ರಫೇಲ್​ ಪ್ರಕರಣದ ತನಿಖೆ ಇಲ್ಲ; ಕೇಂದ್ರಕ್ಕೆ ನಿರಾಳ, ಮರುಪರಿಶೀಲನಾ ಅರ್ಜಿ ತಿರಸ್ಕರಿಸಿದ ಸುಪ್ರೀಂ

ನವದೆಹಲಿ: ರಫೇಲ್ ಪ್ರಕರಣದಲ್ಲಿ ಸರ್ಕಾರಕ್ಕೆ ನೀಡಿರುವ ಕ್ಲೀನ್ ಚಿಟ್ ಪ್ರಶ್ನಿಸಿ ಸಲ್ಲಿಕೆಯಾಗಿರುವ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್​ ತಿರಸ್ಕಕರಿಸಿದೆ. ಈ ಮೂಲಕ ಕೇಂದ್ರ ಸರ್ಕಾರಕ್ಕೆ ಬಿಗ್​ ರಿಲೀಫ್​ ನೀಡಿದೆ.

“ಈ ಪ್ರಕರಣದಲ್ಲಿ ತನಿಖೆ ನಡೆಸಲು ಆದೇಶ ಹೊರಡಿಸುವ ಪೂರಕ ಅಂಶಗಳಿಲ್ಲ. ಹೀಗಾಗಿ ಕೋರ್ಟ್​ ಅರ್ಜಿಯನ್ನು ವಜಾ ಮಾಡುತ್ತಿದೇವೆ,” ಎಂದು ಸುಪ್ರೀಂಕೋರ್ಟ್​ ಹೇಳಿತು.

ರಫೇಲ್ ಯುದ್ಧವಿಮಾನ ಖರೀದಿ ಒಪ್ಪಂದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್​​ ಕ್ಲೀನ್ ಚಿಟ್ ನೀಡಿತ್ತು. ಈ ಬಗ್ಗೆ ಮರುಪರಿಶೀಲನಾ ಅರ್ಜಿಯ ಸಲ್ಲಿಕೆ ಆಗಿತ್ತು. ಇದರ ವಿಚಾರಣೆಯನ್ನು ಮೇ 10ರಂದು ಪೂರ್ಣಗೊಳಿಸಿದ್ದ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು.

ಸರ್ಕಾರಕ್ಕೆ ಕ್ಲೀನ್ ಚಿಟ್ ನೀಡಿರುವುದನ್ನು ಮರುಪರಿಶೀಲಿಸಬೇಕು ಎಂದು ಕೇಂದ್ರದ ಮಾಜಿ ಸಚಿವ ಯಶವಂತ್ ಸಿನ್ಹಾ, ಅರುಣ್ ಶೌರಿ ಮತ್ತು ವಕೀಲ ಪ್ರಶಾಂತ್ ಭೂಷಣ್ ಅರ್ಜೀ ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೊಯ್ ಮತ್ತು ನ್ಯಾಯಮೂರ್ತಿಗಳಾದ ಎಸ್​.ಕೆ.ಕೌಲ್, ಕೆ.ಎಂ.ಜೋಸೆಫ್ ಅವರಿದ್ದ ನ್ಯಾಯಪೀಠ ತೀರ್ಪನ್ನು ನೀಡಿದೆ.

ರಫೇಲ್ ಖರೀದಿ ಒಪ್ಪಂದದಲ್ಲಿ ಅಕ್ರಮ ನಡೆದಿದ್ದು, ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್ 2018ರ ಡಿಸೆಂಬರ್ 14ರಂದು ವಜಾಗೊಳಿಸಿತ್ತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ