ಪ್ರಧಾನಿ ಆಂದ್ರಪ್ರದೇಶದ ಜನರ ಹಣ ಕದ್ದು ಅಂಬಾನಿಗೆ ಕೊಟ್ಟಿದ್ದಾರೆ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ

ನವದೆಹಲಿ, ಫೆ.11-ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನಕ್ಕಾಗಿ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಆಂಧ್ರ ಮುಖ್ಯಮಂತ್ರಿ ಮತ್ತು ತೆಲುಗು ದೇಶಂ ಪಾರ್ಟಿ(ಟಿಡಿಪಿ) ನಾಯಕ ಎನ್. ಚಂದ್ರಬಾಬು ನಾಯ್ಡು ಅವರಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ.

ಪ್ರಧಾನಿ ಅವರು ಆಂಧ್ರಪ್ರದೇಶದ ಜನರ ಹಣವನ್ನು ಕದ್ದು ಅದನ್ನು ಉದ್ಯಮಿ ಅನಿಲ್ ಅಂಬಾನಿಗೆ ಕೊಟ್ಟಿದ್ದಾರೆ ಎಂದು ರಾಹುಲ್ ಆರೋಪಿಸಿದರು.

ದೆಹಲಿಯ ಆಂಧ್ರಭವನದಲ್ಲಿ ಪ್ರತಿಭಟನೆ ನಡೆಸುತ್ತಿರುವ ಚಂದ್ರಬಾಬು ನಾಯ್ಡು ಅವರಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ ಮಾತನಾಡಿದ ರಾಹುಲ್, ಪ್ರಧಾನಿ ನರೇಂದ್ರ ಮೋದಿ ಎಲ್ಲೇ ಹೋಗಲಿ ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲಾಗಿದೆ. ಅಗತ್ಯಕ್ಕಿಂತ ಹೆಚ್ಚು ಹಣಕಾಸು ನೆರವು ನೀಡಲಾಗಿದೆ ಎಂದು ಸುಳ್ಳು ಹೇಳುತ್ತಾರೆ ಎಂದು ಟೀಕಿಸಿದರು.

ನಾನು ಈ ಸಂದರ್ಭದಲ್ಲಿ ಸ್ಪಷ್ಟಪಡಿಸುವುದೇನೆಂದರೆ ಎಲ್ಲರೂ ಒಗ್ಗೂಡಿದ್ದೇವೆ. ನಾವೆಲ್ಲರೂ ಖಂಡಿತಾ ಬಿಜೆಪಿಯನ್ನು ಸೋಲಿಸಿ ಮೋದಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ರಾಹುಲ್ ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ