಆದರೆ ಸುಪ್ರೀಂಕೋರ್ಟ್ ಅದಕ್ಕೆ ಅವಕಾಶ ನೀಡಿಲ್ಲ ಎಂದಿದ್ದಾರೆ.

ತೀರ್ಪನ್ನು ನಾವು ಗೌರವಿಸುತ್ತೇವೆ, ನಮಗೆ ಸಂತೋಷವಾಗಿದೆ. ಉಪಚುನಾವಣೆಯಲ್ಲಿ ನಾವು ಸ್ಪರ್ಧಿಸುತ್ತೇವೆ, ಜನ ನಮ್ಮನ್ನು ಸ್ವೀಕರಿಸುತ್ತಾರೆ. ಈ ಹಿಂದಿನ ರಾಜಕೀಯ ಬೆಳವಣಿಗೆಗಳನ್ನು ಜನ ಪರಾಮರ್ಶೆ ಮಾಡಿದ್ದಾರೆ. ಸುಪ್ರೀಂಕೋರ್ಟ್ ತೀರ್ಪನ್ನು ಸಹ ಗಮನಿಸಿದ್ದಾರೆ ಎಂದು ಹೇಳಿದರು.

ಯಾವ ಪಕ್ಷದಿಂದ ಸ್ಪರ್ಧಿಸುತ್ತೇವೆ ಎಂಬುದನ್ನು ಕಾದು ನೋಡಿ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ