ವಿಶ್ವೇಶ ತೀರ್ಥ ಸ್ವಾಮೀಜಿ ಅವರ ನಿಧನ-ತೀವ್ರ ಸಂತಾಪ ವ್ಯಕ್ತಪಡಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ

ನವದೆಹಲಿ, ಡಿ.29-ಉಡುಪಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಶ್ರೀಗಳು ಸೇವೆ ಮತ್ತು ಆಧ್ಯಾತ್ಮದ ಶಕ್ತಿ ಕೇಂದ್ರವಾಗಿದ್ದರು ಎಂದು ಮೋದಿ ಪ್ರಶಂಸಿಸಿದ್ದಾರೆ.

ಉಡುಪಿ ಲಕ್ಷಾಂತರ ಭಕ್ತರ ಹೃನ್ಮನಗಳಲ್ಲಿ ಚಿರಸ್ಥಾಯಿಯಾಗಿ ಉಳಿದಿದೆ. ಈ ಭಕ್ತಕೋಟಿಗೆ ಶ್ರೀಗಳು ಸದಾ ದಾರಿದೀಪವಾಗಿದ್ದರು ಎಂದು ಪ್ರಧಾನಿ ಗುಣಗಾನ ಮಾಡಿದ್ದಾರೆ.

ಮನುಕುಲ ಸೇವೆ ಮತ್ತು ಆಧ್ಯಾತ್ಮಿಕತೆಯ ಶಕ್ತಿಕೇಂದ್ರವಾಗಿದ್ದ ಅವರು, ಸಮಾಜ ಸೇವೆಗೆ ಮತ್ತು ಧಾರ್ಮಿಕ ಕೈಂಕರ್ಯಗಳಲ್ಲಿ ಮುಂಚೂಣಿಯಲ್ಲಿದ್ದರು ಎಂದು ಬಣ್ಣಿಸಿದ್ದಾರೆ.

ಅನೇಕ ಸಂದರ್ಭದಲ್ಲಿ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದು ಅವರೊಂದಿಗೆ ಆಧ್ಯಾತ್ಮಿಕ ವಿಚಾರಗಳನ್ನು ಹಂಚಿಕೊಳ್ಳುವ ಅವಕಾಶ ನನಗೆ ಲಭಿಸಿತು. ಇತ್ತೀಚೆಗೆ ಗುರು ಪೂರ್ಣಿಮಾ ಸಂದರ್ಭದಲ್ಲಿ ನಾನು ಅವರನ್ನು ಭೇಟಿ ಮಾಡಿರುವುದು ಅವಿಸ್ಮರಣೀಯ ಎಂದು ಮೋದಿ ಹೇಳಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ